Home ಟಾಪ್ ಸುದ್ದಿಗಳು 11 ವಿಧೇಯಕಗಳನ್ನು ವಾಪಸ್‌ ಕಳಿಸಿದ ರಾಜ್ಯಪಾಲರು: ಕಿಡಿಗಾರಿದ ಕೈ ನಾಯಕರು

11 ವಿಧೇಯಕಗಳನ್ನು ವಾಪಸ್‌ ಕಳಿಸಿದ ರಾಜ್ಯಪಾಲರು: ಕಿಡಿಗಾರಿದ ಕೈ ನಾಯಕರು

ಬೆಂಗಳೂರು: 11 ವಿಧೇಯಕಗಳನ್ನು ರಾಜ್ಯಪಾಲರು ವಾಪಸ್‌ ಕಳಿಸಿ ವಿರೋಧ ಪಕ್ಷದ ನಾಯಕರಂತೆ ವರ್ತಿಸುತ್ತಿದ್ದಾರೆ ಎಂದು ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸಾರ್ವಜನಿಕ ಭ್ರಷ್ಟಾಚಾರ ತಡೆ ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ, ಕರ್ನಾಟಕ ಟೌನ್‌ ಆಂಡ್‌ ಕಂಟ್ರೀ ಪ್ಲಾನಿಂಗ್‌ ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ಅನರ್ಹತೆ ತಡೆ ವಿಧೇಯಕ, ಕರ್ನಾಟಕ ಪುರಸಭಗಳು ಮತ್ತು ಇತರೇ ಕೆಲವು ಕಾನೂನು ವಿಧೇಯಕ, ಕರ್ನಾಟಕ ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ ಸಂಸ್ಕೃತಿ ಪ್ರದರ್ಶನ ಪ್ರಾಧಿಕಾರ ವಿಧೇಯಕ, ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕಗಳನ್ನು ರಾಜ್ಯಪಾಲರು ಇದುವರೆಗೆ ವಾಪಸ್‌ ಮಾಡಿದ್ದಾರೆ. ಈ ಕ್ರಮ ಸರಿಯಲ್ಲ ಎಂದು ಕಾಂಗ್ರೆಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಶಾಸಕರಾದ ಮಂಜುನಾಥ ಭಂಡಾರಿ, ಎಸ್.ರವಿ, ಅನಿಲ್ ಕುಮಾರ್‌, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲ್ ಗೌಡ ಪಾಟೀಲ್‌, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ , ಡಿಟಿ ಶ್ರೀನಿವಾಸ, ಶರಣಗೌಡ ಪಾಟೀಲ್‌, ಭೀಮರಾವ್‌ ಪಾಟಿಲ. ತಿಪ್ಪಣ್ಣಾ ಕಮಕನೂರು ಅವರು ಜಂಟಿ ಪತ್ರಿಕಾ ಹೇಳಿಕೆ ನೀಡಿ, ರಾಜ್ಯಪಾಲರ ನಡೆಯ ಬಗ್ಗೆ ಧ್ವನಿ ಎತ್ತಿದ್ದಾರೆ.

ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಮಸೂದೆಗಳು ಅಂಗೀಕಾರವಾಗಿದ್ದರೂ ಕಾಯ್ದೆಯಲ್ಲಿ ಲೋಪದೋಷಗಳಿದ್ದರೆ, ಸ್ಪಷ್ಟನೆ ಕೇಳುವ ಅಧಿಕಾರ ರಾಜ್ಯಪಾಲರಿಗಿದೆ. ಆದರೆ, ವಿರೋಧಪಕ್ಷದವರು ವಿರೋಧಿಸಿದ್ದಾರೆ ಎಂಬ ಕಾರಣಕ್ಕೆ ಮಸೂದೆಗಳನ್ನು ವಾಪಸ್‌ ಕಳಿಸುವುದು ಸರಿಯಾದ ಕ್ರಮವಲ್ಲ. ಕಾಲಕಾಲಕ್ಕೆ ಕಾನೂನು ತಿದ್ದುಪಡಿ ಮಾಡುವ ಅವಕಾಶವನ್ನು ಸಂವಿಧಾನವೇ ನೀಡಿದೆ. ಜನಪ್ರತಿನಿಧಿಗಳು, ಬಹುಮತದ ಸರ್ಕಾರ ಶಾಸನ ರೂಪಿಸುತ್ತದೆ. ಅದು, ಕೆಳಮನೆ, ಮೇಲ್ಮನೆಯಲ್ಲಿ ಚರ್ಚೆಯಾಗಿ ಅಂಗೀಕಾರವಾಗಬೇಕು. ಅದನ್ನು ರಾಜ್ಯಪಾಲರು ತಮ್ಮ ಅಂಕಿತದೊಂದಿಗೆ ಅಂಗೀಕರಿಸಬೇಕು, ನಂತರ ಕಾಯ್ದೆ ಜಾರಿಯಾಗಬೇಕು ಎಂಬುದು ಕ್ರಮ. ಅದಕ್ಕೆ ಅಡ್ಡಿಪಡಿಸುವುದು ಸಮಂಜಸವಲ್ಲ. ಈ ರೀತಿ ಮಾಡುವುದರಿಂದ ಶಾಸಕ ಸಭೆಗಳ ಮಹತ್ವ ಕಡಿಮೆ ಆಗುತ್ತದೆ. ಒಕ್ಕೂಟದ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಇದರಲ್ಲಿ ರಾಜಕೀಯದ ದುರುದ್ದೇಶ ಕಾಣುತ್ತದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

Join Whatsapp
Exit mobile version