ಗೋ ಹತ್ಯೆ ನಿಷೇಧ ಕಾಯ್ದೆಯ ಕಲಂ 5ರ ಜಾರಿಗೆ ಅನುಮತಿ ನೀಡಿದ ಹೈಕೋರ್ಟ್

Prasthutha|

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ರ ಕಲಂ 5ನ್ನು ಜಾರಿಗೊಳಿಸಲು ಹೈಕೋರ್ಟ್ ಸಮ್ಮತಿ ನೀಡಿದೆ. ಕರ್ನಾಟಕ ಹೈಕೋರ್ಟ್ ಜನವರಿ 21ರ ತನ್ನ ಆದೇಶದಲ್ಲಿ ಬದಲಾವಣೆ ಮಾಡಿ, ಜಾನುವಾರು ಸಾಗಾಟದ ಮೇಲಿನ ನಿರ್ಬಂಧವನ್ನು ಮಾನ್ಯ ಮಾಡಿದೆ.

- Advertisement -

ಅದು ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿದೆ.
ಗೋಹತ್ಯೆ ನಿಷೇಧ ಕಾಯ್ದೆ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಆರೀಫ್ ಜಮೀಲ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ಒಟ್ಟು ಜನರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅವರ ನೇತೃತ್ವದ ಪೀಠ ನಡೆಸಿತು.

ಕಾಯಿದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಮುಹಮ್ಮದ್‌ ಆರೀಫ್‌ ಜಮೀಲ್‌ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

- Advertisement -

ವಿಚಾರಣೆ ಆರಂಭವಾಗುತ್ತಿದ್ದಂತೆ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಅವರು “2021ರ ಜನವರಿ 20ರಂದು ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಕಾಯಿದೆ ಸೆಕ್ಷನ್ 5ರಡಿ ನಿಯಮ ರೂಪಿಸಿ ಅವುಗಳನ್ನು ಜಾರಿಗೆ ತರುವವರೆಗೆ ಯಾವುದೇ ವ್ಯಕ್ತಿಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಾಲಯವು ಸರ್ಕಾರವನ್ನು ನಿರ್ಬಂಧಿಸಿತ್ತು. ನ್ಯಾಯಾಲಯದ ಆದೇಶದಂತೆ ಕಾಯಿದೆಯ ಸೆಕ್ಷನ್‌ 5ರ ಜಾನುವಾರು ಸಾಗಣೆ 2021ರ ನಿಯಮಗಳನ್ನು ರೂಪಿಸಿರುವುದರಿಂದ ಕಾಯಿದೆಯ ಸೆಕ್ಷನ್‌ 5 ಅನ್ನು ಜಾರಿ ಮಾಡುವ ಸಂಬಂಧ ನ್ಯಾಯಾಲಯದ ಹಿಂದಿನ ಆದೇಶದಲ್ಲಿ ಮಾರ್ಪಾಡು ಮಾಡಬೇಕು” ಎಂದು ಕೋರಿದರು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲರು “ಕಾಯಿದೆಯ ಸಿಂಧುತ್ವವನ್ನು ಪ್ರಶ್ನಿಸಿದ್ದು, ಕಾಯಿದೆ ಮತ್ತು ನಿಯಮಗಳು ಜಾರಿ ಮಾಡುವುದರಿಂದ ನಿರ್ದಿಷ್ಟ ಸಮುದಾಯದ ಕುರಿತು ಪೂರ್ವಾಗ್ರಹ ಉಂಟು ಮಾಡಲಿದೆ. ಹೀಗಾಗಿ, ಅದಕ್ಕೆ ಅನುಮತಿಸಬಾರದು” ಎಂದು ಆಕ್ಷೇಪಿಸಿದರು.

ನ್ಯಾಯಾಲಯದ ಆದೇಶದ ತೆರವಿಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಮನವಿ ಮತ್ತು ಅದಕ್ಕೆ ಅರ್ಜಿದಾರರು ಸಲ್ಲಿಸಿರುವ ಆಕ್ಷೇಪಣೆಯನ್ನು ಪೀಠವು ಪರಿಗಣಿಸಿದೆ.

ಇದನ್ನು ಆದೇಶದಲ್ಲಿ ದಾಖಲಿಸಿಕೊಂಡ ನ್ಯಾಯಾಲಯವು “ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಕಾಯಿದೆ- 2020 ಅನ್ನು 2021ರ ಫೆಬ್ರವರಿ 15ರಂದು ಜಾರಿ ಮಾಡಿದ್ದು, 2021ರ ಮೇ 24ರಂದು ಅಧಿಸೂಚನೆ ಹೊರಡಿಸಲಾಗಿದೆ. 2021ರ ಮೇ 25ರಂದು ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಈಗ ಕಾಯಿದೆ ಸೆಕ್ಷನ್‌ 5ರ ಅಡಿ ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣೆ (ಪ್ರಾಣಿಗಳ ಸಾಗಣೆ 2021ರ ನಿಯಮಗಳು) ರೂಪಿಸಲಾಗಿದೆ. ಈಗ ಸರ್ಕಾರವು ಸೆಕ್ಷನ್‌ 5 ಮತ್ತು ಅದರ ಅಡಿ ರೂಪಿಸಿರುವ ನಿಯಮ ಜಾರಿಗೊಳಿಸುವ ಸಂಬಂಧ ನ್ಯಾಯಾಲಯದ ಅನುಮತಿ ಕೋರಿದ್ದು, ಈ ಸಂಬಂಧ 2021ರ ಜನವರಿ 20ರ ಆದೇಶದಲ್ಲಿ ಮಾರ್ಪಾಡು ಮಾಡುವಂತೆ ಕೋರಿರುವುದಕ್ಕೆ ಅನುಮತಿಸಲಾಗಿದೆ. ಇದು ಮನವಿಯ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ” ಎಂದು ಪೀಠವು ಆದೇಶಿಸಿ, ವಿಚಾರಣೆ ಮುಂದೂಡಿದೆ.

ಯಾವುದೇ ಒಬ್ಬ ವ್ಯಕ್ತಿ ಯಾವುದೇ ಜಾನುವಾರನ್ನು ರಾಜ್ಯದೊಳಗಿನ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹತ್ಯೆ ಮಾಡುವ ಉದ್ದೇಶದಿಂದ ಸಾಗಾಣಿಕ ಮಾಡತಕ್ಕದ್ದಲ್ಲ ಅಥವಾ ಸಾಗಾಣಿಕೆಗೆ ಕೊಡತಕ್ಕದ್ದಲ್ಲ ಅಥವಾ ಯಾವುದೇ ರೀತಿಯಲ್ಲೂ ಸಾಗಿಸುವಂತೆ ಮಾಡತಕ್ಕದ್ದಲ್ಲ. ಆದರೆ ಈ ಪ್ರಕರಣದ ಅಡಿಯಲ್ಲಿ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರವು ನಿಯಮಿಸಿದ ವಿಧಾನದಲ್ಲಿ ನಂಬಿಕಸ್ಥ ಕೃಷಿ ಮತ್ತು ಪಶುಸಂಗೋಪನೆಯ ಉದ್ದೇಶಕ್ಕಾಗಿ ಯಾವುದೇ ಜಾನುವಾರು ಸಾಗಾಣಿಕೆಯನ್ನು ಅಪರಾಧವೆಂದು ಅರ್ಥೈಸತಕ್ಕದ್ದಲ್ಲ ಎಂದು ಕಲಂ 5 ಹೇಳುತ್ತದೆ.

Join Whatsapp