Home ಟಾಪ್ ಸುದ್ದಿಗಳು ಸರ್ಕಾರಿ ಭೂಮಿ ಒತ್ತುವರಿ ತೆರವು ಗಂಭೀರವಾಗಿ ಪರಿಗಣಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಸರ್ಕಾರಿ ಭೂಮಿ ಒತ್ತುವರಿ ತೆರವು ಗಂಭೀರವಾಗಿ ಪರಿಗಣಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಆ ಜಾಗದಲ್ಲಿ ದೊಡ್ಡ ದೊಡ್ಡ ಕಟ್ಟಡಗಳನ್ನು ನಿರ್ಮಿಸಿರುವ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಂತಹ ಕಟ್ಟಡಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಜತೆಗೆ ಇಂತಹ ಒತ್ತುವರಿಗೆ ಅವಕಾಶ ಕೊಟ್ಟ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್‌ ಸರಕಾರಕ್ಕೆ ತಾಕೀತು ಮಾಡಿದೆ.

ರಾಜ್ಯದಲ್ಲಿ ನೂರಾರು ಅತಿಕ್ರಮಣ, ಒತ್ತುವರಿ ಪ್ರಕರಣಗಳಿದ್ದು, ಸರಕಾರ ಅವುಗಳ ಬಗ್ಗೆ ಗಮನ ಹರಿಸಬೇಕು ಎಂದು ತಾಕೀತು ಮಾಡಿದೆ. ಒತ್ತುವರಿ ತೆರವು ಸಂಬಂಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಸಿಜೆ ಪ್ರಸನ್ನ ಬಿ ವರಾಳೆ ಹಾಗೂ ನ್ಯಾ.ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯಪೀಠ ಈ ಆದೇಶ ಮಾಡಿದೆ.

ಕ್ರಮ ಕೈಗೊಂಡಿರುವ ಬಗ್ಗೆ 4 ವಾರಗಳಲ್ಲಿಸಮಗ್ರ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಮತ್ತು ಬೆಂಗಳೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌, ವಿಶೇಷ ಭೂಸ್ವಾಧೀನ ಅಧಿಕಾರಿ ವಿಚಾರಣೆ ವೇಳೆ ಖುದ್ದು ಹಾಜರಿದ್ದರು. ಸರ್ಕಾರಿ ವಕೀಲರು, ಕಳೆದ ಬಾರಿ ವಿಚಾರಣೆ ವೇಳೆ ನ್ಯಾಯಾಲಯ ನೀಡಿದ್ದ ನಿರ್ದೇಶನದಂತೆ 1.09 ಎಕರೆ ಸರಕಾರಿ ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಕಟ್ಟಡದ ಮಾಲೀಕರಿಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ನೋಟಿಸ್‌ ನೀಡಲಾಗಿದೆ.

ಆ ಕುರಿತು ಇನ್ನೂ ಪ್ರತಿವಾದಿಗಳು ಉತ್ತರ ನೀಡಿಲ್ಲ. ಪ್ರಕರಣದ ಎಲ್ಲ ಮಾಹಿತಿಯನ್ನು ವರದಿಯ ರೂಪದಲ್ಲಿ ಸಲ್ಲಿಸಲಾಗಿದೆ ಎಂದು ವಿವರಿಸಿದರು. ಒತ್ತುವರಿ ತೆರವು ಕಾರ್ಯದ ಜತೆಗೆ ತಪ್ಪಿತಸ್ಥ ಅಧಿಕಾರಿಗಳನ್ನು ಗುರುತಿಸಿ ಅವರಿಂದ ದಂಡ ವಸೂಲು ಮಾಡಲು ಸರ್ಕಾರ ಮುಂದಾಗಬೇಕು. ಸರ್ಕಾರಿ ಜಮೀನು ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿದವರ ವಿರುದ್ಧವೂ ಕ್ರಮ ಕೈಗೊಳ್ಖಬೇಕೆಂದು ತಾಕೀತು ಮಾಡಿದೆ.

Join Whatsapp
Exit mobile version