Home ಜಾಲತಾಣದಿಂದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಅವಿರೋಧ ಆಯ್ಕೆ ಆಗಿದ್ದಾರೆ.

ಕಳೆದ ವಿಧಾನಸಭೆ ಅವಧಿಯಲ್ಲೂ ಮಾಜಿ ಮುಖ್ಯಮಂತ್ರಿ ಅವರೇ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರಾಗಿ ಸದನದಲ್ಲಿ ಪಕ್ಷವನ್ನು ಮುನ್ನಡೆಸಿದ್ದರು.

ವಿಧಾನಸಭೆ ಸಭಾಧ್ಯಕ್ಷರ ಕಚೇರಿಯಲ್ಲಿ ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಅವರಿಂದ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಅವರು ತಮ್ಮ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿದರು.

ಈ ಸಭೆಯಲ್ಲಿ ಕುಮಾರಸ್ವಾಮಿ ಅವರು, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರೂ ಸೇರಿದಂತೆ ಪಕ್ಷದ ಎಲ್ಲ 19 ನೂತನ ಶಾಸಕರು, ವಿಧಾನ ಪರಿಷತ್ ನ ಎಲ್ಲಾ ಸದಸ್ಯರು ಹಾಜರಿದ್ದರು.

ಸದನದಲ್ಲಿ ವಿಷಯಾಧಾರಿತ ಹೋರಾಟ:

ವಿಧಾನಮಂಡಲದಲ್ಲಿ ಜನಪರವಾಗಿ, ವಿಷಯಾಧಾರಿತವಾಗಿ ಹೋರಾಟ ಮಾಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಪಕ್ಷವು ಚುನಾವಣೆಯಲ್ಲಿ ಸೋತಿದೆ. ಸೋತಿದೆ ಎಂದಾಕ್ಷಣ ಎದೆಗುಂದುವ ಅಗತ್ಯ ಇಲ್ಲ. ಇನ್ನೂ ಕೆಚ್ಚೆದೆಯಿಂದ ಪಕ್ಷವನ್ನು ಕಟ್ಟಬೇಕಿದೆ. ತಳಮಟ್ಟದಲ್ಲಿ ಸಂಘಟನೆಯನ್ನು ಬಲಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಚುನಾಯಿತ ಶಾಸಕರು, ಸ್ಪರ್ಧೆ ಮಾಡಿದ್ದ ಎಲ್ಲಾ ಅಭ್ಯರ್ಥಿಗಳು ಕೆಲಸ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಿತವಚನ ಹೇಳಿದರು.

ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಅವರು ಸಭಾಧ್ಯಕ್ಷರ ಕಚೇರಿಯಲ್ಲಿ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ತಮ್ಮನ್ನು ಗೆಲ್ಲಿಸಿದ ಚನ್ನಪಟ್ಟಣ ಕ್ಷೇತ್ರದ ಜನತೆಗೆ ಧನ್ಯವಾದ ಅರ್ಪಸಿದರು.

Join Whatsapp
Exit mobile version