ದೇವರಾಜ ಮಾರುಕಟ್ಟೆ ನೆಲಸಮ ಮಾಡಲು ಪಾರಂಪರಿಕ ಸಮಿತಿ ತೀರ್ಮಾನ; ವರ್ತಕರ ಪ್ರತಿಭಟನೆ

Prasthutha|

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ ನೆಲಸಮ ಮಾಡಲು ಪಾರಂಪರಿಕ ಸಮಿತಿ ಒಪ್ಪಿಗೆ ನೀಡಿದ್ದು,ಈ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆ ಸಮಿತಿ ಕಾರ್ಯಕರ್ತರು ಹೋರಾಟ ಆರಂಭಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -

ಮಾರುಕಟ್ಟೆ ಬಂದ್ ಮಾಡಿ ದೇವರಾಜ ಮಾರುಕಟ್ಟೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿರುವ ವರ್ತಕರು ಕಟ್ಟಡ ಉಳಿಸುವಂತೆ ಒತ್ತಾಯಿಸಿದ್ದಾರೆ. ದೇವರಾಜ ಮಾರುಕಟ್ಟೆ ಸಮಿತಿ ಹೋರಾಟಕ್ಕೆ ರಾಜವಂಶಸ್ಥ ಯದುವೀರ್ ಬೆಂಬಲ ಸೂಚಿಸಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿರುವ ರಾಜವಂಶಸ್ಥ ಯದುವೀರ್, ಮೈಸೂರು ಅರಮನೆ ಕಟ್ಟಿ 100 ವರ್ಷ  ಮೇಲಾಗಿದೆ ಎಂದು ಅರಮನೆ ಕೆಡವಿ ಬೇರೆ ಕಟ್ಟಲು ಆಗುತ್ತಾ..? ಮೈಸೂರಿನ ಸಂಸ್ಕೃತಿ ಪಾರಂಪರಿಕ ಕಟ್ಟಡಗಳ ಜೊತೆ ಬೆರೆತಿದೆ. ನೂರು ವರ್ಷ ಆಗಿದೆ ಎಂದು ಕಟ್ಟಡಗಳನ್ನು ಒಡೆಯುತ್ತಾ ಹೋದರೆ ಪಾರಂಪರಿಕತೆ ಉಳಿಯುತ್ತಾ..? ಎಂದು ಪ್ರಶ್ನಿಸಿದ್ದಾರೆ.

- Advertisement -

ಒಂದು ಪಾರಂಪರಿಕ ಕಟ್ಟಡ ಕೆಡವಿದ ಮೇಲೆ ಅದೇ ಮಾದರಿಯಲ್ಲಿ ಕಟ್ಟಿದರೂ ಕೂಡಾ ಆ ಕಟ್ಟಡಕ್ಕೆ ಹಳೆ ಇತಿಹಾಸ ಬರುವುದಿಲ್ಲ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಪಾರಂಪರಿಕ ಕಟ್ಟಡ ಉಳಿಸುವ ಹೊಸ ತಜ್ಞರ ಸಮಿತಿ ರಚನೆ ಮಾಡಬೇಕು. ಜನರ ಅಭಿಪ್ರಾಯಗಳಿಗೆ, ಭಾವನಗಳಿಗೆ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿ. ನಮ್ಮ ವಂಶದ ಖಾಸಗಿ ಆಸ್ತಿಗಳ ನವೀಕರಣ ಅದು ಬೇರೆ ವಿಚಾರ. ಆದರೆ ಸಾರ್ವಜನಿಕರ ಕಟ್ಟಡಗಳದ್ದು ಬೇರೆಯ ವಿಚಾರ. ಅರಮನೆಯ ಆಸ್ತಿಯ ವಿಚಾರಕ್ಕೂ ಸಾರ್ವಜನಿಕರ ಪಾರಂಪರಿಕ ಕಟ್ಟಡಗಳಿಗೂ ಸಂಬಂಧ ಕಲ್ಪಿಸಬೇಡಿ ಎಂದು ಹೇಳಿದ್ದಾರೆ.

Join Whatsapp