ಶಾಹೀನ್ ಶಿಕ್ಷಣ ಸಂಸ್ಥೆ ಪ್ರಕರಣ | ಪೊಲೀಸರ ವಿರುದ್ಧ ಇಲಾಖಾ ವಿಚಾರಣೆ ನಡೆಸಲು ಹೈಕೋರ್ಟ್ ಸೂಚನೆ

Prasthutha|

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಾಟಕ ಪ್ರದರ್ಶನ ಮಾಡಿದ್ದ ಮಕ್ಕಳನ್ನು ವಿಚಾರಣೆ ನಡೆಸುವ ವೇಳೆ ಬೀದರ್‌ನ ಶಾಹೀನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗಿರುವ ಸಂಬಂಧ ಇಲಾಖಾ ವಿಚಾರಣೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ತಿಳಿಸಲಾಗಿದೆ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಾಟಕ ಪ್ರದರ್ಶನ ಮಾಡಿದ್ದ ಮಕ್ಕಳನ್ನು ವಿಚಾರಣೆ ನಡೆಸುವ ವೇಳೆ ಪೊಲೀಸರು ಆಯುಧಗಳ ಸಹಿತ ಸಮವಸ್ತ್ರ ಧರಿಸಿದ್ದನ್ನು ಅರ್ಜಿದಾರರು ಪ್ರಶ್ನಿಸಿದ್ದರು.

- Advertisement -

ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಸಿದ ಸರ್ಕಾರದ ಪರ ವಕೀಲರು, ವಿದ್ಯಾರ್ಥಿಗಳನ್ನು ಪ್ರಶ್ನಿಸುವಾಗ ತನಿಖಾಧಿಕಾರಿ ಸಮವಸ್ತ್ರ ಧರಿಸಿರಲಿಲ್ಲ ಎಂದು ತಿಳಿಸಿದ್ದಾರೆ. ಪರಿಶೀಲನೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮುರ್ತಿ ಸತೀಶ್‌ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಇಲಾಖಾ ವಿಚಾರಣೆ ನಡೆಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಹೊಸ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶನ ನೀಡಿತು. ವಿಚಾರಣೆಯನ್ನು ಅ.21ಕ್ಕೆ ಮುಂದೂಡಿತು.

2020 ಜ.21ರಂದು ಶಾಲಾ ಆವರಣದಲ್ಲಿ ನಾಟಕ ಪ್ರದರ್ಶನ ಮಾಡಲಾಗಿತ್ತು. ಈ ಸಂಬಂಧ ಸಲ್ಲಿಕೆಯಾದ ದೂರು ಆಧರಿಸಿ ಆಡಳಿತ ಮಂಡಳಿ ವಿರುದ್ಧ ದೇಶದ್ರೋಹ ಪ್ರಕರಣವನ್ನು ಪೊಲೀಸರು ದಾಖಲಿಸಿ ವಿದ್ಯಾರ್ಥಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು.ವಿಚಾರಣೆಯನ್ನು ಪ್ರಶ್ನಿಸಿ ವಕೀಲರಾದ ನಯನಾ ಜ್ಯೋತಿ ಮತ್ತು ದಕ್ಷಿಣ ಭಾರತ ಮಾನವ ಹಕ್ಕುಗಳ ಶಿಕ್ಷಣ ಮತ್ತು ಮೇಲ್ವಿಚಾರಣಾ ಸಂಸ್ಥೆ ಅರ್ಜಿ ಸಲ್ಲಿಸಿತ್ತು. ಬಾಲನ್ಯಾಯ ಕಾಯ್ದೆ ಉಲ್ಲಂಘಿಸಿರುವ ಪೊಲೀಸರ ವಿರುದ್ಧ ತನಿಖೆಗೆ ನಿರ್ದೇಶನ ನೀಡಬೇಕು ಅರ್ಜಿದಾರರು ಕೋರಿದ್ದರು.

Join Whatsapp