ಹಿಜಾಬ್ ಗೆ ಕೇಸರಿ ಶಾಲಿನ ಕಿರಿಕ್ | ಕ್ರಿಯೆಗೆ ಪ್ರತಿಕ್ರಿಯೆ ಎಂದ ಸಚಿವ ಕೋಟ!

Prasthutha|

- Advertisement -

ಬೆಂಗಳೂರು: ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬರುವುದನ್ನು ವಿರೋಧಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಿರಿಕ್ ಮಾಡುವುದನ್ನು ಸಮರ್ಥಿಸಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕ್ರಿಯೆಗೆ ಪ್ರತಿಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರತಿಕ್ರಿಯೆಯ ರೂಪದಲ್ಲಿ ಕೆಲವರು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಬರಲು ಅವಕಾಶ ನೀಡಬೇಕೆಂಬ ಬೇಡಿಕೆ ವಿಷಯದಲ್ಲಿ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ನಡೆಯುತ್ತಿದೆ ಎಂದಿದ್ದಾರೆ.

- Advertisement -

‘ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವುದು ಕಡ್ಡಾಯ. ಆದರೆ, ಕೆಲವರು ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಸಮಾಜ ಒಡೆಯಲು ಕುತಂತ್ರ ರೂಪಿಸಿದ್ದಾರೆ. ಸರ್ಕಾರ ಇದನ್ನು ಸಹಿಸುವುದಿಲ್ಲ’ ಎಂದರು.

ಒಂದೂವರೆ ವರ್ಷದಿಂದ ಯಾವ ಸಮಸ್ಯೆಯೂ ಇರಲಿಲ್ಲ. ಹೊರಗಿನ ಮತಾಂಧ ಶಕ್ತಿಗಳ ಕೈವಾಡದಿಂದ ಈಗ ಸಮಸ್ಯೆ ಉಂಟಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

‘ಹಿಜಾಬ್ ಧರಿಸುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಿಗೆ ಬರುವುದು ತಪ್ಪಲ್ಲವೆ? ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಒಂದು ತಪ್ಪಾದರೆ ಇನ್ನೊಂದು ಕೂಡ ತಪ್ಪು. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಅಷ್ಟೇ ಇದು’ ಎಂದರು.

Join Whatsapp