ನಾನು ಏನೂ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ನಾನ್ಯಾಕೆ ರಾಜೀನಾಮೆ ಕೊಡಬೇಕು, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.

- Advertisement -


ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ. ಸಿಎಂ ಸ್ಥಾನದಲ್ಲಿ ಮುಂದುವರಿಯಲು ಮುಜುಗರವಾಗುವುದಿಲ್ಲವೇ ಎಂದು ಕೇಳಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ, ಗೋಧ್ರಾ ಹತ್ಯಾಕಾಂಡ ಸಮಯದಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಇಂದಿನ ಪ್ರಧಾನಿ ನರೇಂದ್ರ ಮೋದಿಯವರು ರಾಜೀನಾಮೆ ಕೊಟ್ಟಿದ್ದರೇ, ಇಂದು ಮೋದಿ ಸರ್ಕಾರದ ಸಂಪುಟದಲ್ಲಿ ಸಚಿವರಾಗಿರುವ ಕುಮಾರಸ್ವಾಮಿ ಮೇಲೆ ಆರೋಪಗಳಿವೆಯಲ್ಲವೇ, ಅವರು ಜಾಮೀನು ಮೇಲೆ ಇದ್ದಾರೆ ಅವರು ರಾಜೀನಾಮೆ ನೀಡಿದ್ದಾರೆಯೇ, ಹಾಗಾದರೆ ಅವರಿಗೆ ಮುಜುಗರವಾಗುವುದಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ನನ್ನ ರಾಜೀನಾಮೆ ಕೇಳುವವರು ಕುಮಾರಸ್ವಾಮಿಗೆ ರಾಜೀನಾಮೆ ಕೊಡಿಸಲಿ, ಅವರು ಯಾರ ಮಂತ್ರಿಮಂಡಲದಲ್ಲಿ, ಯಾವ ಪಕ್ಷದ ಸರ್ಕಾರದಲ್ಲಿ ಇರುವುದು ಹೇಳಿ, ಅವರು ಮೊದಲು ರಾಜೀನಾಮೆ ಕೊಡಬೇಕಲ್ಲವೇ ಎಂದು ಕೇಳಿದರು.



Join Whatsapp