ವರುಣಾ ಕ್ಷೇತ್ರದಿಂದ ಟಿಕೆಟ್ ನೀಡುವಂತೆ ಹೈಕಮಾಂಡ್’ಗೆ ಮನವಿ ಮಾಡಿದ್ದೇನೆ: ಸಿದ್ದರಾಮಯ್ಯ

Prasthutha|

ಚಿತ್ರದುರ್ಗ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಕೊನೆಗೂ ಅಂತಿಮ ತೀರ್ಮಾನ ಪ್ರಕಟಿಸಿದ್ದಾರೆ.
ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಕುಟುಂಬದ ಸದಸ್ಯರು ಸಲಹೆ ನೀಡಿದ್ದಾರೆ. ವರುಣಾದಿಂದ ಟಿಕೆಟ್‌ ನೀಡುವಂತೆ ಹೈಕಮಾಂಡ್’ಗೆ ಹೇಳಿದ್ದೇನೆ ಎಂದು ಹೇಳುವ ಮೂಲಕ ಈ ಬಗ್ಗೆ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಆಹ್ವಾನ ನೀಡಿರುವುದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
‘ಚುನಾವಣೆಗೆ ಸ್ಪರ್ಧಿಸುವಂತೆ ರಾಜ್ಯದ 25 ಕ್ಷೇತ್ರಗಳಿಂದ ಆಹ್ವಾನ ಬಂದಿದೆ. ಆ ಎಲ್ಲ ಕಡೆಯೂ ಸ್ಪರ್ಧಿಸಲು ಸಾಧ್ಯವಿಲ್ಲ. ವರುಣಾದಲ್ಲಿ ಸ್ಪರ್ಧಿಸುವುದು ಸೂಕ್ತ ಎಂಬುದಾಗಿ ಕುಟುಂಬ ಅಭಿಪ್ರಾಯಪಟ್ಟಿದೆ. ಮತ್ತೊಂದು ಕ್ಷೇತ್ರದಲ್ಲಿಯೂ ಸ್ಪರ್ಧಿಸುವಂತೆ ಕುಟುಂಬದ ಸದಸ್ಯರು ಸಲಹೆ ನೀಡಿದ್ದಾರೆ. ವರುಣಾ ಟಿಕೆಟ್‌ ಅಂತಿಮಗೊಳಿಸುವಂತೆ ಪಕ್ಷಕ್ಕೆ ತಿಳಿಸಿದ್ದೇನೆ. ನಿರ್ಧಾರ ಹೈಕಮಾಂಡ್’ಗೆ ಬಿಟ್ಟದ್ದು’ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Join Whatsapp