ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ: ರಾಹುಲ್ ಸದಸ್ಯತ್ವ ರದ್ದತಿಗೆ ಸಿದ್ದರಾಮಯ್ಯ ಕಿಡಿ

Prasthutha|


ಬೆಂಗಳೂರು: ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಶಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರಮೋದಿ, ಬಿಜೆಪಿ ಮತ್ತು ಎನ್ ಡಿ ಎ ಸರ್ಕಾರದ ವಿರುದ್ದ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ದ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ದ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ರಾಹುಲ್ ಗಾಂಧಿಯವರ ವಿರುದ್ದ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ದಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

Join Whatsapp