ಬಿಜೆಪಿ ತೊರೆದು, ಕಾಂಗ್ರೆಸ್ ಸೇರುತ್ತೇನೆ ಎಂಬುದು ಕೇವಲ ವದಂತಿ: ಸಚಿವ ಡಾ.ನಾರಾಯಣಗೌಡ

Prasthutha|

ಬೆಂಗಳೂರು: ಬಿಜೆಪಿ ತೊರೆದು, ಕಾಂಗ್ರೆಸ್ ಸೇರುತ್ತೇನೆ ಎಂಬುದು ಕೇವಲ ವದಂತಿ ಅಷ್ಟೇ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣ ಗೌಡ ಸ್ಪಷ್ಟಪಡಿಸಿದ್ದಾರೆ.

- Advertisement -

ಕೆ ಆರ್ ಪೇಟೆಯ ಹೊನ್ನೆನಹಳ್ಳಿಯಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರ ಕುರಿತು ಹೇಳಿರುವ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಕಾರ್ಯಕ್ರಮದಲ್ಲಿ ಸಾಂದರ್ಭಿಕವಾಗಿ ಸಿದ್ದರಾಮಯ್ಯರ ಬಗ್ಗೆ ಉಲ್ಲೇಖಿಸಲಾಯಿತು. ಅಂದ ಮಾತ್ರಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂದಲ್ಲ. ನನಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಸಮಾನ ಎದುರಾಳಿಗಳು ಎಂದು ಸಚಿವ ಡಾ.ನಾರಾಯಣ ಗೌಡ ತಿಳಿಸಿದ್ದಾರೆ.

ಕೆಆರ್ ಪೇಟೆಯಲ್ಲಿ ಕಮಲ ಅರಳಿಸುವ ಮೂಲಕ ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆದ ನನಗೆ ಪಕ್ಷ ಎಲ್ಲವನ್ನೂ ನೀಡಿದೆ. ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪರವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಎರಡ್ಮೂರು ಖಾತೆಗಳನ್ನು ನೀಡುವುದರ ಜೊತೆಗೆ ಕೆಆರ್ ಪೇಟೆ ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನವನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಡಬಲ್ ಎಂಜಿನ್ ಸರ್ಕಾರದಲ್ಲಿ ಯಡಿಯೂರಪ್ಪರವರ ಮಾರ್ಗದರ್ಶನ, ಬಸವರಾಜ ಬೊಮ್ಮಾಯಿರವರ ನಾಯಕತ್ವದಲ್ಲಿ ಕ್ಷೇತ್ರದ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಣ ತೊಡಲಾಗಿದೆ. ಮಂಡ್ಯ ಜಿಲ್ಲೆಯಾದ್ಯಂತ ಬಿಜೆಪಿಗೆ ಉತ್ತಮ ವಾತಾವರಣವಿದ್ದು, ಈ ಬಾರಿ ನಾಲ್ಕೈದು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ  ಅವರ ನಾಯಕತ್ವದಲ್ಲಿ, ಚುನಾವಣಾ ಚಾಣಕ್ಯ ಅಮಿತ್ ಶಾ ಅವರ ತಂತ್ರಗಾರಿಕೆಯಿಂದ ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಅತಿ ಹೆಚ್ಚು ಬಿಜೆಪಿ ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ – ಜೆಡಿಎಸ್ಗೆ ತಕ್ಕ ಪಾಠ ಕಲಿಸಲಾಗುತ್ತದೆ. ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಸಂಘಟಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ ಅಮಿತ್ ಶಾ ಅವರ ನೇತೃತ್ವದಲ್ಲಿ ಸಭೆಗಳನ್ನು ನಡೆಸಲಾಗಿದೆ. ಅಮಿತ್ ಶಾ ಅವರ ಎಂಟ್ರಿಯಿಂದ ಕಾಂಗ್ರೆಸ್-ಜೆಡಿಎಸ್ಗೆ ನಡುಕ ಶುರುವಾಗಿದೆ. ಆದುದರಿಂದ ರಾಜಕೀಯ ಕಾರ್ಯಕ್ರಮವಲ್ಲದ, ಸಮಾಜದ ಕಾರ್ಯಕ್ರಮದ ಭಾಷಣದಲ್ಲಿ ಸಾಂದರ್ಭಿಕವಾಗಿ ಹೇಳಿದ ಮಾತನ್ನೇ ರಾಜಕೀಯ ವಿರೋಧಿಗಳು ತಪ್ಪಾಗಿ ಬಿಂಬಿಸುವ ಮೂಲಕ ನಮ್ಮ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸಲು ಷಡ್ಯಂತ್ರ ಮಾಡುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಮಾತೇ ಇಲ್ಲ. ರಾಜಕೀಯ ವಿರೋಧಿಗಳು ಸೃಷ್ಟಿಸುತ್ತಿರುವ ಗೊಂದಲಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ನಮ್ಮ ರಾಜಕೀಯ ಎದುರಾಳಿಗಳಾದ ಕಾಂಗ್ರೆಸ್- ಜೆಡಿಎಸ್ ಎದುರಿಸಿ ಮಂಡ್ಯದಲ್ಲಿ ಬಿಜೆಪಿ ಭದ್ರವಾಗಿ ಬೇರೂರಲಿದೆ  ಎಂದು ಸಚಿವ ಡಾ.ನಾರಾಯಣಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp