ಅಕ್ಕಿ ಗ್ಯಾರಂಟಿಗೆ ದಿನಕ್ಕೊಂದು ನೆಪ : ಕಾಂಗ್ರೆಸ್ ವಿರುದ್ಧ ಹೆಚ್​​ಡಿ ಕುಮಾರಸ್ವಾಮಿ ಕಿಡಿ

Prasthutha|

ಬೆಂಗಳೂರು: ಅಕ್ಕಿ ಗ್ಯಾರಂಟಿ ಬಗ್ಗೆ ದಿನಕ್ಕೊಂದು ನೆಪ ಹೇಳುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​​​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಯಾರೋ ಚುನಾವಣಾ ತಂತ್ರಗಾರರ ಮಾತು ಕೇಳಿಕೊಂಡು ಗ್ಯಾರಂಟಿ ಘೋಷಣೆ ಮಾಡಿದಾಗ, ಯೋಜನೆ ಜಾರಿಗೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಅಕ್ಕಿ ಗ್ಯಾರಂಟಿ ಬಗ್ಗೆ ಇವರೇನು ಕೇಂದ್ರ ಸರಕಾರಕ್ಕೆ ಅರ್ಜಿ ಹಾಕಿದ್ರಾ? ಪೊಳ್ಳು ಭರವಸೆ ಕೊಟ್ಟು ಗ್ಯಾರಂಟಿ ಎಂದು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಎಷ್ಟು ಸರಿ?. ಸರಿ ತಪ್ಪು ಎನ್ನುವುದನ್ನು ನಾವು ಮಾಡಬೇಕಲ್ಲವೇ ಎಂದು ಅಭಿಪ್ರಾಯಪಟ್ಟರು.

ತಾನು ಎಸಗಿದ ಸ್ವಯಂಕೃತ ತಪ್ಪಿಗೆ ಕಾಂಗ್ರೆಸ್ ಪಕ್ಷವು ಕೇಂದ್ರ ಸರಕಾರ ಮೇಲೆ ಗೂಬೆ ಕೂರಿಸುತ್ತಾ ಜನರನ್ನು ಯಮಾರಿಸುತ್ತಿದೆ. ಕೇಂದ್ರ ಸರ್ಕಾರ ಯಾಕೆ ಅಕ್ಕಿ ಕೊಡಬೇಕು ನಿಮಗೆ? ಕೇಂದ್ರ ಸರ್ಕಾರಕ್ಕೆ ಅರ್ಜಿ ಹಾಕಿಕೊಂಡಿದ್ರಾ ನೀವು? ಯಾವನೋ ಬಂದು ಎಲೆಕ್ಷನ್ ಸ್ಟ್ರಾಟೆಜಿಸ್ಟ್ ಐಡಿಯಾ ಕೊಟ್ಟ ಅಂತ ನೀವು ಫ್ರೀ ಫ್ರೀ ಅಂದ್ರಿ. ಸಚಿವರ ಹೆಂಡ್ತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಎಂದು ಹೇಳಿ ಎಲ್ಲರೂ ಅರ್ಜಿ ಹಾಕಿಕೊಳ್ಳಬಹುದು ಎಂದ್ರಿ. ಈಗ ನೋಡಿದರೆ ಬೇರೆ ವರಸೆ ಶುರು ಮಾಡಿಕೊಂಡಿದ್ದೀರಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಗೃಹಜ್ಯೋತಿ ಕತ್ತಲಾಗಿ ಪರಿಣಮಿಸಿದೆ. ವಿದ್ಯುತ್ ಉಚಿತ ಕೊಡ್ತೀವಿ ಅಂತ ಹೇಳಿದವರು ಈಗಿನ ಪರಿಸ್ಥಿತಿಯನ್ನು ಅವಲೋಕನ ಮಾಡಬೇಕು. ವಿಟಿಯು ಉಪ ಕುಲಪತಿ ಬಾಯಿ ಬಡ್ಕೊತಿದ್ದಾರೆ. ವಿದ್ಯುತ್ ಬಿಲ್ ನೋಡಿ ಅವರು ಶಾಕ್​​ಗೆ ಗುರಿಯಾಗಿದ್ದಾರೆ. ಬಾಕಿ ಮೊತ್ತ ಕಂಡು ಬೇಸ್ತು ಬಿದ್ದಿದ್ದಾರೆ. ಇನ್ನೆಷ್ಟು ಶಾಕ್ ಕೊಡುತ್ತೀರಿ ಎಂದು ಮಾಜಿ ಮುಖ್ಯಮಂತ್ರಿ ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಎರಡು ರಾಷ್ಟ್ರೀಯ ಪಕ್ಷಗಳ ಇಂದಿನ ನಡವಳಿಕೆ ನೋಡಿದಾಗ ತೀವ್ರ ಬೇಸರವಾಗುತ್ತಿದೆ ಎಂದ ಅವರು, ರಾಜ್ಯದ ಜನತೆ ಅವರನ್ನು ನಂಬಿ ಮತ ಕೊಟ್ಟಿದ್ದಾರೆ. ಜನತೆ ಎರಡು ಪಕ್ಷಗಳ ನಾಟಕ ನೋಡಬೇಕಾಗಿದೆ. ಇವರು ಯಾವ ರೀತಿ ಟೋಪಿ ಹಾಕ್ತಾರೆ ಅಂತ ನೋಡುವ ಅನಿವಾರ್ಯತೆಯನ್ನು ಜನರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಸರಕಾರದ ಸಚಿವ ಕೇಂದ್ರ ಸರ್ಕಾರವನ್ನು ದೂಷಣೆ ಮಾಡುತ್ತಿದ್ದಾರೆ. ಗ್ಯಾರಂಟಿಗಳನ್ನು ರೂಪಿಸುವಾಗ ಇದೆಲ್ಲಾ ಗೊತ್ತಿರಲಿಲ್ಲವೇ? ಎಂದು ಅವರು ಪ್ರಶ್ನಿಸಿದರು.

ಮುಖ್ಯಮಂತ್ರಿಗಳು ನೋಡಿದರೆ ಭಾರತದ ಆಹಾರ ನಿಗಮಕ್ಕೆ ಪತ್ರ ಬರೆದಿದ್ದೆ ಎಂದು ಹೇಳುತ್ತಿದ್ದಾರೆ. ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಇಂಥ ಉಡಾಫೆ ಉತ್ತರ ಕೊಟ್ಟರೆ ಹೇಗೆ? ಕೇಂದ್ರದಿಂದ ಅಕ್ಕಿ ಬೇಕು ಅಂದರೆ ಕೇಂದ್ರ ಸರಕಾರದ ಸಂಬಂಧಪಟ್ಟ ಸಚಿವರ ಜತೆ ಮಾತನಾಡಬೇಕಿತ್ತು. ಮನವಿ ಕೊಡಬೇಕಿತ್ತು. ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರೇ ಹೋಗಿ ಚರ್ಚೆ ನಡೆಸಬೇಕಿತ್ತು. ಅದನ್ನು ಬಿಟ್ಟು ಉಡಾಫೆ ಹೇಳಿಕೆ ಕೊಡ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಕೇಂದ್ರ ಸರ್ಕಾರಕ್ಕೆ ಅವರದೇ ಆದ ಬದ್ಧತೆ ಇರುತ್ತದೆ. ನಮಗೆ ಅಕ್ಕಿ ಬೇಕು ಅಂದರೆ ಅವರು ಹೇಗೆ ಕೊಡ್ತಾರೆ? ನಾನು ಸಾಲಾಮನ್ನಾ ಮಾಡಿದಾಗ ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿದ್ದ ಸಾಲಮನ್ನಾ ಮಾಡಿದಾಗ ಪ್ರಧಾನಿಗಳ ಹತ್ತಿರ ಹೋಗಿ ಕೇಳಿದ್ನಾ? ದರ್ದು ಇರೋದು ಕಾಂಗ್ರೆಸ್ ಪಕ್ಷಕ್ಕೆ, ಅವರಿಗೇನಿದೆ ದರ್ದು? ನಿಮಗೆ ಬೇಕಾದ ವ್ಯವಸ್ಥೆ ನೀವೇ ಮಾಡಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ನಾನು ಪಂಚರತ್ನ ಯೋಜನೆಗಳನ್ನು ಘೋಷಣೆ ಮಾಡಿದ್ದೆ. ಅವುಗಳನ್ನು ಹೇಗೆ ಜಾರಿ ಮಾಡಬೇಕು? ಹೇಗೆ ಹಣ ಹೊಂದಿಸಬೇಕು ಎಂಬುದಕ್ಕೆ ರೂಪುರೇಷೆ ಸಿದ್ದಮಾಡಿದ್ದೆ. ಆದರೆ ಜನ ನನ್ನನ್ನು ನಂಬಲಿಲ್ಲ. ಪಾಪ ಇವರ 5 ಗ್ಯಾರಂಟಿಗಳನ್ನು ನಂಬಿದರು. ಇನ್ನು ಯಜಮಾನಿಯರಿಗೆ 2 ಸಾವಿರ ಹೇಗೆ ಕೊಡ್ತಾರೆ ನೋಡೊಣ ಎಂದು ಕುಮಾರಸ್ವಾಮಿ ಹೇಳಿದರು.

Join Whatsapp