ಅಂಬೇಡ್ಕರ್ ಪೋಟೋ ತೆಗೆಸಿದ ವಿವಾದ: ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವರ್ಗಾವಣೆ

Prasthutha|

ಬೆಂಗಳೂರು: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪೋಟೋ ತೆಗೆಸಿದ ವಿವಾದಕ್ಕೆ ಕಾರಣವಾದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ಹೈಕೋರ್ಟ್ ವರ್ಗಾವಣೆ ಮಾಡಿ ಆದೇಶಿಸಿದೆ.

- Advertisement -

ಹೈಕೋರ್ಟ್ ಆದೇಶದ ಮೇರೆಗೆ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ವರ್ಗಾವಣೆ ಮಾಡಿ ರಿಜಿಸ್ಟ್ರಾರ್ ಜನರಲ್ ಶಿವಶಂಕರೇಗೌಡ ಅವರು ಇಂದು ನೋಟಿಫಿಕೇಷನ್ ಹೊರಡಿಸಿದ್ದಾರೆ. ನೋಟಿಫಿಕೇಷನ್ ​​ನಲ್ಲಿ ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರನ್ನು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಅಧ್ಯಕ್ಷರಾಗಿ ವರ್ಗಾವಣೆ ಮಾಡಲಾಗಿದೆ.

ಪ್ರಸ್ತುತ ಈ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಸ್.ಹೆಚ್.ರೇಣುಕಾದೇವಿ ಅವರು ಇದೇ ಫೆ.28ರಂದು ಸೇವೆಯಿಂದ ನಿವೃತ್ತಿಯಾಗಲಿರುವ ಕಾರಣ ತಕ್ಷಣದಿಂದಲೇ ಜಾರಿಗೆ ಬರುವಂತೆ ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಕಳೆದ ಜ. 26ರಂದು ಗಣರಾಜ್ಯೋತ್ಸವದ ದಿನ ರಾಯಚೂರಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಫೋಟೋ ಜೊತೆಗೆ ಡಾ. ಬಿ.ಆರ್.ಅಂಬೇಡ್ಕರರ ಫೋಟೋ ಕೂಡ ಇರಿಸಲಾಗಿತ್ತು.ಆದರೆ, ಧ್ವಜಾರೋಹಣಕ್ಕೆ ಮುನ್ನ ಅಂಬೇಡ್ಕರ್ ಫೋಟೋ ತೆರವು ಮಾಡಲಾಗಿತ್ತು. ಇದಕ್ಕೆ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರು ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಬಳಿಕ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಘಟನೆ ಸಂಬಂಧ ಹೈಕೋರ್ಟ್ ಕೂಡ ವಸ್ತುಸ್ಥಿತಿ ವರದಿ ಕೇಳಿತ್ತು.

Join Whatsapp