ತಿರುವನಂತಪುರ: ಕೇರಳದ ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮೃತಪಟ್ಟ ಮಹಿಳೆ ಕುಟುಂಬಕ್ಕೆ ರಾಜ್ಯ ಸರ್ಕಾರ ₹50,000 ಪರಿಹಾರ ನೀಡಿದ್ದು, ಹೆಚ್ಚಿನ ಸಹಾಯದ ಭರವಸೆ ನೀಡಿದೆ.
ಸಚಿವ ವಿ.ಎನ್. ವಾಸವನ್ ಕುಟುಂಬವನ್ನು ಭೇಟಿ ಮಾಡಿ ಪರಿಹಾರ ಮೊತ್ತವನ್ನು ಹಸ್ತಾಂತರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವ ಬೇಡಿಕೆಗಳ ಕುರಿತು ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.
ಮೃತಪಟ್ಟ ಮಹಿಳೆಯ (ಬಿಂದು) ಮಗಳಿಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗುವುದು ಮತ್ತು ಚಿಕಿತ್ಸಾ ವೆಚ್ಚವನ್ನು ಕಾಲೇಜು ಭರಿಸಲಿದೆ. ಬಿಂದು ಅವರ ಮಗನಿಗೆ ಶೀಘ್ರದಲ್ಲೇ ತಾತ್ಕಾಲಿಕ ಉದ್ಯೋಗ ನೀಡಲಾಗುವುದು. ಶಾಶ್ವತ ಉದ್ಯೋಗದ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವಾಸವನ್ ತಿಳಿಸಿದ್ದರು .
ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಬಿಂದು ಅವರ ಕುಟುಂಬ ಸದಸ್ಯರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ ಎಂದು ವರದಿಯಾಗಿದೆ.
