ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಗುರಿಯಾಗಿಸಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಖರ್ಗೆ, ರಾಮನಾಥ ಕೋವಿಂದ್ ಅವರ ಹೆಸರನ್ನು ಕೋವಿಡ್ ಎಂದು ಹಾಗೂ ದ್ರೌಪದಿ ಮುರ್ಮು ಅವರ ಹೆಸರನ್ನು ಮುರ್ಮಾ ಎಂದು ಹೇಳಿದ್ದಾರೆ. ಈ ಮೂಲಕ ಅವರನ್ನು ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಹೆಸರುಗಳನ್ನು ತಪ್ಪಾಗಿ ಉಚ್ಚರಿಸಿದ್ದಲ್ಲದೇ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರಕ್ಕೆ ಬಂದಿರುವುದರ ಹಿಂದಿನ ಬಿಜೆಪಿ ಪಕ್ಷದ ಉದ್ದೇಶ ನಮ್ಮ ಕಾಡುಗಳನ್ನು, ಆಸ್ತಿಗಳನ್ನು, ಭೂಮಿಗಳನ್ನು ಕಸಿದುಕೊಳ್ಳುವ ಹುನ್ನಾರ ಮಾಡಿದೆಯೇ ಎಂದು ಖರ್ಗೆ ಆರೋಪಿಸಿರುವುದಾಗಿ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.
ಇದರಿಂದ ಕಾಂಗ್ರೆಸ್ ಪಕ್ಷದ ‘ದಲಿತ ವಿರೋಧಿ, ಆದಿವಾಸಿ ವಿರೋಧಿ ಮತ್ತು ಸಂವಿಧಾನ ವಿರೋಧಿ’ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಭಾಟಿಯಾ ಆರೋಪಿಸಿದ್ದಾರೆ.
