ಸೋಂಕಿತರಿಗೆ ಚಿಕಿತ್ಸೆ ನೀಡದ ಆಯುಷ್ಮಾನ್ ಭಾರತ್ ಇರುವುದು ಯಾವ ಪುರುಷಾರ್ಥಕ್ಕೆ? ಕುಮಾರಸ್ವಾಮಿ ಪ್ರಶ್ನೆ

Prasthutha|

ಬೆಂಗಳೂರು: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ಜನರು ಕೋವಿಡ್ ಲಸಿಕೆಯ ಮೇಲೆ ಮಾತ್ರ ಭರವಸೆ ಹೊಂದಿದ್ದಾರೆ. ಆದರೆ, ಲಸಿಕೆ ವೆಚ್ಚ ಅತ್ಯಂತ ದುಬಾರಿಯಾಗಿದ್ದು, ಸರ್ಕಾರ ನಿಗದಿಪಡಿಸಿದ ವಿವಿಧ ತರದ ಬೆಲೆಯನ್ನು ಭರಿಸಲು ಹೆಚ್ಚಿನ ಜನರಿಗೆ ಸಾಧ್ಯವಾಗುತ್ತಿಲ್ಲ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ,  ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೋವಿಡ್ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಹೇಳಿದ್ದಾರೆ.

- Advertisement -

ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು.‌ ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಯೋಜನೆ ವ್ಯಾಪ್ತಿಗೆ ಕೋವಿಡ್ ಅನ್ನೂ ಸೇರಿಸುವುದು ಅಗತ್ಯವಾಗಿದೆ ಎಂದು ಎಚ್ ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

Join Whatsapp