ಅಮರಾವತಿ: ಆಂಧ್ರಪ್ರದೇಶದಲ್ಲಿ ಟಿಡಿಪಿ ನೇತೃತ್ವದ ಎನ್ಡಿಎ ಸರ್ಕಾರದ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ವೈಎಸ್ಆರ್ಸಿಪಿ ಮುಖ್ಯಸ್ಥ ವೈ.ಎಸ್.ಜಗನ್ ಮೋಹನ್ ರೆಡ್ಡಿ ಆಗ್ರಹಿಸಿದ್ದಾರೆ.
ವೈಎಸ್ಆರ್ಸಿಪಿ ನಾಯಕರು ಮತ್ತು ಕಾರ್ಯಕರ್ತರನ್ನು ಸುಳ್ಳು ಪ್ರಕರಣಗಳಲ್ಲಿ ಬಂಧಿಸುತ್ತಿದ್ದಾರೆ ಹಾಗೂ ರಾಜಕೀಯ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ರಾಜಕಾರಣಿಗಳು ಮತ್ತು ಸಾಮಾನ್ಯ ಜನರಿಗೆ ರಕ್ಷಣೆ ಇಲ್ಲದಿರುವಾಗ, ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವಾಗ ಮತ್ತು ಸಂವಿಧಾನವನ್ನು ಉಲ್ಲಂಘನೆ ಮಾಡುತ್ತಿರುವಾಗ ರಾಷ್ಟ್ರಪತಿ ಆಳ್ವಿಕೆ ಏಕೆ ಹೇರಬಾರದು? ಎಂದು ಜಗನ್ ಮೋಹನ್ ರೆಡ್ಡಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನೆ ಮಾಡಿದ್ದಾರೆ.
ಗುಂಟೂರು ಜಿಲ್ಲೆಯ ಮನ್ನಾವ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ದಲಿತ ಸಮುದಾಯದ ನಾಗಮಲ್ಲೇಶ್ವರ ರಾವ್ ಅವರ ಮೇಲೆ ಹಗಲು ಹೊತ್ತಿನಲ್ಲಿ ದಾಳಿ ಮಾಡಿರುವುದು ರಾಜ್ಯದಲ್ಲಿನ ಅರಾಜಕತೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.
ಆಡಳಿತಾರೂಢ ಟಿಡಿಪಿಯನ್ನು ವಿರೋಧಿಸಿದ್ದಕ್ಕಾಗಿ ವೈಎಸ್ಆರ್ಸಿಪಿ ಕಾರ್ಯಕರ್ತರ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಅವರು ಚಂದ್ರಬಾಬು ನಾಯ್ಡು ಸರ್ಕಾರದ ಅಡಿಯಲ್ಲಿ ಜನರು ನಿಜವಾಗಿಯೂ ಸುರಕ್ಷಿತವಾಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
