ಉಳ್ಳಾಲ ಠಾಣೆಯಲ್ಲಿ ಭ್ರಷ್ಟಾಚಾರ: ವರದಿ ಸಲ್ಲಿಸಲು ಮಂಗಳೂರು ಕಮಿಷನರ್’ಗೆ ಲೋಕಾಯುಕ್ತ ಸೂಚನೆ

Prasthutha|

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪದ ಬಗ್ಗೆ ದಾಖಲಾದ ದೂರಿನ ಹಿನ್ನೆಲೆಯಲ್ಲಿ ಈ ಬಗ್ಗೆ ವರದಿ ನೀಡುವಂತೆ ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಗೆ ಲೋಕಾಯುಕ್ತ ಸೂಚಿಸಿದೆ.

- Advertisement -


ಫೆ.14ರ ಒಳಗಡೆ ತನಿಖಾ ವರದಿ ಹಾಗೂ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ನೋಟೀಸ್’ನಲ್ಲಿ ತಿಳಿಸಲಾಗಿದೆ.


ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ದ ದಾಖಲಾಗಿದ್ದ ದೂರು ಇದಾಗಿದ್ದು, ಸಾಮಾಜಿಕ ಕಾರ್ಯಕರ್ತ ಕಬೀರ್ ಉಳ್ಳಾಲ ಎಂಬವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.
ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್, ಎಸ್.ಐ ಪ್ರದೀಪ್ ವಿರುದ್ಧ ಕಬೀರ್ ಭಾರೀ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಠಾಣೆಯಲ್ಲಿ ಹಣ ವಸೂಲು ಮಾಡಲು ಹಮೀದ್ ಎಂಬ ಬ್ರೋಕರ್ ಇಟ್ಟುಕೊಂಡಿದ್ದ ಎಂಬ ಆರೋಪದ ಜೊತೆಗೆ ಗಾಂಜಾ ಮಾಫಿಯ, ಮರಳು ಮಾಫಿಯ, ಹೊಟೇಲ್ ಮಾಲೀಕರಿಂದ ಹಣಕ್ಕೆ ಬೇಡಿಕೆ ಇಡುವ ಬಗ್ಗೆ ದೂರು ನೀಡಿದ್ದರು. ಇಬ್ಬರು ಅಧಿಕಾರಿಗಳು ಉಳ್ಳಾಲಕ್ಕೆ ಬಂದ ಬಳಿಕ ಕೋಟ್ಯಂತರ ಸಂಪಾದನೆ ಬಗ್ಗೆ ದೂರು ನೀಡಲಾಗಿತ್ತು.

- Advertisement -


ಚಿನ್ನದ ಅಂಗಡಿ ದರೋಡೆ ಕೇಸ್ ನಲ್ಲಿ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿಯನ್ನು ಇನ್ಸ್ ಪೆಕ್ಟರ್ ಸಂದೀಪ್ ಎಗರಿಸಿದ ಆರೋಪವನ್ನು ದೂರಿನಲ್ಲಿ ಕಬೀರ್ ಉಲ್ಲೇಖಿಸಿದ್ದರು. ಅಲ್ಲದೇ ಮಂಗಳೂರು ಕಮೀಷನರ್ ಶಶಿಕುಮಾರ್ ವಿರುದ್ದವೂ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಅಧಿಕಾರ ದುರುಪಯೋಗ ಮತ್ತು ಲಂಚದ ಆಪಾದನೆ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಕಲಂ.9 ರಡಿಯಲ್ಲಿ ತನಿಖೆ ನಡೆಸುವುದು ಸೂಕ್ತ ಎಂದು ಕರ್ನಾಟಕ ಲೋಕಾಯುಕ್ತ ನೋಟೀಸ್’ನಲ್ಲಿ ತಿಳಿಸಿದೆ.

Join Whatsapp