ಮಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ 23ರಂದು ಸಾಲ ಸೌಲಭ್ಯ

Prasthutha|

ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಪಿ.ಎಮ್ ಸ್ವನಿಧಿ ಯೋಜನೆಯಡಿ ಈ ವರೆಗೆ ಸಾಲ ಪಡೆಯದೇ ಇರುವವರಿಗೆ ಸಾಲ ಸೌಲಭ್ಯ ನೀಡಲು ಕ್ರಮವಹಿಸಲಾಗುತ್ತಿದೆ.

- Advertisement -

 ಈ ಕಿರು ಸಾಲ ಸೌಲಭ್ಯವು ಪ್ರಥಮ ಹಂತದಲ್ಲಿ 10 ಸಾವಿರ ರೂಪಾಯಿ, ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡುವವರಿಗೆ ಬಡ್ಡಿ ಸಹಾಯಧನ ಸೌಲಭ್ಯ ಮತ್ತು ಸಾಲ ಮರುಪಾವತಿಸಿದ ಬಳಿಕ ದ್ವಿತೀಯ ಹಂತದಲ್ಲಿ 20 ಸಾವಿರ ರೂಪಾಯಿ ಹಾಗೂ ತೃತೀಯ ಹಂತದಲ್ಲಿ 50 ಸಾವಿರ ರೂಪಾಯಿ ಬ್ಯಾಂಕ್ ಸಾಲ ಸೌಲಭ್ಯ ದೊರೆಯುತ್ತಿದೆ.  ಡಿಜಿಟಲ್ ವ್ಯವಹಾರ ಮಾಡುವ ಬೀದಿ ಬದಿ ವ್ಯಾಪಾರಿಗಳಿಗೆ ವಾರ್ಷಿಕ 1200 ರೂಪಾಯಿ ಕ್ಯಾಶ್ ಬ್ಯಾಕ್ ದೊರೆಯಲಿದೆ.

ಈ ವರೆಗೆ ಸಾಲ ಪಡೆಯದೇ ಇರುವ ಬೀದಿ ಬದಿ ವ್ಯಾಪಾರಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಸ್ವೀಕರಿಸಲು, ಬ್ಯಾಂಕ್ ಸಾಲ ವಿತರಿಸಲು, ಈಗಾಗಲೇ ಅರ್ಜಿ ಸಲ್ಲಿಸಿರುವವರಿಗೆ ಬ್ಯಾಂಕ್ ಸಾಲ ಮಂಜೂರಾತಿ ಹಾಗೂ ನಗದು ಬಿಡುಗಡೆ ಮತ್ತು ಸ್ವ-ನಿಧಿ ಸಮೃದ್ಧಿ ಕಾರ್ಯಕ್ರಮದಡಿ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಕುಟುಂಬ ಸದಸ್ಯರಿಗೆ ಸಾಮಾಜಿಕ ಭದ್ರತೆಯ ಯೋಜನೆಗಳನ್ನು ಒದಗಿಸುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಆ.23ರ ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದ ಮಿನಿ ಭವನದಲ್ಲಿ ಆಯೋಜಿಸಲಾಗಿದೆ.

- Advertisement -

ಎಲ್ಲಾ ಬ್ಯಾಂಕುಗಳು ಮತ್ತು ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಕಿರು ಸಾಲ ಮೇಳ ನಡೆಯಲಿದ್ದು, ನಗರದ ಬೀದಿ ಬದಿ ವ್ಯಾಪಾರಿಗಳು ಆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೌಲಭ್ಯ ಪಡೆಯುವಂತೆ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp