ಮಂಗಳೂರು: ಬೈಕ್ ಕಳವು ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

Prasthutha|

ಮಂಗಳೂರು: ಬೈಕ್ ಕಳವು ಮಾಡಿ ಅದರಲ್ಲಿ ಸಂಚರಿಸುತ್ತಿದ್ದ ಇಬ್ಬರನ್ನು ಮಂಗಳೂರು ಪೂರ್ವ ಠಾಣೆಯ ಪೊಲೀಸರು ಬಂಧಿಸಿ ಎರಡು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.

- Advertisement -


ಚಿತ್ರದುರ್ಗ ಜಿಲ್ಲೆಯ ಜೋಗಿಮಟ್ಟಿ ಸ್ಟೇಡಿಯಂ ಸರ್ಕಲ್ ಬಳಿಯ ನಿವಾಸಿ ಫಾರಿಶ್ ಶರ್ಮಾ ಅಲಿಯಾಸ್ ಗಿಲ್ಲು (19) ಹಾಗೂ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಐಯುಡಿಪಿ ಲೇಔಟ್ 3ನೇ ಕ್ರಾಸ್ ನಿವಾಸಿ ಧನುಷ್ (20) ಬಂಧಿತ ಆರೋಪಿಗಳು.


ಮಾರ್ಚ್ 28ರಂದು ಮಂಗಳೂರು ನಗರದ ಮಲ್ಲಿಕಟ್ಟೆಯ ಬಳಿ ಬೈಕ್ ಸವಾರರಿಬ್ಬರು ಸಂಶಯಾಸ್ಪದವಾಗಿ ಕಂಡು ಬಂದಿದ್ದರು. ಅವರನ್ನು ತಡೆದು ಪರಿಶೀಲಿಸಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಈ ಹಿಂದೆ ಪಂಪ್ ವೆಲ್ ನ ಕಪಿತಾನಿಯಾ ಬಳಿ ಕಳವು ಮಾಡಿದ್ದ ಯಮಹಾ ಆರ್ ಎಕ್ಸ್ ಬೈಕ್ ಹಾಗೂ ವೆಲೆನ್ಸಿಯಾ ಬಳಿ ಕಳವು ಮಾಡಿದ್ದ ಬಜಾಜ್ ಪಲ್ಸರ್ ಬೈಕ್ ಗಳನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 85,000 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಾಗಿದೆ.
ಆರೋಪಿ ಫಾರಿಶ್ ಶರ್ಮಾ ವಿರುದ್ಧ 2022ನೇ ಇಸವಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಸಹ ಬೈಕ್ ಕಳವು ಪ್ರಕರಣ ದಾಖಲಾಗಿದೆ.


ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ ಅಂಶುಕುಮಾರ್ , ಉಪ ಪೊಲೀಸ್ ಆಯುಕ್ತ ದಿನೇಶ್ ಕುಮಾರ್ ಬಿ.ಪಿ, ಕೇಂದ್ರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

Join Whatsapp