ಮಂಗಳೂರಿಗರನ್ನು ಬೆಚ್ಚಿಬೀಳಿಸಿದ ಮಹಿಳಾ ಉದ್ಯಮಿಯ ಹತ್ಯೆ ಕೇಸ್: ಮೂವರ ಅಪರಾಧ ಸಾಬೀತು

Prasthutha|

►ಮಹಿಳೆಯನ್ನು ಕೊಂದು 29 ತುಂಡುಗಳಾಗಿ ಕತ್ತರಿಸಿ ನಗರದ ವಿವಿಧೆಡೆ ಎಸೆದು ಹೋದ ಹಂತಕ..!

- Advertisement -


ಮಂಗಳೂರು: 2019ರಲ್ಲಿ ಮಂಗಳೂರಿಗರನ್ನು ಬೆಚ್ಚಿಬೀಳಿಸಿದ ಮಹಿಳಾ ಉದ್ಯಮಿಯ ಹತ್ಯೆ ಪ್ರಕರಣದ ಮೂವರ ಆರೋಪವು ಸಾಬೀತಾಗಿದೆ. ಆದರೆ ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್. ಎಸ್. ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಸೆ.17ಕ್ಕೆ ಘೋಷಿಸುವುದಾಗಿ ತಿಳಿಸಿದ್ದಾರೆ.

ಮೂಲತಃ ಪೊಳಲಿ ಮೊಗರಿನವರಾಗಿದ್ದು, ಪ್ರಸ್ತುತ ನಗರದ ಅಮರ್ ಆಳ್ವ ರಸ್ತೆ ನಿವಾಸಿ ಯಾಗಿದ್ದ ಶ್ರೀಮತಿ ಶೆಟ್ಟಿ (35) ಕೊಲೆಯಾದವರು. ವೆಲೆನ್ಸಿಯಾ ಸಮೀಪದ ಸೂಟರ್ ಪೇಟೆಯ ಜೋನಸ್ ಸ್ಯಾಮ್ಸನ್ ಆಲಿಯಾಸ್ ಜಾನ್ಸ್ ಜೌಲಿನ್ ಸ್ಯಾಮ್ಸನ್ (40), ವಿಕ್ಟೋರಿಯಾ ಮಥಾಯಿಸ್ (47) ಮತ್ತು ಮರಕಡ ತಾರಿಪಾಡಿ ಗುಡ್ಡೆಯ ರಾಜು (34) ಶಿಕ್ಷೆಗೊಳಗಾದ ಆರೋಪಿಗಳಾಗಿದ್ದಾರೆ.

- Advertisement -


2019ರ ಮೇ 11ರಂದು ಕುರಿಫಂಡ್ ಹಣದ ವಿಚಾರವಾಗಿ ನಡೆದಿದ್ದ ಕೊಲೆ ಮಂಗಳೂರಿಗರನ್ನು ಬೆಚ್ಚಿಬೀಳಿಸಿತು. ಆರೋಪಿ ದಂಪತಿಯು ತನ್ನ ಮನೆಯಲ್ಲಿಯೇ ಶ್ರೀಮತಿ ಶೆಟ್ಟಿಯನ್ನು ಕೊಂದು ಮೃತದೇಹವನ್ನು 29 ತಂಡು ಗಳನ್ನಾಗಿ ಮಾಡಿ ನಗರದ ಹಲವು ಕಡೆಗಳಲ್ಲಿ ಬಿಸಾಡಿರುವುದಾಗಿ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.


ಶ್ರೀಮತಿ ಶೆಟ್ಟಿ ಅತ್ತಾವರದಲ್ಲೇ ಶ್ರೀ ಪೊಳಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ಇಟ್ಟುಕೊಂಡಿದ್ದರು. ಅಲ್ಲದೆ ಕುರಿಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರು. ಈ ಕುರಿಫಂಡ್ ನಲ್ಲಿ ಜೋನಸ್ 2 ಸದಸ್ಯತ್ವವನ್ನು ಹೊಂದಿದ್ದು, ಮಾಸಿಕ ಕಂತು ಪಾವತಿಸಲು ವಿಫಲನಾಗಿದ್ದ. ಮಾಸಿಕ ಕಂತುಗಳ ಹಣ ಪಾವತಿಸುವಂತೆ ಶ್ರೀಮತಿ ಶೆಟ್ಟಿ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ.


2019ರ ಮೇ 11ರಂದು ಬೆಳಗ್ಗೆ 9:15ಕ್ಕೆ ಹಣ ಕೇಳುವುದಕ್ಕಾಗಿ ಆರೋಪಿ ಜೋನಸ್ ನ ಮನೆಗೆ ಶ್ರೀಮತಿ ಶೆಟ್ಟಿ ತೆರಳಿದ್ದರು. ಅಲ್ಲಿ ಮಾತಿಗೆ ಮಾತು ಬೆಳೆದು ಜೋನಸ್ ಮರದ ಪಟ್ಟಿಯ ತುಂಡಿನಿಂದ ಶ್ರೀಮತಿ ಶೆಟ್ಟಿಯ ತಲೆಗೆ ಹೊಡೆದಿದ್ದ.


ಪ್ರಜ್ಞಾಹೀನರಾಗಿದ್ದ ಶ್ರೀಮತಿ ಶೆಟ್ಟಿಯನ್ನು ಜೋನಸ್ ಹಾಗೂ ಪತ್ನಿ ವಿಕ್ಟೋರಿಯಾ ಬಚ್ಚಲು ಕೋಣೆಗೆ ಎಳೆದುಕೊಂಡು ಹೋಗಿ ಹರಿತವಾದ ಕತ್ತಿಯಿಂದ ಕುತ್ತಿಗೆಯನ್ನು ಕೊಯ್ದು ಮೈಮೇಲಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡಿ ರುಂಡ, ಕೈ, ಕಾಲು ಹಾಗೂ ಇತರ ಭಾಗಗಳನ್ನು 29 ತುಂಡುಗಳಾಗಿ ಮಾಡಿ ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ತುಂಬಿಸಿ ನಗರದ ಹಲವೆಡೆ ಎಸೆದಿದ್ದರು. ಶ್ರೀಮತಿ ಶೆಟ್ಟಿಯ ವ್ಯಾನಿಟಿ ಬ್ಯಾಗ್ ಮತ್ತು ಚಪ್ಪಲಿಯನ್ನು ಆರೋಪಿಗಳು ಮನೆಯಲ್ಲಿ ಸುಟ್ಟು ಹಾಕಿದ್ದರು.


ಕೃತ್ಯ ನಡೆದ ಮೂರು ದಿನದ ಬಳಿಕ ನಗರದ ಕದ್ರಿ ಬಳಿಯ ಅಂಗಡಿಯೊಂದರ ಬಳಿ ರುಂಡ ಪತ್ತೆಯಾದ ನಂತರ ಈ ಕೊಲೆ ಪ್ರಕರಣವು ಬೆಳಕಿಗೆ ಬಂದಿತ್ತು. ನಂತರ ನಂದಿಗುಡ್ಡೆಯಲ್ಲಿ ದೇಹದ ತುಂಡುಗಳು ಪತ್ತೆಯಾಗಿದ್ದವು.


ಜೋನಸ್ ಮತ್ತು ವಿಕ್ಟೋರಿಯಾ ವಿರುದ್ಧ ಕೊಲೆ, ಸುಲಿಗೆ ಮತ್ತು ಸಾಕ್ಷ್ಯನಾಶ ಹಾಗೂ ರಾಜು ವಿರುದ್ಧ ಕೊಲೆಗೆ ಸಹಾಯ, ಕಳವು ಮಾಡಿರುವ ಸೊತ್ತುಗಳನ್ನು ಇಟ್ಟುಕೊಂಡಿರುವ ಆರೋಪಗಳು ಸಾಬೀತಾಗಿದೆ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.



Join Whatsapp