ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ಅನುದಾನ ಸರಿಯಾಗಿ ಬಳಸಿಲ್ಲ: ಸಚಿವ ಜೆ.ಸಿ.ಮಾಧುಸ್ವಾಮಿ

Prasthutha|

ಬೆಂಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ನೀಡಿದ ಅನುದಾನವನ್ನು ಸರಿಯಾಗಿ ಬಳಸಿಕೊಂಡಿಲ್ಲ. ಹಾಗಾಗಿ 2020-21ನೇ ಸಾಲಿನಲ್ಲಿ ಅನುದಾನ ಕಡಿತಗೊಳಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.


ಜೆಡಿಎಸ್ ಸದಸ್ಯ ಬಿ.ಎಂ.ಫಾರೂಕ್ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಉತ್ತರಿಸಿದ ಜೆ.ಸಿ.ಮಾಧುಸ್ವಾಮಿ, 2018-19, 2019-20ನೆ ಸಾಲಿನಲ್ಲಿ ಕೆಎಂಡಿಸಿಗೆ ನೀಡಿದ್ದ ಅನುದಾನ ಸಮರ್ಪಕವಾಗಿ ಬಳಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ಅನುದಾನ ಕಡಿತಗೊಳಿಸಲಾಗಿದೆ. ಅನುದಾನ ಸಮರ್ಪಕವಾಗಿ ಬಳಸುವುದಾದರೆ ಹೆಚ್ಚಿನ ಅನುದಾನ ನೀಡಲು ಸರ್ಕಾರ ಸಿದ್ಧವಿದೆ. ಈ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

- Advertisement -


ಅಲ್ಪಸಂಖ್ಯಾತ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಕೇಳಿದ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಮಾಧುಸ್ವಾಮಿ, ನಿಗಮದಲ್ಲಿ ಹಲವು ಹುದ್ದೆಗಳು ಖಾಲಿ ಇವೆ. ನಿಗಮದ ಕಾರ್ಯಚಟುವಟಿಕೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

- Advertisement -