ಗ್ರಾಮ ಪಂಚಾಯತಿಗೆ ಒಂದು ಸರ್ಕಾರಿ ‘ಮಾದರಿ ಶಾಲೆ’ಗೆ ಮಕ್ಕಳನ್ನು ಕರೆದೊಯ್ಯಲು ವಾಹನ ವ್ಯವಸ್ಥೆಗೆ ಚಾಲನೆ

Prasthutha|

ಬೆಂಗಳೂರು: ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ‘ಮಾದರಿ ಶಾಲೆ’ ಅಭಿವೃದ್ಧಿಪಡಿಸುವ ರಾಜ್ಯ ಸರ್ಕಾರದ ಯೋಜನೆಯ ಭಾಗವಾಗಿ ಮಕ್ಕಳನ್ನು ಮನೆಯಿಂದ ಶಾಲೆ ಮತ್ತು ಶಾಲೆಯಿಂದ ಮನೆಗೆ ಪಿಕಪ್-ಡ್ರಾಪ್ ಮಾಡಲು ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ವಾಹನಗಳನ್ನು ಒದಗಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

- Advertisement -


ಕೆನರಾ ಬ್ಯಾಂಕ್ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಅಡಿ ಒದಗಿಸಲಾಗಿರುವ 2 ಮಾರುತಿ ಇಕೋ ವಾಹನಗಳನ್ನು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಮಂಗಳವಾರ (ಮಾ.29) ಕೆನರಾ ಬ್ಯಾಂಕ್ ಅಧಿಕಾರಿಗಳು ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿದರು.


ಯೋಜನೆ ಕುರಿತು ಮಾತನಾಡಿದ ಸಚಿವ ನಾಗೇಶ್ ಅವರು, ‘ರಾಜ್ಯದ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯ ಕಟ್ಟಡ ಮತ್ತು ಕೊಠಡಿ, ಆಟದ ಮೈದಾನ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಲಾಗುತ್ತದೆ. ಆ ಶಾಲೆಗಳಲ್ಲಿ ತರಗತಿಗೊಬ್ಬ ಶಿಕ್ಷಕರನ್ನು ನೇಮಿಸಲಾಗುತ್ತದೆ. ಇದರಿಂದ ಆ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳವಾಗುತ್ತದೆ. ಅಂತಹ ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಿ ಶಾಲೆಗೆ ಕರೆ ತರಲು ವಾಹನಗಳ ವ್ಯವಸ್ಥೆ ಮಾಡಲಾಗುತ್ತದೆ’ ಎಂದು ಸಚಿವ ನಾಗೇಶ್ ತಿಳಿಸಿದರು.

- Advertisement -


‘ಕಾರ್ಪೊರೇಟ್ ಕಂಪನಿಗಳು, ಬ್ಯಾಂಕ್ಗಳು, ಕಂಪನಿಗಳು, ಕೈಗಾರಿಕೆಗಳು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಆಸಕ್ತಿ ಹೊಂದಿರುವ ಸಂಸ್ಥೆಗಳು, ವ್ಯಕ್ತಿಗಳ ಮೂಲಕ ಮಾದರಿ ಶಾಲೆಗಳಿಗೆ ವಾಹನಗಳ ವ್ಯವಸ್ಥೆ ಮಾಡಲಾಗುತ್ತದೆ. ನಿರ್ದಿಷ್ಟ ಅವಧಿಗೆ ವಾಹನಕ್ಕೆ ಚಾಲಕರು, ಇಂಧನ ಮತ್ತು ನಿರ್ವಹಣೆಯನ್ನು ಆಯಾ ಸಂಸ್ಥೆಗಳೆ ನಿರ್ವಹಿಸುವ ಕುರಿತು ಒಪ್ಪಂದ ಮಾಡಿಕೊಳ್ಳಲಾಗುತ್ತದೆ’ ಎಂದು ಸಚಿವ ನಾಗೇಶ್ ತಿಳಿಸಿದರು.


‘ರಾಜ್ಯದ ಕೆಲವು ಭಾಗಗಳಲ್ಲಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರಲು ಖಾಸಗಿ ಸಹಭಾಗಿತ್ವದಲ್ಲಿ ವಾಹನಗಳ ವ್ಯವಸ್ಥೆ ಇದೆ. ಸಾಕಷ್ಟು ಮಕ್ಕಳು ವಾಹನಗಳ ಪ್ರಯೋಜನ ಪಡೆದು ಶಾಲೆಗೆ ಆಗಮಿಸುತ್ತಿದ್ದಾರೆ. ಶಾಲೆ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ), ಗ್ರಾಮಸ್ಥರು, ಶಿಕ್ಷಣ ಇಲಾಖೆಯ ಆಸಕ್ತಿಯಿಂದ ಇಂತಹ ಪ್ರಯತ್ನಗಳು ಯಶಸ್ವಿಯಾಗಿವೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳ, ಎಲ್ಲ ಭಾಷೆ ಮತ್ತು ವಿಷಯಗಳಿಗೆ ಶಿಕ್ಷಕರ ಲಭ್ಯತೆ, ಮಕ್ಕಳ ನಡುವೆ ಸ್ಪರ್ಧಾತ್ಮಕ ಮನೋಭಾವ ಮೂಡಿಸುವುದು ಮತ್ತು ಮೂಲಸೌಕರ್ಯಗಳ ಸಂಪೂರ್ಣ ಸದುಪಯೋಗ ಮಾಡಿಕೊಳ್ಳುವ ಗುರಿಯನ್ನು ಹೊಂದಲಾಗಿದೆ’ ಎಂದು ಸಚಿವ ನಾಗೇಶ್ ಹೇಳಿದರು.

‘ಶಿಕ್ಷಣದ ಅಭಿವೃದ್ಧಿ, ಸಮಾಜ ಸೇವೆಯ ಮನೋಭಾವದಿಂದ ಆಸಕ್ತಿ ಇರುವ ಯಾವುದೇ ಕಂಪನಿ, ಸಂಘ-ಸಂಸ್ಥೆಗಳು ಸರ್ಕಾರಿ ಶಾಲೆಗಳಿಗೆ ವಾಹನ ಒದಗಿಸಲು ಮುಂದೆ ಬರಬಹುದು. ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳಾಗಿ ಅಭಿವೃದ್ಧಿಪಡಿಸಲಾಗುತ್ತದೆ’ ಎಂದು ಸಚಿವ ನಾಗೇಶ್ ನುಡಿದರು.


ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕೆನರಾ ಬ್ಯಾಂಕ್ ಬೆಂಗಳೂರು ವಲಯದ ಚೀಫ್ ಜನರಲ್ ಮ್ಯಾನೇಜರ್ ದೇಬಾನಂದ ಸಾಹು ಉಪಸ್ಥಿತರಿದ್ದರು.

Join Whatsapp