ಮುಸ್ಲಿಂ ಅಭ್ಯರ್ಥಿ ವಿವಾದ | ಝಮೀರ್ ಅಹ್ಮದ್ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು

Prasthutha|

ಬೆಂಗಳೂರು: ಲೋಕಸಭಾ ಉಪಚುನಾವಣೆ ಸಂಬಂಧ  ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ಜೆಡಿಎಸ್ ಪಕ್ಷವು ಬಿಜೆಪಿಯಿಂದ ಹಣ ಪಡೆದಿದೆ ಎಂಬ ಕಾಂಗ್ರೆಸ್ ಶಾಸಕ ಝಮೀರ್ ಅಹ್ಮದ್ ಖಾನ್ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

- Advertisement -

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ, 2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್ ಬಿಜೆಪಿಯಿಂದ ದುಡ್ಡು ತಂದಿತ್ತೇ?.

2005ರ ಚಾಮರಾಜಪೇಟೆ ಉಪಚುನಾವಣೆಯ ಆ ‘ಮುಸ್ಲಿಂ ಅಭ್ಯರ್ಥಿ’ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಬೆವರು ಹರಿಸಿದ್ದರು. ದೇವೇಗೌಡರಂಥವರು ಅಂದು ಅಷ್ಟು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೇ?.

- Advertisement -

ಚಾಮರಾಜಪೇಟೆ ಉಪಚುನಾವಣೆಯ ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ ‘ಮುಸ್ಲಿಂ ಅಭ್ಯರ್ಥಿ’ ಏಕಾಏಕಿ ಕಾಣೆಯಾಗಿದ್ದರು. ಕಾರಣ ಹುಡುಕಿದಾಗ ಹಣದ ಕೊರತೆ ಎಂಬ ಅಂಶ ಗೊತ್ತಾಯಿತು. ಅಂದು ಶಿವಮೊಗ್ಗ ಪ್ರವಾಸದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೇ?

ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್ ‘ಮುಸ್ಲಿಂ ಅಭ್ಯರ್ಥಿ’ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ?.

ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ ಎಂದು ಕುಮಾರ ಸ್ವಾಮಿ ಹೇಳಿದ್ದಾರೆ.

2008ರ ಆಪರೇಷನ್ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ ಕೇಳಿ ನೋಡಿ ಎಂದು ಟ್ವೀಟ್‌ ಮೂಲಕ ಪ್ರಶ್ನೆ ಮಾಡಿದರು.

Join Whatsapp