Home ಟಾಪ್ ಸುದ್ದಿಗಳು ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ನಾಗೇಶ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ನಾಗೇಶ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಬೆಂಗಳೂರು: ಯುವತಿ ಮೇಲೆ ಆ್ಯಸಿಡ್ ಎರಚಿ  ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿಗೆ ಕರೆ ತರುವಾಗ ಎಸ್ಕೇಪ್ ಆಗಲು ಯತ್ನಿಸಿದ್ದ ನಾಗೇಶ್ ಕಾಲಿಗೆ ಪೊಲೀಸರು ಕೆಂಗೇರಿ ಬ್ರಿಡ್ಜ್ ಬಳಿ ಗುಂಡಿನ ದಾಳಿ ನಡೆಸಿದ್ದಾರೆ. ಸದ್ಯ ನಾಗೇಶ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪೊಲೀಸರ ಗುಂಡೇಟು ಬಲಗಾಲಿನ ಮೊಣಕಾಲಿನ ಚಿಪ್ಪಿಗೆ ತಗುಲಿ ಗಂಭೀರವಾಗಿ ಗಾಯಗೊಂಡಿರುವ ನಾಗೇಶ್ ನನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಪತ್ರಿಕಾಗೋಷ್ಠಿಯಲ್ಲಿ ಇಂದು ತಿಳಿಸಿದರು.

ಆರೋಪಿ ತಪ್ಪಿಸಿಕೊಳ್ಳಲು ‌ಕಲ್ಲಿನಿಂದ ಹಲ್ಲೆ ನಡೆಸಿದ್ದರಿಂದ ಗಾಯಗೊಂಡ ಕಾಮಾಕ್ಷಿಪಾಳ್ಯ ಠಾಣೆ ಮುಖ್ಯ ಪೇದೆ  ಮಹದೇವಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳುನಾಡಿನ ತಿರುಣ್ಣಾಮಲೈನ ರಮಣಶ್ರೀ ಆಶ್ರಮದ ಸ್ವಾಮೀಜಿಯ ವೇಷದಲ್ಲಿದ್ದ ನಾಗೇಶ್ ನನ್ನು ಪಶ್ಚಿಮ ವಿಭಾಗದ ಪೊಲೀಸರು ಭಕ್ತರ ಸೋಗು ಹಾಕಿ ಬಂಧಿಸಿ ತಡ ರಾತ್ರಿ ನಗರಕ್ಕೆ ಕರೆದುಕೊಂಡು ಬರುತ್ತಿದ್ದರು.

ಮಾರ್ಗ ಮಧ್ಯದ ಕೆಂಗೇರಿಯ ನೈಸ್ ರಸ್ತೆಯ ಬಳಿ ರಾತ್ರಿ 1.30ರ ವೇಳೆ ಮೂತ್ರ ವಿಸರ್ಜನೆಗೆ ನಿಲ್ಲಿಸಿ ಎಂದು ಆರೋಪಿ ಕೇಳಿಕೊಂಡಿದ್ದಾನೆ. ಆದರೆ ಇದಕ್ಕೆ ಅವಕಾಶ ಕೊಡದ ಪೊಲೀಸರು ಕೆಂಗೇರಿ ಮೇಲ್ಸೇತುವೆ ಬಳಿ ನಿಲ್ಲಿಸಿದ್ದರು. ಈ ವೇಳೆ ನಾಗೇಶ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಮುಖ್ಯಪೇದೆ ಮಹಾದೇವಯ್ಯ ನಾಗೇಶ್‌ ನನ್ನು ಹಿಡಿಯಲು ಹೋಗಿದ್ದಾರೆ. ಆದರೆ ಅಷ್ಟರಲ್ಲೇ ಆರೋಪಿ ಮಹಾದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಮುಂದಾದಾಗ  ಇನ್ಸ್‌ ಪೆಕ್ಟರ್ ಪ್ರಶಾಂತ್ ಅವರು ಆರೋಪಿಯನ್ನು ಹಿಡಿಯಲು ಗಾಳಿಯಲ್ಲಿ ಒಂದು ಬಾರಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದರು

ಆದರೆ ನಾಗೇಶ್ ಬಗ್ಗದೆ ಹಲ್ಲೆ ಮುಂದುವರೆಸಿ ತಪ್ಪಿಸಿಕೊಳ್ಳಲು ಮುಂದಾದಾಗ ಪೊಲೀಸರು ಆರೋಪಿ  ಬಲಗಾಲಿಗೆ ಗುಂಡು ಹೊಡೆದು ಬಂಧಿಸಿ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ  ಬಿಜಿಎಸ್ ಆಸ್ಪತ್ರೆಗೆ ಆರೋಪಿಯನ್ನು ದಾಖಲು ಮಾಡಿದ್ದಾರೆ.

2 ವಾರದ ಬಳಿಕ ಸೆರೆ:

ಅನ್ನಪೂರ್ಣೇಶ್ವರಿನಗರದ ‘ಡಿ’ ಗ್ರೂಪ್‌ ಲೇಔಟ್‌ ನಿವಾಸಿ ನಾಗೇಶ್‌ (34) ಆ್ಯಸಿಡ್‌ ದಾಳಿ ಬಳಿಕ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರ 10 ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಚುರುಕುಗೊಳಿಸಲಾಗಿತ್ತು.

ಆರೋಪಿಯ ಬಗ್ಗೆ ಸಣ್ಣ ಸುಳಿವು ಸಿಗದ ಪರಿಣಾಮ ಕನ್ನಡ, ತೆಲುಗು, ತಮಿಳು, ಇಂಗ್ಲಿಷ್‌ ಭಾಷೆಯಲ್ಲಿ ಆರೋಪಿಯ ಭಾವಚಿತ್ರ ಸಹಿತ ಕರಪತ್ರ ಮುದ್ರಿಸಿ ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಕೇರಳ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಸಾರ್ವಜನಿಕ ಸ್ಥಳಗಳು, ದೇವಸ್ಥಾನಗಳು, ಆಶ್ರಯಮಗಳು, ಮಠಗಳು ಸೇರಿದಂತೆ ಸಾರ್ವಜನಿಕರು ಹೆಚ್ಚು ಸೇರುವ ಸ್ಥಳಗಳಲ್ಲಿ ಹಂಚಲಾಗಿತ್ತು.

ಆರೋಪಿಗೆ ಬಲೆ:

ಪೊಲೀಸರ ಒಂದು ತಂಡ ತಮಿಳುನಾಡಿನ ತಿರುವಣ್ಣಾಮಲೈಯಲ್ಲಿ ಶಿವನ ದೇವಾಲಯವಿರುವ ರಮಣ ಆಶ್ರಮದಲ್ಲಿಯೂ ಕರಪತ್ರ ಹಂಚಿತ್ತು. ಈ ಕರಪತ್ರದಲ್ಲಿ ಮುದ್ರಿತವಾಗಿದ್ದ ಭಾವಚಿತ್ರ ಗಮನಿಸಿದ್ದ ಸ್ಥಳೀಯರು ಕೆಲ ದಿನಗಳಿಂದ ಆಶ್ರಮದಲ್ಲಿ ಕಾವಿಧಾರಿಯಾಗಿ ಇರುವ ನಾಗೇಶ್‌ ನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಮಾಹಿತಿ ಆಧರಿಸಿ ಪೊಲೀಸರು ನಿನ್ನೆ ಸಂಜೆ ಭಕ್ತರ ಸೋಗಿನಲ್ಲಿ ಆಶ್ರಮಕ್ಕೆ ತೆರಳಿ ಕಾವಿಧಾರಿಯಾಗಿದ್ದ ನಾಗೇಶ್‌ ನ ಚಲನವಲನದ ಮೇಲೆ ನಿಗಾವಹಿಸಿದ್ದರು. ಬಳಿಕ ಆಶ್ರಮದ ಮೇಲ್ವಿಚಾರಕರನ್ನು ಸಂಪರ್ಕಿಸಿ ನಾಗೇಶ್‌ ನ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ಕಾವಿಬಟ್ಟೆ ಕಳಚಿಸಿ ವಿಚಾರಣೆ ಮಾಡಿದಾಗ ನಾಗೇಶನ ನಿಜ ಸ್ವರೂಪ ಬೆಳಕಿಗೆ ಬಂದಿದೆ.

 ಆರೋಪಿ ನಾಗೇಶ್‌ ತನ್ನನ್ನು ಪ್ರೀತಿಸುವಂತೆ 25 ವರ್ಷದ ಯುವತಿ ಹಿಂದೆ ಬಂದಿದ್ದ. ಪ್ರೀತಿ ನಿರಾಕರಿಸಿದ್ದ ಯುವತಿ ತನ್ನಪಾಡಿಗೆ ತಾನಿದ್ದಳು. ಎಂಕಾಂ ಪದವೀಧರೆಯಾದ ಯುವತಿ ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದಳು. ಏ.28ರಂದು ಬೆಳಗ್ಗೆ ಸುಂಕದಕಟ್ಟೆಯಲ್ಲಿರುವ ಕಂಪನಿಯ ಕಚೇರಿ ಬಳಿ ಬಂದಿದ್ದಳು. ಈ ವೇಳೆ ಆ್ಯಸಿಡ್‌ ತುಂಬಿದ ಬಾಟಲಿಯೊಂದಿಗೆ ಪ್ರತ್ಯಕ್ಷನಾದ ಕಿಡಿಗೇಡಿ ನಾಗೇಶ್‌, ಏಕಾಏಕಿ ಯುವತಿ ಮೇಲೆ ಆ್ಯಸಿಡ್‌ ದಾಳಿ ನಡೆಸಿ ಪರಾರಿಯಾಗಿದ್ದ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ನಾಗೇಶ್‌ ಆ್ಯಸಿಡ್‌ ದಾಳಿ ಬಳಿಕ ಕೆಲ ವಕೀಲರನ್ನು ಸಂಪರ್ಕಿಸಿ ತನ್ನ ಪರ ವಕಾಲತ್ತು ವಹಿಸುವಂತೆ ದುಂಬಾಲು ಬಿದ್ದಿದ್ದ. ಆದರೆ, ಇದು ಗಂಭೀರ ಪ್ರಕರಣವಾಗಿದ್ದರಿಂದ ವಕೀಲರು ವಕಾಲತ್ತು ವಹಿಸಲು ಹಿಂದೇಟು ಹಾಕಿದ್ದರು. ಈ ವೇಳೆ ಆರೋಪಿ ಮೆಜೆಸ್ಟಿಕ್‌ ನಲ್ಲಿ ದ್ವಿಚಕ್ರ ವಾಹನ ಬಿಟ್ಟು ಮೊಬೈಲ್‌ ಸ್ವಿಚ್  ಆಫ್‌ ಮಾಡಿಕೊಂಡು ಪರಾರಿಯಾಗಿದ್ದ. ಮತ್ತೊಂದು ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆಗೆ ಇಳಿದಿದ್ದರು. 15 ದಿನ ಕಳೆದರೂ ಆರೋಪಿಯ ಸುಳಿವು ಪತ್ತೆಯಾಗಿರಲಿಲ್ಲ. 16ನೇ ದಿನ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಆರೋಪಿ ನಾಗೇಶ್‌ ಅಪ್ಪಟ ದೈವ ಭಕ್ತನಾಗಿದ್ದ. ಬೆಂಗಳೂರಿನಲ್ಲಿ ಇರುವಾಗಲೂ ಮಠ, ದೇವಸ್ಥಾನ, ಧಾರ್ಮಿಕ ಸ್ಥಳಗಳಿಗೆ ಹೋಗುತ್ತಿದ್ದ. ಮನೆಯಲ್ಲೂ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಮುಜುಗರದ ಸ್ವಭಾವ ಹೊಂದಿದ್ದ. ಆ್ಯಸಿಡ್‌ ದಾಳಿ ಬಳಿಕ ಆರೋಪಿ ಸ್ವಾಮೀಜಿ ವೇಷತೊಟ್ಟು ತಲೆಮರೆಸಿಕೊಂಡಿದ್ದ. ಆರೋಪಿಯು ತಿರುವಣ್ಣಾಮಲೈನ ಶಿವನ ದೇವಾಲಯವಿರುವ ರಮಣ ಆಶ್ರಮದಲ್ಲಿ ಖಾವಿಧಾರಿಯಾಗಿ ಧಾನ್ಯ, ಜಪ-ತಪ ಮಾಡಿಕೊಂಡಿದ್ದ. ಆಶ್ರಮದಲ್ಲಿ ಉಚಿತ ಊಟ, ವಸತಿ ಸೌಲಭ್ಯ ಇದ್ದಿದ್ದರಿಂದ ಆರೋಪಿಯು ಕಾವಿಧಾರಿಯಾಗಿ ತನ್ನ ಗುರುತು ಮರೆಮಾಚಿಕೊಂಡು ಕಾಲ ಕಳೆಯುತ್ತಿದ್ದ. ಅಲ್ಲಿಗೆ ಬರುವ ಭಕ್ತರಿಗೆ ತಾನು ಸ್ವಾಮೀಜಿ ಎಂದು ನಂಬಿಸಿದ್ದ ಎಂದು ತಿಳಿಸಿದರು.

Join Whatsapp
Exit mobile version