ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ನೆಹರೂ: ಮುಖ್ಯಮಂತ್ರಿ ಸಿದ್ದರಾಮಯ್ಯ

Prasthutha|

ಬೆಂಗಳೂರು ನ 14: ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

- Advertisement -

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 134 ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ ನಾವು ಸಲ್ಲಿಸುವ ಅರ್ಥಪೂರ್ಣ ಶ್ರದ್ಧಾಂಜಲಿ ಎಂದರು.

- Advertisement -

ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭಸಿದ್ದರು. ಸ್ವಾತಂತ್ರ್ಯಾ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು ಎಂದು ವಿವರಿಸಿದರು.

ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು ಎಂದು ಸ್ಮರಿಸಿದರು.

ಯೋಜನಾ ಆಯೋಗ ರಚಿಸಿದರು. ಪಂಚವಾರ್ಷಿಕ ಯೋಜನೆ ಜಾರಿಗೆ ತಙದರು. ಕೊನೆ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಚ್ ಡಿ ಕೆಗೆ ಹೊಟ್ಟೆಕಿಚ್ಚು

ಒಂದು ಕೋಟಿಗೂ ಅಧಿಕ ಮಹಿಳೆಯರು ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಇದು ಸಾಧನೆ ಅಲ್ವಾ ? ಈ ಸಾಧನೆಗಳನ್ನು ಹೆಚ್ ಡಿ ಕೆಗೆ ಸಹಿಸಲು ಆಗುತ್ತಿಲ್ಲ. ಈ ಕಾರಣಕ್ಕೇ ಪರದಾಡುತ್ತಿದ್ದಾರೆ ಎಂದು ಇದೇ ವೇಳೆ ಸಿಎಂ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Join Whatsapp