ರಾಜ್ಯಪಾಲರ ಭಾಷಣದಲ್ಲಿ ಕನ್ನಡಿಗರನ್ನು ಸಾಲದ ಪ್ರಪಾತಕ್ಕೆ ತಳ್ಳಿದ್ದರ ಬಗ್ಗೆ ಪ್ರಸ್ತಾಪವೇ ಇಲ್ಲ: ಸಿದ್ದರಾಮಯ್ಯ ಟೀಕೆ

Prasthutha|

ಬೆಂಗಳೂರು: ಡಬ್ಬಲ್ ಎಂಜಿನ್ ಸರ್ಕಾರ ನಾಡಿಗೆ ಡಬ್ಬಲ್ ದ್ರೋಹ ಎಸಗಿದೆ. ಸರ್ಕಾರ ರಾಜ್ಯಪಾಲರ ಬಾಯಿಂದ ಸುಳ್ಳು ಹೇಳಿಸಿದೆ. ಸರ್ಕಾರ ರಾಜ್ಯಪಾಲರ ದಿಕ್ಕು ತಪ್ಪಿಸಿ ರಾಜ್ಯಪಾಲರ ಮಾತಿನ ಮೂಲಕ ನಾಡಿನ ಜನರ ದಿಕ್ಕು ತಪ್ಪಿಸಿದೆ. ಕನ್ನಡಿಗರನ್ನು ಸಾಲದ ಪ್ರಪಾತಕ್ಕೆ ತಳ್ಳಿದ್ದರ ಬಗ್ಗೆ ಪ್ರಸ್ತಾಪವೇ ಇಲ್ಲ. ಕೇಂದ್ರ ಸರ್ಕಾರದ ಕೆಲವು ಯೋಜನೆಗಳನ್ನು ತನ್ನ ಯೋಜನೆಗಳು ಎಂದು ಬಿಂಬಿಸಿಕೊಂಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ನಾಗರಿಕ ಸರ್ಕಾರಕ್ಕೆ ನಿರ್ದಿಷ್ಟವಾದ ಗೊತ್ತು-ಗುರಿಗಳಿರುತ್ತವೆ. ಆದರೆ, ರಾಜ್ಯಪಾಲರ ಭಾಷಣ ಕೇಳಿದ ಮೇಲೆ, ಈ ಸರ್ಕಾರಕ್ಕೆ ಯಾವುದೇ ಗೊತ್ತು ಗುರಿಗಳಿಲ್ಲ ಎಂದು ಸ್ಪಷ್ಟವಾಗುತ್ತದೆ ಎಂದರು.
ಸರ್ಕಾಗಳಿಗೆ ತನ್ನದೇ ಆದ ಆಧ್ಯತೆಗಳಿರುತ್ತವೆ. ಆಧ್ಯತೆಗಳಲ್ಲಿ ಮುಖ್ಯವಾಗಿ ಒಂದು, ಕಲ್ಯಾಣ ಕಾರ್ಯಕ್ರಮಗಳಿಗೆ ಒತ್ತು ಕೊಡುವುದು, ಎರಡು-ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ಕೊಡುವುದು ಆಗಿರುತ್ತದೆ. ಸರ್ಕಾರ ಸಂಪೂರ್ಣವಾಗಿ ಇವೆರಡನ್ನೂ ಮರೆತಿದೆ ಎಂದು ಸ್ಪಷ್ಟವಾಗುತ್ತಿದೆ. ರಾಜ್ಯದ ಜನರಿಗೆ ಕಲ್ಯಾಣವೂ ಇಲ್ಲ. ಅಭಿವೃದ್ಧಿಯ ಮಾತೇ ಇಲ್ಲ ಎಂದು ಹೇಳಿದರು.
ಸಾಮಾನ್ಯವಾಗಿ ರಾಜ್ಯಪಾಲರ ಭಾಷಣ ಸರ್ಕಾರದ ಒಂದು ವರ್ಷದ ಸಾಧನೆ ಮತ್ತು ಮುಂದಿನ ವರ್ಷಕ್ಕೆ ಇರಬೇಕಾದ ಮುನ್ನೋಟದ ಗುರಿಗಳನ್ನು ಒಳಗೊಂಡಿರುತ್ತದೆ. ಈ ಸರ್ಕಾರ ಕಳೆದ ಒಂದು ವರ್ಷದಿಂದ ಏನನ್ನೂ ಮಾಡಿಲ್ಲ ಎಂಬುದಕ್ಕೆ ರಾಜ್ಯಪಾಲರ ಭಾಷಣವೇ ಸಾಕ್ಷಿ. ರಾಜ್ಯಪಾಲರ ಭಾಷಣದಲ್ಲಿ 116 ಪ್ಯಾರಾಗಳಿವೆ. ಅದರಲ್ಲಿ 23 ಪ್ಯಾರಾಗಳು ಕೋವಿಡ್ ಮತ್ತು ಪ್ರವಾಹಕ್ಕೆ ಸಂಬಂಧಪಟ್ಟಿವೆ. ಇನ್ನುಳಿದಂತೆ ಸುಮಾರು 30 ಪ್ಯಾರಾಗಳು ಹಳೆಯವು ಮತ್ತು ಭರವಸೆಗಳಾಗಿವೆ. ಹಾಗೂ ನಮ್ಮ ಸರ್ಕಾರ ಸಾಧನೆಗಳೂ ಇವೆ. ಕೆಲವಕ್ಕೆ ಹೆಸರು ಬದಲಾಯಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯಪಾಲರ ಭಾಷಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಮಹಿಳೆಯರು, ಮಕ್ಕಳು, ಅಲ್ಪಸಂಖ್ಯಾತರು, ರೈತರು, ಕುಶಲ ಕರ್ಮಿಗಳು, ಸಣ್ಣ ಮಧ್ಯಮ ಸೂಕ್ಷ್ಮ ಕೈಗಾರಿಕೆಗಳನ್ನು ನಡೆಸುವವರು, ಬೀದಿ ಬದಿ ವ್ಯಾಪಾರಿಗಳು, ದಿನಗೂಲಿ ಕಾರ್ಮಿಕರಿಗೆ ಈ ಸರ್ಕಾರ ಏನನ್ನೂ ಮಾಡಿಲ್ಲ ಎಂಬುದನ್ನು ಒಪ್ಪಿಕೊಂಡಿರುವುದು ರಾಜ್ಯಪಾಲರ ಭಾಷಣದಿಂದ ಅರ್ಥವಾಗುತ್ತದೆ ಎಂದರು.
ರಾಜ್ಯದಲ್ಲಿ ನಿರುದ್ಯೋಗ ತಾಂಡವ ಆಡುತ್ತಿದೆ. ಆದರೆ, ನಿರುದ್ಯೋಗವನ್ನು ಪರಿಹರಿಸಲು ಏನನ್ನೂ ಮಾಡಿಲ್ಲ ಎಂಬುದನ್ನು ಸರ್ಕಾರವೇ ಪ್ರಾಮಾಣಿಕವಾಗಿ ಒಪ್ಪಿಕೊಂಡಿದೆ ಎನ್ನುವುದು ರಾಜ್ಯಪಾಲರ ಭಾಷಣದ ಮೂಲಕ ಸ್ಪಷ್ಟವಾಗುತ್ತದೆ. ಕಲ್ಯಾಣ ಕರ್ನಾಟಕ ಮಂಡಳಿಗೆ ಸಂಬಂಧಪಟ್ಟ ಹಾಗೆ ಹೆಸರು ಬದಲಾಯಿಸಿದ್ದು, ಕಚೇರಿ ಸ್ಥಳಾಂತರಿಸಿದ್ದನ್ನೇ ಸಾಧನೆ ಎಂದು ಹೇಳಿಕೊಂಡಿದೆ. ನೀರಾವರಿ ಯೋಜನೆಗಳಿಗೆ ಏನನ್ನೂ ಕೊಟ್ಟಿಲ್ಲ ಎನ್ನುವುದನ್ನು ಸರ್ಕಾರ ಒಪ್ಪಿಕೊಂಡಿದೆ. ಉದಾಹರಣೆಗೆ ಗ್ರಾಮ ಒನ್ ಬಗ್ಗೆ ಭರ್ಜರಿ ಪ್ರಚಾರ ತೆಗೆದುಕೊಳ್ಳುತ್ತಿದೆ. ರಾಜ್ಯಪಾಲರ ಬಾಯಲ್ಲೂ ಹೇಳಿಸಿದೆ. ಆದರೆ, ಈ ಯೋಜನೆ ನಮ್ಮ ಸರ್ಕಾರದ ಬಾಪೂಜಿ ಸೇವಾ ಕೇಂದ್ರಗಳ ನಕಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

- Advertisement -

ಅಮೃತ ಗ್ರಾಮ ಪಂಚಾಯ್ತಿ ಯೋಜನೆ ಅಡಿ ಗ್ರಾಮ ಪಂಚಾಯ್ತಿಗಳಿಗೆ ೨೫ ಲಕ್ಷ ಕೊಡುವುದನ್ನೆ ಸರ್ಕಾರ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದೆ. ಆದರೆ, ನಮ್ಮ ಸರ್ಕಾರ ಇದ್ದಾಗ ಸಾವಿರ ಗ್ರಾಮ ಪಂಚಾಯ್ತಿಗಳಿಗೆ ತಲಾ ಒಂದು ಕೋಟಿ ರೂಪಾಯಿ ನೀಡಿದ್ದೆವು. ಕೋವಿಡ್ ಎರಡನೇ ಅಲೆಯಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಲಕ್ಷಾಂತರ ಜನ ಮರಣ ಹೊಂದಿದರು. ಸರಿಯಾಗಿ ಆಕ್ಸಿಜನ್ ವ್ಯವಸ್ಥೆ, ಬೆಡ್ಗಳು, ಔಷಧಿ, ಆಂಬುಲೆನ್ಸ್, ಆಸ್ಪತ್ರೆ, ವೈದ್ಯರು, ದಾದಿಯರು, ಇತ್ಯಾದಿ ಯಾವುದೇ ಸಿದ್ಧತೆಗಳನ್ನು ಮಾಡಿಕೊಳ್ಳದೆ ಜನರನ್ನು ಬೀದಿ ಬೀದಿಯಲ್ಲಿ ಕೊಂದು ಹಾಕಿದರು. ಅದಕ್ಕೆ ಒಂದು ಸಣ್ಣ ಪಶ್ಚಾತ್ತಾಪವೂ ಇಲ್ಲ.
ಜನರನ್ನು ಸಂಕಷ್ಟಕ್ಕೆ ಸಿಲುಕಿಸಿ ಅವರು ಸಾಯುವಂತೆ ಮಾಡಿದ್ದನ್ನೇ ಸಾಧನೆ ಎಂದು ಹೇಳುವುದಾದರೆ ಮರಣ ಹೊಂದಿದ ನಾಲ್ಕು ಲಕ್ಷ ಆತ್ಮಗಳಿಗೆ ಏನನ್ನಿಸಬೇಡ?
ತಂದೆ-ತಾಯಿಯರನ್ನು, ದುಡಿಯುವ ಮಕ್ಕಳನ್ನು, ಗಂಡ ಹೆಂಡತಿಯರನ್ನು ಕಳೆದುಕೊಂಡು ಅನಾಥರಾಗಿರುವ ಕುಟುಂಬದ ಸದಸ್ಯರುಗಳಿಗೆ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ಅವಮಾನ ಮಾಡಿದೆ. ಏಕೆಂದರೆ, ವರ್ಗಗಳಿಗೆ ಸಂಬಂಧಪಟ್ಟ ಯಾವುದೊಂದು ಕಾರ್ಯಕ್ರಮವೂ, ಯಾವುದೇ ಮಾಹಿತಿ ಈ ಭಾಷಣದಲ್ಲಿ ಇಲ್ಲ.
ರಾಜ್ಯಪಾಲರ ಭಾಷಣದಲ್ಲಿ ಸಾಧನೆಗಳಿಗಿಂತ ಬಹುತೇಕ ಭರವಸೆಗಳೇ ಇವೆ. 116 ಪ್ಯಾರಾಗಳಲ್ಲಿ ಹಲವಾರು ಸುಳ್ಳುಗಳನ್ನು ರಾಜ್ಯಪಾಲರ ಮೂಲಕ ಹೇಳಿಸಲಾಗಿದೆ. ನಮ್ಮ ಸರ್ಕಾರದ ಸಾಧನೆಗಳನ್ನು ತನ್ನ ಸಾಧನೆ ಎಂದು ಈ ಸರ್ಕಾರ ಹೇಳಿಕೊಳ್ಳುತ್ತಿದೆ. ಪತ್ರಕರ್ತರಿಗೆ ಮಾನ್ಯತೆ ಪತ್ರ ಹಾಗೂ ಬಸ್ ಪಾಸ್ ಸೌಲಭ್ಯವನ್ನು ಈ ಹಿಂದಿನಿಂದಲೂ ಒದಗಿಸಲಾಗುತ್ತಿದೆ. ಆದರೂ ರಾಜ್ಯಪಾಲರ ಭಾಷಣದಲ್ಲಿ ಸರ್ಕಾರ ಇದು ತನ್ನ ಸಾಧನೆ ಎಂದು ಹೇಳಿಕೊಂಡಿರುವುದು ಹಾಸ್ಯಾಸ್ಪದ. ಈ ಸರ್ಕಾರ ಅತ್ಯಂತ ನಿಷ್ಕ್ರಿಯವಾಗಿದೆ. ವೈಫಲ್ಯಗಳಿಂದ ಕೂಡಿದೆ. ಜನರಿಗಾಗಿ ಏನೂ ಮಾಡುತ್ತಿಲ್ಲ ಎಂಬುದು ರಾಜ್ಯಪಾಲರ ಭಾಷಣದಿಂದ ಸ್ಪಷ್ಟವಾಗಿದೆ.
ನಾನು ನನ್ನ ರಾಜಕೀಯ ಅನುಭವದ ಮೇಲೆ ಹೇಳುವುದಾದರೆ ಇಷ್ಟೊಂದು ಕೆಟ್ಟದಾದ ಭಾಷಣವನ್ನು ಎಂದೂ ಕೇಳಿರಲಿಲ್ಲ. ಏನನ್ನೂ ಮಾಡದ ಸರ್ಕಾರವನ್ನು ಆರಿಸಿ ಕಳುಹಿಸಿದ್ದು ಈ ನಾಡಿನ ದೌರ್ಭಾಗ್ಯ ಎಂಬುದು ರಾಜ್ಯಪಾಲರ ಭಾಷಣದಿಂದ ರಾಜ್ಯದ ಜನರಿಗೆ ಇಂದು ಅರ್ಥವಾಗಿದೆ. ಇಂದು ರೈತರಾದಿಯಾಗಿ ಸಮಸ್ತ ದುಡಿಯುವ ಜನ, ಸಮಸ್ತ ದಲಿತ ಮತ್ತು ಮಹಿಳಾ ಸಮುದಾಯ ಎಲ್ಲರೂ ಭೀಕರ ಸಂಕಷ್ಟದಲ್ಲಿದ್ದಾರೆ ಎಂಬುದು ಈ ಸರ್ಕಾರಕ್ಕೆ ಇನ್ನೂ ಮನದಟ್ಟಾಗಿಲ್ಲ. ಅಥವಾ ಉದ್ದೇಶಪೂರ್ವಕವಾಗಿಯೇ ಈ ವರ್ಗಗಳನ್ನು ಸರ್ಕಾರ ದಮನ ಮಾಡುತ್ತಿದೆ ಎಂದು ನಾವು ಅರ್ಥ ಮಾಡಿಕೊಳ್ಳಬೇಕು ಎಂದಿ ಸಿದ್ದರಾಮಯ್ಯ ಹೇಳಿದರು.



Join Whatsapp