ಅತಿವೃಷ್ಟಿ ಬೆಳೆ ಹಾನಿ: 14 ಲಕ್ಷ ರೈತರ ಖಾತೆಗೆ 926.43 ಕೋಟಿ ರೂ.ಪರಿಹಾರ: ಆರ್.ಅಶೋಕ

Prasthutha|

ಬೆಳಗಾವಿ: ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾದ 14 ಲಕ್ಷ ರೈತರ ಖಾತೆಗೆ 926.43 ಕೋಟಿ ರೂ.ಪರಿಹಾರ ಧನವನ್ನು ತಿಂಗಳ ಒಳಗಾಗಿ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಯಲ್ಲಿಂದು ತಿಳಿಸಿದರು.

- Advertisement -

ಸದನದಲ್ಲಿ ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿದ ಸಚಿವರು, ಅತಿವೃಷ್ಟಿಯಿಂದ 12.52 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಬೆಳೆ ಹಾನಿ ಸಂಭವಿಸಿದ್ದು, ತಕ್ಷಣ ಜಂಟಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ ಪರಿಹಾರವನ್ನು ಒದಗಿಸಲಾಗಿದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಮೊದಲ ಬಾರಿ 841.57 ಕೋಟಿ ರೂ. ಮತ್ತು ಎರಡನೇ ಬಾರಿ 128.92 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಎರಡು ಬಾರಿ ಕೇಂದ್ರ ತಂಡ ಆಗಮಿಸಿ ಸಮೀಕ್ಷೆ ಕಾರ್ಯ ನಡೆಸಿದೆ ಎಂದು ಹೇಳಿದರು.

ಅತಿವೃಷ್ಟಿಯಿಂದ 23716 ಮನೆಗಳಿಗೆ ಹಾನಿ ಸಂಭವಿಸಿದ್ದು, 332.87 ಕೋಟಿ ರೂ. ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ಸಂಪೂರ್ಣ ಹಾನಿಗೀಡಾದ ಮನೆಗಳಿಗೆ 5 ಲಕ್ಷ ರೂ, ತೀವ್ರ ಹಾನಿಗೀಡಾದ ಮನೆಗಳಿಗೆ 3 ಲಕ್ಷ ರೂ. ಹಾಗೂ ಭಾಗಶಃ ಹಾನಿಗೀಡಾದ ಮನೆಗಳಿಗೆ 50 ಸಾವಿರ ರೂ. ಪರಿಹಾರ ಒದಗಿಸಲಾಗುತ್ತಿದೆ.

- Advertisement -

ಕೊಡಗಿನಲ್ಲಿ ಹಾನಿಗೀಡಾದ ಕಾಫಿ ಬೆಳೆಗೆ ಪ್ರತಿ ಹೆಕ್ಟೇರ್ಗೆ 18 ಸಾವಿರ ರೂ.ನಂತೆ ಒಟ್ಟು 38. 80 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಅತಿವೃಷ್ಟಿಯಿಂದ 62 ಜೀವ ಹಾನಿ ಸಂಭವಿಸಿದ್ದು, 945 ಜಾನುವಾರುಗಳು ಸಾವಿಗೀಡಾಗಿವೆ. 54. 716 ಮನೆ, 3306 ಸೇತುವೆಗಳಿಗೆ, 995 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ. ರಾಜ್ಯ ಸರ್ಕಾರ ತಕ್ಷಣ ಸಂತ್ರಸ್ತರ ನೆರವಿಗೆ ಧಾವಿಸಿ ಪರಿಹಾರವನ್ನು ಪ್ರಾಮಾಣಿಕವಾಗಿ ಒದಗಿಸಿದೆ. ಕಾಳಜಿ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಉತ್ತಮ ಊಟ ಉಪಾಹಾರದ ವ್ಯವಸ್ಥೆಯನ್ನು ಸರ್ಕಾರ ಸ್ಥಳೀಯವಾಗಿ ಕೈಗೊಂಡಿದೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರ 15 ನೇ ಹಣಕಾಸು ಯೋಜನೆಯಡಿ 5270 ಕೋಟಿ ರೂ. ಬಿಡುಗಡೆ ಮಾಡುತ್ತಿದೆ. ಹೆಚ್ಚಿನ ಪರಿಹಾರ ಕೋರಿ ಮುಖ್ಯಮಂತ್ರಿ ಅವರು ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ ಎಂದು ಸಚಿವರು ತಿಳಿಸಿದರು.

Join Whatsapp