ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಂದ ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Prasthutha|

ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಂದ ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರಿಯಾಂಕ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಾಜ್ಯದಲ್ಲಿ ಈಗ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳು ಹೆಚ್ಚಾಗಿದ್ದು, ಈ ಸಮಸ್ಯೆಗಳಿಂದ ರಾಜ್ಯದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸರ್ಕಾರ 40% ಕಮಿಷನ್ ಸರ್ಕಾರ ಎಂದು ದೇಶಾದ್ಯಂತ ಕುಖ್ಯಾತಿ ಪಡೆದಿದೆ. ಅದರರ್ಥ ಈ ಸರ್ಕಾರ ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದರ್ಥ. ಜನರು ಆರಿಸಿದ ಸರ್ಕಾರವನ್ನು ಶಾಸಕರ ಖರೀದಿ ಮೂಲಕ ಬೀಳಿಸಿ ಸರ್ಕಾರ ರಚಿಸಿದ್ದಾರೆ. ಇಂತಹ ಸರ್ಕಾರದ ನಿಯತ್ತು ಆರಂಭದಲ್ಲೇ ಹಾಳಾಗಿತ್ತು. ಇದರಿಂದ ಆಡಳಿತ ಕುಸಿಯಿತು. ಇಬ್ಬರು ಮುಖ್ಯಮಂತ್ರಿಗಳು ಬಂದರು. ಪರಿಣಾಮ ಅಭಿವೃದ್ಧಿ ಸ್ಥಗಿತವಾಗಿತ್ತು. ಈ ಸರ್ಕಾರ ಎಲ್ಲ ಹಂತದಲ್ಲಿ ರಾಜ್ಯವನ್ನು ಲೂಟಿ ಮಾಡಿದೆ ಎಂದು ಹೇಳಿದ್ದಾರೆ.

ಸರ್ಕಾರ ಲೂಟಿ, ದುರಾಸೆಯಿಂದ ರಚಿತವಾದರೆ ಅದು ಉತ್ತಮ ಆಡಳಿತ ನಡೆಸಲು ಹೇಗೆ ಸಾಧ್ಯ? ಈ ಸರ್ಕಾರ ಎಲ್ಲ ಹಂತದಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ನೇಮಕಾತಿ, ಕೋವಿಡ್, ಗುತ್ತಿಗೆಯಲ್ಲಿ, ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಹಗರಣ ಮಾಡಿದ್ದಾರೆ. ಭ್ರಷ್ಟಾಚಾರದಿಂದ ಗುತ್ತಿಗೆದಾರರು ಸತ್ತರೂ ಪ್ರಧಾನಮಂತ್ರಿಗಳಿಂದ ಉತ್ತರ ಇಲ್ಲ. ಈ ಭ್ರಷ್ಟ ಸರ್ಕಾರ ಮುಂದಿನ ಐದು ವರ್ಷಗಳ ಕಾಲ ಆಡಳಿತ ಮಾಡಿದರೆ ನಿಮ್ಮ ಭವಿಷ್ಯದ ಗತಿ ಏನು? ಬಿಜೆಪಿ ಶಾಸಕನ ಮನೆಯಲ್ಲಿ 8 ಕೋಟಿ ಅಕ್ರಮ ಹಣ ಸಿಗುತ್ತದೆ. ಆತನ ವಿರುದ್ದ ಯಾವುದೇ ಕ್ರಮವಿಲ್ಲ. ರೈತ ಬೆಲೆ ಏರಿಕೆಯಿಂದ ನರಳುತ್ತಿದ್ದರೂ ಸರ್ಕಾರ ಏನೂ ಮಾಡುತ್ತಿಲ್ಲ. ಇಂತಹ ಸರ್ಕಾರ ಬೇಕೇ? ಬದಲಾವಣೆ ಬೇಕೇ ಎಂದು ನೀವೇ ಆಲೋಚಿಸಬೇಕು ಎಂದಿದ್ದಾರೆ.

- Advertisement -

ನೀವು ಪರಿಶ್ರಮದಿಂದ ಹಣಸಂಪಾದಿಸಿ ನಿಮಗೆ ಬೇಕಾದನ್ನು ಖರೀದಿ ಮಾಡಲು ಹೋದಾಗ ಅದರ ಬೆಲೆ ಹೆಚ್ಚು ಎಂದು ಭಾವಿಸಿ ಖರೀದಿ ಮಾಡಲು ಆಗದಿದ್ದರೆ, ನಾನು ಯಾಕೆ ಇಷ್ಟೋಂದು ಪರಿಶ್ರಮ ಪಡಬೆಕು ಎಂಬ ಭಾವನೆ ಮೂಡುವುದಿಲ್ಲವೇ? ಬೆಲೆ ನಿಯಂತ್ರಿಸುವುದು ಸರ್ಕಾರದ ಕೆಲಸವಾಗಿದ್ದು, ಸರ್ಕಾರ ಇದನ್ನು ಯಾಕೆ ಮಾಡುತ್ತಿಲ್ಲ ಎಂದು ನಿಮಗೆ ಅನಿಸಿಲ್ಲವೇ? ಇಲ್ಲಿರುವ ಯುವಕರಿಗೆ ಸರ್ಕಾರ ಉದ್ಯೋಗ ನೀಡಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇವೆ. ಆದರೂ ಯಾವುದನ್ನು ಸರ್ಕಾರ ತುಂಬಿಲ್ಲ. ಎಲ್ಲಾ ನೇಮಕಾತಿಯಲ್ಲಿ ಅಕ್ರಮ ಮಾಡಿ ಯುವಕರ ಭವಿಷ್ಯ ನಾಶ ಮಾಡಲಾಗಿದೆ. ಪಿಎಸ್ಐ, ಜೆಇಇ, ಸಹಾಯಕ ಪ್ರಾಧ್ಯಾಪಕ ನೇಮಕಾತಿ ಎಲ್ಲದರಲ್ಲೂ ಅಕ್ರಮ ಮಾಡಲಾಗಿದೆ. ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ಅನ್ಯಾಯ ಮಾಡಲಾಗುತ್ತಿದೆ. ಕರ್ನಾಟಕ ರೈತರ ನಾಡು ಈ ನಾಡಿನಲ್ಲಿ ರೈತರ ಪರಿಸ್ಥಿತಿಯನ್ನು ಯಾವ ಹಂತಕ್ಕೆ ತಂದು ನಿಲ್ಲಿಸಿದ್ದಾರೆ? ಪ್ರತಿ ಎಕರೆಗೆ 25 ಸಾವಿರ ತೆರಿಗೆ ಕಟ್ಟಬೇಕು. 5% ರಷ್ಟು ಜಿಎಸ್ಟಿ ಕಟ್ಟಬೇಕು. ಟ್ರ್ಯಾಕ್ಟರ್ ಖರೀದಿಸಿದರೆ 12%, ರಸಗೊಬ್ಬರದ ಮೇಲೆ 18% ಜಿಎಸ್ಟಿ ಹಾಕಲಾಗಿದೆ. ಡಿಎಪಿ ಬೆಲೆ 1300 ಆಗಿದೆ. ಅಷ್ಟೇ ಅಲ್ಲ ಈ ಹಿಂದೆ 50 ಕೆ.ಜಿ ಯುರಿಯಾ ಈಗ ಕಡಿಮೆ ಆಗಿದೆ. ಬೆಂಬಲ ಬೆಲೆ ನೀಡಿ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದರು. ಆದರೆ ಕೇವಲ ಸರ್ಕಾರದ ಮಂತ್ರಿಗಲು ಹಾಗೂ ಬಿಜೆಪಿ ಶಆಸಕರ ಆಸ್ತಿ ಮೊತ್ತ ಮಾತ್ರ ಹೆಚ್ಚಾಗುತ್ತಾ ಸಾಗಿದೆ. ಬೇರೆ ರಾಜ್ಯಗಳಲ್ಲಿ 3500 ರಿಂದ 4000 ಇರುವ ಬೆಂಬಲ ಬೆಲೆ ರಾಜ್ಯದಲ್ಲಿ ಕೇವಲ 2500 ಮಾತ್ರ ಇದೆ. ಇಲ್ಲಿನ ಸಕ್ಕರೆ ಕಾರ್ಖಾನೆ ಖಾಸಗಿಯವರಿಗೆ ಮಾರಲು ಮುಂದಾಗಿದ್ದಾರೆ. ಕಾಂಗ್ರೆಸ್ ಇದಕ್ಕೆ ಅವಕಾಶ ನೀಡುವುದಿಲ್ಲ. ಈ ಸರ್ಕಾರ ನಿಮಗೆ ದ್ರೋಹ ಮಾಡಲು ಕಾಂಗ್ರೆಸ್ ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಎಚ್ಚರಿಕೆ ನೀಡಿದ್ದಾರೆ.

Join Whatsapp