Home ಟಾಪ್ ಸುದ್ದಿಗಳು ನವೆಂಬರ್ 11 ರಂದು ಪ್ರಧಾನಿ ಭೇಟಿ: ಪ್ರಯಾಣಿಕರು, ಸಂಚಾರ ವ್ಯವಸ್ಥೆಗೆ ತೊಡಕಾಗದಂತೆ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ನವೆಂಬರ್ 11 ರಂದು ಪ್ರಧಾನಿ ಭೇಟಿ: ಪ್ರಯಾಣಿಕರು, ಸಂಚಾರ ವ್ಯವಸ್ಥೆಗೆ ತೊಡಕಾಗದಂತೆ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಉದ್ಘಾಟನೆ ಹಾಗೂ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಈ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರ್ವಭಾವಿ ಸಭೆ ನಡೆಸಿದರು.

ಈ ಕಾರ್ಯಕ್ರಮದಿಂದ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕು ಆಗದಂತೆ ಕಾರ್ಯಕ್ರಮ ಆಯೋಜಿಸುವಂತೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದಕ್ಕೆ ಪೂರ್ವಭಾವಿಯಾಗಿ ಎಲ್ಲ ಜಿಲ್ಲೆಗಳ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸುವ ‘ಬನ್ನಿ ನಾಡ ಕಟ್ಟೋಣ’ ಎಂಬ ಅಭಿಯಾನ ನಾಳೆಯಿಂದ ಪ್ರಾರಂಭವಾಗಲಿದೆ. ಈ ಅಭಿಯಾನ ಯಶಸ್ವಿಗೊಳಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಮತ್ತು ಪಿಡಿಓಗಳ ಸಹಕಾರ ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಮೃತ್ತಿಕೆ ಸಂಗ್ರಹಿಸಲು 20 ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದ್ದು 15 ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮೃತ್ತಿಕೆ ಸಂಗ್ರಹಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದರು.

ಮೃತ್ತಿಕೆ ಸಂಗ್ರಹ ಅಭಿಯಾನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಆರ್. ಅಶೋಕ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಡಾ. ಕೆ. ಸುಧಾಕರ್, ಬಿ. ಎ. ಬಸವರಾಜ, ಕೆ. ಗೋಪಾಲಯ್ಯ, ಕೆ.ಸಿ. ನಾರಾಯಣ ಗೌಡ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಕೃಷ್ಣಪ್ಪ, ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.

Join Whatsapp
Exit mobile version