ಉಡುಪಿಯಲ್ಲಿ ಮಳೆಗೆ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್

Prasthutha|

ಬೆಂಗಳೂರು: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಜಿಲ್ಲಾಡಳಿತದಿಂದ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾಳ್ಕರ್, ಮಳೆಗಾಲದ ಸಿದ್ಧತೆಗಾಗಿ ಈಗಾಗಲೇ ಉಡುಪಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಬೀಳುವ ಅಪಾಯವಿರುವ ಮರಗಳನ್ನು ಕಡಿಯುವಂತೆ ಸೂಚನೆ ನೀಡಲಾಯಿತು. ಅಂತಹ ಸುಮಾರು 400 ಮರಗಳನ್ನು ತೆಗೆಯಲಾಗಿದೆ ಮತ್ತು 80 ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲಾಗಿದೆ.

ಕೆಲವು ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳನ್ನು ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಕಳೆದ ವರ್ಷ ಮಳೆಯಿಂದ ಉಂಟಾದ ಸಮಸ್ಯೆಗಳಿಂದ ಪಾಠ ಕಲಿತು ಈ ವರ್ಷ ವಿಶೇಷ ಮುಂಜಾಗ್ರತೆ ವಹಿಸಲಾಗಿದೆ. ಭೂಕುಸಿತದಿಂದ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ತಕ್ಷಣದ ಪರಿಹಾರ ಕ್ರಮಗಳಿಗೆ ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಹೆಬ್ಬಾಳ್ಕರ್ ತಿಳಿಸಿದರು.



Join Whatsapp