ವಿವಾದಾತ್ಮಕ, ದ್ವೇಷ ಸಂದೇಶದ ಫ್ಲೆಕ್ಸ್ ಗಳು ಕಂಡುಬಂದ ಕೂಡಲೇ ತೆರವುಗೊಳಿಸಿ: ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸೂಚನೆ

Prasthutha|

ಮಂಗಳೂರು: ಅಕ್ರಮ ಮರಳು ಸಾಗಾಣಿಕೆ ತಡೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪೊಲೀಸರೊಂದಿಗೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು.

- Advertisement -


ಅವರು ಆ.19ರ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳುಗಾರಿಕೆ ತಡೆ, ಅನಧಿಕೃತ ಫ್ಲೆಕ್ಸ್ ತೆರವು ಹಾಗೂ ಹಬ್ಬ ಹರಿದಿನಗಳಲ್ಲಿ ಡಿಜೆ ಹಾಗೂ ಧ್ವನಿವರ್ಧಕಗಳ ಬಳಕೆಯ ಬಗ್ಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಉಳ್ಳಾಲ, ಕೋಟೆಪುರ, ಸೋಮೇಶ್ವರ, ಉಚ್ಚಿಲ, ಪೇರಿಬೈಲು, ತಲಪಾಡಿ ಸೇರಿದಂತೆ ವಿವಿಧೆಡೆ ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ವರದಿಯಾಗುತ್ತಿದೆ, ಅದನ್ನು ತಡೆಗಟ್ಟಲು ಜಿಲ್ಲಾಡಳಿತದಿಂದ ಅತಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಅಧಿಕಾರಿಗಳ ನಿಯೋಜನೆ ಹಾಗೂ ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಈ ಸ್ಥಳಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿಗಳನ್ನು ಪರಿಶೀಲಿಸಬೇಕು, ತಡರಾತ್ರಿ ಸಂಚರಿಸುವ ವಾಹನಗಳ ಮೇಲೆ ಕಣ್ಣಿಡಬೇಕು, ಮುಖ್ಯವಾಗಿ ಪೊಲೀಸ್ ಚೆಕ್ ಪೋಸ್ಟ್ಗಳಲ್ಲಿ ಮತ್ತಷ್ಟು ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

- Advertisement -


ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ, ಅಕ್ರಮ ಮರಳುಗಾರಿಕೆ ತಡೆಯಲು ಅಳವಡಿಸಿರುವ ಸಿಸಿಟಿವಿಗಳ ಫೂಟೇಜ್ ಅನ್ನು ಪರಿಶೀಲಿಸಿ, ಮೂವರು ಡಿಎಸ್ ಪಿಗಳು ವರದಿ ನೀಡುವಂತೆ ಸೂಚಿಸಿದ ಅವರು, ಸಿಸಿಟಿವಿಗಳನ್ನು ನೋಡಿ ಅಕ್ರಮ ಮರಳು ಸಾಗಾಣಿಕೆ ವಾಹನಗಳ ವಿರುದ್ಧ ಪ್ರಕರಣದ ದಾಖಲಿಸಬೇಕು, ಪ್ರಮುಖವಾಗಿ ಹೊತ್ತಲ್ಲದ ಹೊತ್ತಿನಲ್ಲಿ ಮರಳು ಸಾಗಾಣಿಕ ವಾಹನಗಳು ಸಂಚರಿಸುವುದನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಳ್ಳಬೇಕು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸಂಬಂಧಿಸಿದ ವಾಹನಗಳ ಪರವಾನಗಿಯನ್ನು ರದ್ದು ಪಡಿಸಿ, ಆ ವಾಹನಗಳನ್ನು ವಶಕ್ಕೆ ಪಡೆಯುವಂತೆ ತಿಳಿಸಿದರು.
ಜಿಲ್ಲಾಧಿಕಾರಿಯವರು ಮಾತನಾಡಿ, ಅಕ್ರಮ ಮರಳುಗಾರಿಕೆಯಾಗುವ ಸ್ಥಳಗಳಲ್ಲಿ ಅಲ್ಲಿನ ಗ್ರಾಮ ಸಹಾಯಕ, ಗ್ರಾಮ ಲೆಕ್ಕಿಗ, ಕಂದಾಯ ನಿರೀಕ್ಷಕರು ಎಚ್ಚರದಿಂದಿದ್ದು, ಆ ಬಗ್ಗೆ ಸಂಬಂಧಿಸಿದವರಿಗೆ ಕೂಡಲೇ ವರದಿ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲೆಯ ಯಾವೆಲ್ಲಾ ಸ್ಥಳಗಳಲ್ಲಿ ಅಕ್ರಮ ಮರಳು ಶೇಖರಣೆಯಾಗಿದೆ ಎಂಬುದನ್ನು ಪತ್ತೆ ಮಾಡಿ, ಪ್ರಕರಣವನ್ನು ದಾಖಲಿಸುವಂತೆಯೂ ಪೊಲೀಸ್ ಆಯುಕ್ತರು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.


ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್ ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು, ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು, ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್ಗಳ ಸಭೆ ಕರೆಯಲಾಗುವುದು ಎಂದರು.


ಹೈಕೋರ್ಟ್ನ ಆದೇಶ ಹಾಗೂ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ವಯ ಡಿಜೆ ಸೆಟ್ ಹಾಗೂ ಧ್ವನಿವರ್ಧಕಗಳನ್ನು ಬಳಸಬೇಕು. ಈ ಬಗ್ಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ನಿಭಾಯಿಸಬೇಕಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಅವುಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಮಂಗಳೂರು ಮಹಾನಗರ ಪಾಲಿಕೆ ಇಂಜಿನಿಯರ್ ಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದೆ ಅವರು ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು ಎಂದು ಸೂಚನೆ ನೀಡಿದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಪರಿಸರ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಮಹೇಶ್ ಕುಮಾರ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಲಿಂಗರಾಜು, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಹರೀಶ್ ಕುಮಾರ್, ತಹಶೀಲ್ದಾರ್ಗಳು, ಕಂದಾಯ ಅಧಿಕಾರಿಗಳು ಮತ್ತು ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp