ರಾಮನಗರ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಪ್ರಕರಣದ ಮೊದಲ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ರಾಕೇಶ್ ಮಲ್ಲಿ ಅವರನ್ನು ಮಂಗಳವಾರ ಬಿಡದಿ ಠಾಣೆಯಲ್ಲಿ ತನಿಖಾಧಿಕಾರಿಗಳು ವಿಚಾರಣೆ ನಡೆಸಿದರು.
ಪೊಲೀಸರ ನೋಟಿಸ್ ಹಿನ್ನೆಲೆಯಲ್ಲಿ ರಾಕೇಶ್ ಅವರು, ತಮ್ಮ ವಕೀಲರೊಂದಿಗೆ ಮಧ್ಯಾಹ್ನ ವಿಚಾರಣೆಗೆ ಹಾಜರಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ ನೇತೃತ್ವದಲ್ಲಿ ಡಿವೈಎಸ್ಪಿಗಳು ಮತ್ತು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ರಾಕೇಶ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿತು.
ದ.ಕ ಜಿಲ್ಲೆಯ ಬಂಟ್ವಾಳದ ರಾಕೇಶ್ ಮಲ್ಲಿ ಒಂದು ಕಾಲದಲ್ಲಿ ಮುತ್ತಪ್ಪ ರೈ ಅವರ ಬಲಗೈ ಬಂಟನಂತಿದ್ದರು. ನಂತರ ಇಬ್ಬರ ನಡುವಿನ ಸಂಬಂಧದಲ್ಲಿ ಬಿರುಕುಂಟಾಗಿತ್ತು. ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ರೈ ಅವರು ನನಗೆ ವಂಚನೆ ಮಾಡಿ, ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ರಾಕೇಶ್ ಬೆಂಗಳೂರು ಪೊಲೀಸರಿಗೆ ದೂರು ಕೊಟ್ಟಿದ್ದರು. ಆ ಮೇರೆಗೆ ರೈ ಮೇಲೆ ಪ್ರಕರಣ ಕೂಡ ದಾಖಲಾಗಿತ್ತು.
ರೈ ನಿಧನದ ಬಳಿಕ ದ.ಕ ಜಿಲ್ಲೆಯಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ರಾಕೇಶ್, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.