ಈಶ್ವರಪ್ಪನವರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದ ಸಂತೋಷ್ ಪಾಟೀಲ್ ಪತ್ನಿ

Prasthutha|

- Advertisement -

ಚಿತ್ರದುರ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಪ್ರಭಾವ ಬಳಿಸಿಕೊಂಡು ನನ್ನ ಪತಿ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತಮಗೆ ಬೇಕಾದ ರೀತಿಯಲ್ಲಿ ಮಾಡಿಸಿಕೊಂಡು ಆರೋಪ ಮುಕ್ತರಾಗಿದ್ದಾರೆ ಎಂದು ಮೃತ ಸಂತೋಷ ಅವರ ಪತ್ನಿ ರೇಣುಕಾ ಪಾಟೀಲ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ಬಾಗಲಕೋಟೆಯಲ್ಲಿ ಹೇಳಿಕೆ ನೀಡಿದ್ದರು. ಹದಿನೈದು ದಿನದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆ ಎಂದಿದ್ದರು. ಆಗ ನಾನು ರಾಜ್ಯಪಾಲರಿಗೆ ಪತ್ರ ಬರೆದಿದ್ದೆ. ಮಾಜಿ ಸಚಿವ ಈಶ್ವರಪ್ಪನವರನ್ನು ಪೊಲೀಸ್ ತನಿಖಾಧಿಕಾರಿಗಳು ವಿಚಾರಣೆಯೇ ಮಾಡಿಲ್ಲ. ಯಾವ ಆಧಾರದ ಮೇಲೆ ಕ್ಲೀನ್ ಚಿಟ್ ನೀಡಿದ್ದಾರೆ ಎನ್ನುವ ಅನುಮಾನ ಕಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈಗ ನಾನು ನನ್ನ ಪತಿಯ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ಪತ್ರದ ಮೂಲಕ ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದರು.

- Advertisement -

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನನ್ನ ಗಂಡ 108 ಕಾಮಗಾರಿ ಮಾಡಿದ್ದಾರೆ. ಅದನ್ನು ತನಿಖೆ ನಡೆಸಲಿಲ್ಲ. ಆಗ ಕಾಮಗಾರಿ ಮಾಡುವಾಗ ಏಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕಣ್ಣು ಮುಚ್ಚಿ ಕುಳಿತಿತ್ತು ಎಂದು ಪ್ರಶ್ನಿಸಿದರು. ನನ್ನ ಪತಿ ಸಂತೋಷ ಪಾಟೀಲ ಈಶ್ವರಪ್ಪನವರ ಹೆಸರನ್ನು ವಾಟ್ಸ್ಆಯಪ್ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ತನಿಖೆ ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಿದರೂ ನಾನು ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸುತ್ತೇನೆ ಎಂದರು.



Join Whatsapp