ಲಖಿಂಪುರ ಖೇರಿ ರೈತರ ಹತ್ಯೆ ಖಂಡಿಸಿ ಎಸ್ ಡಿಪಿಐ ಪ್ರತಿಭಟನೆ: ಸುಪ್ರೀಂಕೋರ್ಟ್ ಮಧ್ಯಪ್ರವೇಶಕ್ಕೆ ಒತ್ತಾಯ

Prasthutha|

ಬೆಂಗಳೂರು: ಉತ್ತರಪ್ರದೇಶದ ಲಖಿಂಪುರ ಖೇರಿ ಎಂಬಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಷ್ ಮಿಶ್ರಾ ತೇನಿ ಅವರು ಕಾರು ಹರಿಸಿ ರೈತರ ಹತ್ಯೆ ಮಾಡಿರುವ ಘಟನೆಯನ್ನು ಖಂಡಿಸಿ ಬೆಂಗಳೂರಿನಲ್ಲಿಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್ ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಕಾರರನ್ನು ಉದ್ದೇಶಿಸಿ ಎಸ್ ಡಿಪಿಐ ರಾಜ್ಯ ಉಪಾಧ್ಯಕ್ಷ ಅಡ್ವೊಕೇಟ್ ಮಜೀದ್ ಖಾನ್ ಮಾತನಾಡಿ, ರೈತರ ಮೇಲೆ ಕಾರು ಹರಿಸಿ ಅವರನ್ನು ಹತ್ಯೆ ಮಾಡಿರುವುದು ಆಘಾತಕಾರಿ ಘಟನೆಯಾಗಿದೆ. ನಾಲ್ವರು ರೈತರನ್ನು ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಕೊಲೆ ಸೇರಿದಂತೆ ಐಪಿಸಿಯ ಕಠಿಣ ಕಲಂಗಳಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಕಾರು ಹರಿಸಿದ ಪರಿಣಾಮ ರೈತರಾದ ಲವ್ ಪ್ರೀತ್ ಸಿಂಗ್ (20) ದಲ್ಜೀತ್ ಸಿಂಗ್ (35), ನಚತ್ತರ್ ಸಿಂಗ್ (60) ಮತ್ತು ಗೌರ್ ವಿಂದರ್ ಸಿಂಗ್ (19) ಸಾವನ್ನಪ್ಪಿದ್ದಾರೆ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

- Advertisement -

ಮೋಹನ್ ಬಿಶ್ತ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಉತ್ತರ ಪ್ರದೇಶವು ಅಕ್ಷರಶಃ ಜಂಗಲ್ ರಾಜ್ ಆಗಿ ಬದಲಾಗಿದ್ದು, ಆಡಳಿತ ಪಕ್ಷ ಮತ್ತು ಅವರ ಬೆಂಬಲಿಗ ಗುಂಪುಗಳ ನಿರಂತರ ಗೂಂಡಾಗಿರಿಗೆ ರಾಜ್ಯ ಸಾಕ್ಷಿಯಾಗಿದೆ. ಮುಸ್ಲಿಮರು ಮತ್ತು ದಲಿತರ ಗುಂಪು ಹತ್ಯೆ, ಎನ್ ಕೌಂಟರ್ ಹತ್ಯೆ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಇತ್ಯಾದಿಗಳು ರಾಜ್ಯದಲ್ಲಿ ಸಾಮಾನ್ಯವೆಂಬಂತಾಗಿದೆ. ಕೇಂದ್ರ ಸರ್ಕಾರದ ಕಾರ್ಪೊರೇಟ್ ಪರ ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರದ ಬೆನ್ನೆಲುಬಾಗಿರುವ ರೈತರು, ಸುಮಾರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಅವಧಿಯಲ್ಲಿ ಹಲವು ರೈತರು ಹುತಾತ್ಮರಾಗಿದ್ದಾರೆ. ತನ್ನ ಆಪ್ತ ಬಂಡವಾಳಶಾಹಿಗಳ ತಾಳಕ್ಕೆ ತಕ್ಕಂತೆ ಕುಣಿಯುವ ಒಕ್ಕೂಟ ಸರ್ಕಾರವು ರೈತರ ಬೇಡಿಕೆಯ ಬಗ್ಗೆ ದಿವ್ಯ ನಿರ್ಲಕ್ಷ್ಯವಹಿಸಿದೆ ಎಂದು ಅವರು ದೂರಿದರು.

ಈ ಗೂಂಡಾಗಿರಿಯ ವಿರುದ್ಧ ದೇಶಾದ್ಯಂತ ಬೃಹತ್ ಪ್ರತಿಭಟನೆಗಳನ್ನು ನಡೆಸಬೇಕು ಎಂದು ಕರೆ ನೀಡಿರುವ ಅವರು, ಹಿಂದುತ್ವ ಫ್ಯಾಶಿಸ್ಟರ ನಿಘಂಟಿನಲ್ಲೇ ಇಲ್ಲದ ನ್ಯಾಯವನ್ನು ಯುಪಿ ಅಥವಾ ಕೇಂದ್ರ ಸರ್ಕಾರದಿಂದ ನಿರೀಕ್ಷಿಸುವ ಅಗತ್ಯವಿಲ್ಲ. ಆದ್ದರಿಂದ ಭಾರತದ ಸುಪ್ರೀಂ ಕೋರ್ಟ್ ಈ ಕೃತ್ಯದ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಸಚಿವರ ಪುತ್ರ ಸೇರಿದಂತೆ ಎಲ್ಲಾ ಅಪರಾಧಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Join Whatsapp