ಜಿಲ್ಲಾಧಿಕಾರಿಯವರ ಕಾರ್ಯಕಲಾಪಗಳಲ್ಲಿ ಭಾಗವಹಿಸಿ ಸ್ಫೂರ್ತಿ ಪಡೆದ ಕು. ಸೌಜನ್ಯ

Prasthutha|

ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ಜುಲೈ 15ರಂದು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಂಡಿತ್ತು. ಅದರ ಕನ್ನಡ ವಿಭಾಗದಲ್ಲಿ ಬೆಂದೂರಿನ ಸಂತ ಆಗ್ನೆಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಸೌಜನ್ಯ ಜೆ., ಅವರು ದಕ್ಷಿಣ ಕನ್ನಡ ಜಿಲ್ಲೆಯಿಂದ ವಿಜೇತರಾಗಿದ್ದರು.
ಈ ಹಿನ್ನಲೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ನಿರ್ದೇಶನದಂತೆ ಸೆ. 20ರ ಮಂಗಳವಾರ ಕೌಶಲ್ಯ ಸ್ಫೂರ್ತಿ ಶೀರ್ಷಿಕೆಯಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರೊಂದಿಗೆ ಒಂದು ದಿನ ಜಿಲ್ಲಾಧಿಕಾರಿಯವರ ಕಾರ್ಯಕಲಾಪಗಳಲ್ಲಿ ಭಾಗವಹಿಸುವ ಅವಕಾಶ ನೀಡಲಾಗಿತ್ತು.

- Advertisement -

ಅದರಂತೆ ಸೌಜನ್ಯ ಸೆ.20ರ ಬೆಳಿಗ್ಗೆ 11 ಗಂಟೆಗೆ ಬಂಟ್ವಾಳ ತಾಲ್ಲೂಕಿನ ತಹಶೀಲ್ದಾರರ ಕಚೇರಿಯಲ್ಲಿ ಜಿಲ್ಲಾಧಿಕಾರಿಯವರ ತಾಲೂಕು ಭೇಟಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಲ್ಲಿ ಜಿಲ್ಲಾಧಿಕಾರಿಯವರಿಗೆ ಸ್ಥಳೀಯರು ಸಲ್ಲಿಸಿದ ಕುಂದು ಕೊರತೆಗಳ ಅಹವಾಲುಗಳ ಸ್ವೀಕೃತಿ ಹಾಗೂ ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದ ಕಾರ್ಯ ಚಟುವಟಿಕೆಗಳಲ್ಲಿ ಭಾಗಿಯಾದರು. ನಂತರ ಮಧ್ಯಾಹ್ನ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ನಲ್ಲಿ ನಡೆದ ಜಿಲ್ಲಾಧಿಕಾರಿಯವರ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಿ, ವೀಕ್ಷಿಸಿದರು.

ಸಂಜೆ ಜಿಲ್ಲಾಧಿಕಾರಿಗಳು ಸೌಜನ್ಯ ಅವರಿಗೆ ಸನ್ಮಾನಿಸಿ, ಪ್ರಮಾಣ ಪತ್ರ ನೀಡಿ ಅಭಿನಂದನೆ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಸ್.ಜಿ. ಹೇಮಚಂದ್ರ, ಸಿಡಾಕ್ ಜಂಟಿ ನಿರ್ದೇಶಕರಾದ ಅರವಿಂದ ಡಿ ಬಾಳೇರಿ, ಬೆಂದೂರಿನ ಸೆಂಟ್ ಆಗ್ನೆಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ವೆನಿಸಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

Join Whatsapp