ಶಿವಮೊಗ್ಗ| ರಾಜ್ಯದಲ್ಲಿ ಬಿಜೆಪಿ ಸರಕಾರದ ಕಳಪೆ ಆಡಳಿತ; ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರ : ಬೇಳೂರು ಗೋಪಾಲ ಕೃಷ್ಣ

Prasthutha|

ರಿಪ್ಪನ್‌ಪೇಟೆ: ರಾಜ್ಯದ ಬಿಜೆಪಿ ಸರಕಾರದ ಆಡಳಿತ ಕಳಪೆಯಾಗಿದ್ದು ಬೆಲೆ ಏರಿಕೆಯಿಂದ ರಾಜ್ಯದಲ್ಲಿ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಆಡಳಿತವನ್ನು ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಟೀಕಾ ಪ್ರಹಾರ ನಡೆಸಿದರು.

- Advertisement -

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೂಲಿ ಕಾರ್ಮಿಕರು ಬಡವರು ಹಾಗೂ ಮಧ್ಯಮ ವರ್ಗದವರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರಕ್ಕೆ ಪ್ರತಿನಿತ್ಯ ಹಿಡಿ ಶಾಪ ಹಾಕುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಗೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಹೇಳಿದರು.

ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಹಗರಣಗಳು ನಡೆಯುತ್ತಿದ್ದು ಭ್ರಷ್ಟಾಚಾರ ರಾಜ್ಯದ ಮೂಲೆಮೂಲೆಯಲ್ಲೂ ತಾಂಡವಾಡುತ್ತಿದೆ. ಕಾಮಗಾರಿ ಗುತ್ತಿಗೆ, ಉಪನ್ಯಾಸಕರ ನೇಮಕಾತಿ, ಪಿಎಸ್ಐ ನೇಮಕಾತಿ ಹೀಗೆ ಪ್ರತಿಯೊಂದರಲ್ಲೂ ಹಗರಣಗಳ ಹೊಗೆಯಾಡುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ಬಡ ಮಕ್ಕಳು ಉತ್ತಮ ಶಿಕ್ಷಣ ಪಡೆದು ಒಳ್ಳೆಯ ಅಂಕಗಳನ್ನು ಗಳಿಸಿದ್ದರು ಸಹ ಸರ್ಕಾರಿ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ರಾಜ್ಯದ ಗೃಹಮಂತ್ರಿ ಆರಗ ಜ್ಞಾನೇಂದ್ರ ರವರಿಗೆ ಗೃಹಖಾತೆ ಕೂಡಿ ಬರುವುದಿಲ್ಲ. ಪ್ರತಿನಿತ್ಯ ಒಂದಲ್ಲ ಒಂದು ಹಗರಣಗಳು ಮತ್ತು ಪ್ರಕರಣಗಳು ರಾಜ್ಯದಲ್ಲಿ ನಡೆಯುತ್ತಿದ್ದು ರಾಜ್ಯದ ಜನತೆ ಗೃಹಖಾತೆಯ ಮಂತ್ರಿಗಳ ಬಗ್ಗೆ ಬೇಸರವನ್ನು ಹೊಂದಿದ್ದಾರೆ.  ಆದ್ದರಿಂದ ಕೂಡಲೇ ಅವರನ್ನು ಗೃಹ ಖಾತೆಯಿಂದ ಬದಲಾಯಿಸಬೇಕೆಂದು ಈ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.

ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಇಂದಿಗೆ ನಾಲ್ಕು ವರ್ಷಗಳ ಅವಧಿಯನ್ನು ಮುಗಿಸಿದ್ದು ಇನ್ನು ಕೇವಲ ಒಂದು ವರ್ಷ ಬಾಕಿ ಇದ್ದು. ಈಗಿನ ರಾಜ್ಯದ ಬಿಜೆಪಿ ಆಡಳಿತ ಸರ್ಕಾರದ ಕಾರ್ಯವೈಖರಿಯನ್ನು ನೋಡಿದರೆ ಇನ್ನು ಕೆಲವೇ ತಿಂಗಳುಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಘೋಷಣೆ ಮಾಡಬಹುದು. ಹಾಲಿ ಶಾಸಕರು ನಾಳೆಯಿಂದ ಇನ್ನುಳಿದ ಅಧಿಕಾರದ ಅವಧಿಯನ್ನು ದಿನಗಳ ಲೆಕ್ಕಾಚಾರದಲ್ಲಿ ಮಾಡಬೇಕು. ಸಾಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಹೇಳಿದರು.

ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮಾಕರ್, ಕೆಂಚನಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಬೈದುಲ್ಲಾ ಶರೀಫ್, ಕೆಂಚನಾಲ ಗ್ರಾಮ ಪಂಚಾಯಿತಿ ಸದಸ್ಯ ಮುಹಮ್ಮದ್ ಶರೀಫ್, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಸದಸ್ಯ ಆಸಿಫ್ ಇನ್ನಿತರು ಉಪಸ್ಥಿತರಿದ್ದರು.

Join Whatsapp