ಬಿಜೆಪಿ ಸರ್ಕಾರದಿಂದ “ಕ್ರಿಮಿನಲ್ ಲೂಟಿ” : ಬೆಲೆ ಏರಿಕೆ ವಿರುದ್ಧ ಸಿದ್ದರಾಮಯ್ಯ ಟೀಕೆ

Prasthutha|

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಇಂದು ಗಗನ ಮುಟ್ಟಿದೆ. ಗ್ಯಾಸ್, ಪೆಟ್ರೋಲ್, ಡೀಸೆಲ್, ದಿನಸಿ, ಔಷಧ, ಪ್ರಯಾಣ ದರ ಹೀಗೆ ಎಲ್ಲಾ ಜೀವನಾವಶ್ಯಕ ವಸ್ತುಗಳ, ಸೇವೆಗಳ ಬೆಲೆ ಮಿತಿಮೀರಿದೆ. ಇದರಿಂದ ಬಡ, ಮಧ್ಯಮ ವರ್ಗದ ಜನರು ಜೀವನ ಮಾಡಲು ಕಷ್ಟಪಡಬೇಕಾಗಿದೆ. ಇದನ್ನೇ ನೀವು ಅಚ್ಚೇದಿನ್ ಎಂದು ಕರೆಯುತ್ತೀರ? ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆಯೇರಿಕೆ ಕುರಿತು ಮಾತನಾಡಿದ ಅವರು, ಕೊರೊನಾ ಸಾಂಕ್ರಾಮಿಕ ತಡೆ, ಬೆಲೆ ನಿಯಂತ್ರಣ ಮುಂತಾದ ಗಂಭೀರ ವಿಚಾರಗಳ ಬಗ್ಗೆ ಚರ್ಚಿಸಿ, ಪರಿಹಾರ ಕಂಡುಕೊಳ್ಳಲು ಆಸಕ್ತಿಯಾಗಲೀ, ಪ್ರತಿಪಕ್ಷಗಳ ಮಾತು ಕೇಳುವ ಸೌಜನ್ಯವಾಗಲೀ ರಾಜ್ಯ ಸರ್ಕಾರಕ್ಕೆ ಇಲ್ಲ. ಸದನ ಕರೆಯಲು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿರುವುದು ಖಂಡನೀಯ. ಆರು ತಿಂಗಳಿಗೊಮ್ಮೆ ಸದನ ಕರೆಯಲು ಅವಕಾಶ ನೀಡಿರುವ ಕಾನೂನನ್ನು ಬಳಕೆ ಮಾಡಿಕೊಂಡು ಆರು ತಿಂಗಳಿಗೆ ಒಂದೇ ಬಾರಿ ಸದನ ನಡೆಸೋದು ಸರಿಯಲ್ಲ. ಕನಿಷ್ಟ 60 ದಿನ ಸದನ ನಡೆಸಬೇಕು ಎಂದು ನಾವೇ  ಕಾನೂನು ಮಾಡಿದ್ದೇವೆ, ಆ ಕಾನೂನಿಗೆ ಸರ್ಕಾರ ಕವಡೆ ಕಾಸಿನ ಬೆಲೆ ಕೊಡುತ್ತಿಲ್ಲ ಎಂದು ಟೀಕಿಸಿದರು.

- Advertisement -

ಕೊರೊನಾದಿಂದಾಗಿ ಸದನ ನಡೆಸಲು ಸರಿಯಾಗಿ ಸಮಯ ಸಿಗುತ್ತಿಲ್ಲ ಎಂಬ ಕುಂಟು ನೆಪವನ್ನು ನಾನು ಒಪ್ಪಲ್ಲ. ಈ ವರ್ಷ ಸದನ ನಡೆದಿರೋದು 20 ದಿನ ಮಾತ್ರ, ಈಗ 10 ದಿನ ಸದನ ನಡೆಸಲು ನೋಟಿಸ್ ನೀಡಿದ್ದೀರಿ, ಇದನ್ನು ಕನಿಷ್ಟ ಇಪ್ಪತ್ತು ದಿನಕ್ಕೆ ಹೆಚ್ಚಿಸಬೇಕು ಎಂದು ಬ್ಯುಸಿನೆಸ್ ಅಡ್ವೈಸರಿ ಕಮೀಟಿಗೆ ಸಲಹೆ ನೀಡಿದ್ದೇನೆ. ಕೇವಲ ಹತ್ತು ದಿನಗಳಲ್ಲಿ ಯಾವ ಪ್ರಮುಖ ವಿಚಾರಗಳ ಬಗ್ಗೆಯೂ ವಿಸ್ತೃತ ಚರ್ಚೆ ನಡೆಸಲು ಸಾಧ್ಯವಿಲ್ಲ ಎಂಬುದು ನನ್ನ ಅನಿಸಿಕೆ.

12-11-1973ರಲ್ಲಿ ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಪೆಟ್ರೋಲ್ ಬೆಲೆ ಕೇವಲ 7 ಪೈಸೆ ಹೆಚ್ಚಾಗಿದ್ದಕ್ಕೆ ಬಿಜೆಪಿ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ ಅವರು ಸಂಸತ್ತಿಗೆ ಎತ್ತಿನಗಾಡಿಯಲ್ಲಿ ಬಂದಿದ್ದರು. ಈ ಬೆಲೆಯೇರಿಕೆಯನ್ನು ಅವರು ಕ್ರಿಮಿನಲ್ ಲೂಟ್ ಎಂದಿದ್ದರು. ನಾನೀಗ ಅದಕ್ಕಿಂತ ಕೀಳು ಪದ ಬಳಕೆ ಮಾಡದೆ, ಅದೇ ಪದವನ್ನು ಬಳಕೆ ಮಾಡುತ್ತೇನೆ. ಈಗಿನ ಬಿಜೆಪಿ ಸರ್ಕಾರವೂ “ಕ್ರಿಮಿನಲ್ ಲೂಟಿ” ಮಾಡುತ್ತಿದೆ ಎಂದು ಹೇಳಿದರು.

ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆಯಾಗಿದ್ದಕ್ಕೆ ತೈಲ ಕಂಪನಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಸ್ಥಿತಿಗೆ ಅನುಗುಣವಾಗಿ ಬೆಲೆ ಏರಿಕೆ ಮಾಡುತ್ತಿವೆ, ಬೆಲೆ ನಿಯಂತ್ರಣ ನಮ್ಮ ಕೈಲಿ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳುತ್ತಾರೆ. ಬೆಲೆಯೇರಿಕೆಗೆ ಉತ್ತರ ನೀಡಬೇಕಾದವರು ತೈಲ ಕಂಪನಿಗಳ ಎಂ.ಡಿ ಗಳೋ ಅಥವಾ ಕೇಂದ್ರ ಸರ್ಕಾರವೋ? ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಬಿಜೆಪಿಯವರು ಪೆಟ್ರೋಲ್ ಬೆಲೆ ಏರಿಕೆಯಾದಾಗ ಪ್ರತಿಭಟನೆ ಮಾಡುತ್ತಿದ್ದುದ್ದು ತೈಲ ಕಂಪನಿಯ ವಿರುದ್ಧವೋ ಅಥವಾ ಕೇಂದ್ರ ಸರ್ಕಾರದ ವಿರುದ್ಧವೋ ಎಂದು ನೆನಪಿಸಿಕೊಳ್ಳಲಿ.  ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಬೇಕಾಬಿಟ್ಟಿ ಏರಿಕೆ ಮಾಡಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಡೀಸೆಲ್ ಮೇಲೆ ರೂ.3.45 ತೆರಿಗೆ ಇತ್ತು, ಇಂದು ರೂ.31.84 ಆಗಿದೆ. ಅಂದರೆ ಸುಮಾರು ಒಂಭತ್ತು ಪಟ್ಟು ಹೆಚ್ಚಾಗಿದೆ. ಅದೇ ರೀತಿ ಪೆಟ್ರೋಲ್ ಮೇಲೆ ರೂ.9.21 ಅಬಕಾರಿ ಸುಂಕ ಇತ್ತು, ಇಂದು ರೂ.32.98 ಆಗಿದೆ.‌ ಅಂದರೆ ಮೂರು ಪಟ್ಟು ಹೆಚ್ಚಾಗಿದೆ. ಇದರಿಂದ ಡೀಸೆಲ್ ಪೆಟ್ರೋಲ್ ಬೆಲೆ ಹೆಚ್ಚಾಗಿ, ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿದೆ. ಇದರಿಂದ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಮನಮೋಹನ್ ಸಿಂಗ್ ಅವರ ನೇತೃತ್ವದ ಯು.ಪಿ.ಎ ಸರ್ಕಾರದ ಕಾಲದಲ್ಲಿ ಡೀಸೆಲ್ ಬೆಲೆ ಗರಿಷ್ಠ ರೂ.47 ಇತ್ತು, ಈಗ ರೂ‌.95 ಆಗಿದೆ ಮತ್ತು ಪೆಟ್ರೋಲ್ ಬೆಲೆ ರೂ‌. 74 ಇತ್ತು, ಇಂದು ರೂ. 106 ಆಗಿದೆ ಎಂದು ಸಿದ್ದರಾಮಯ್ಯ ಅಂಕಿ ಅಂಶ ಸಮೇತ ವಿವರಿಸಿದರು.

2012-13 ರಲ್ಲಿ ಒಂದು ಬ್ಯಾರಲ್ ಕಚ್ಚಾತೈಲ ಬೆಲೆ 120 ಡಾಲರ್ ಇತ್ತು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಅದು 105 ಡಾಲರ್ ಗೆ ಇಳಿಕೆ ಕಂಡಿತು, ಈಗ  ಆದರೆ ಅದರಿಂದ ಜನತೆಗೆ ಯಾವ ಪ್ರಯೋಜನವೂ ಆಗಿಲ್ಲ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಲು ಮುಖ್ಯ ಕಾರಣ ಕೇಂದ್ರ ಸರ್ಕಾರ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದು. ಮನಮೋಹನಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಪೆಟ್ರೋಲ್ ಮೇಲೆ ಕೇಂದ್ರ ವಿಧಿಸುತ್ತಿದ್ದ ತೆರಿಗೆ [ ಅಡಿಷನಲ್ ಎಕ್ಸೈಜ್ ಡ್ಯೂಟಿ] 9.21 ರೂಪಾಯಿ, ಡೀಸೆಲ್ ಮೇಲೆ 3.45 ರೂಪಾಯಿ. ಈಗ ಪೆಟ್ರೋಲ್ ಮೇಲೆ 32.98 ರೂಪಾಯಿ ಮತ್ತು ಡೀಸೆಲ್ ಮೇಲೆ 31.84 ರೂಪಾಯಿ ಆಗಿದೆ.

ಆಯಿಲ್ ಬಾಂಡ್ ಗಳ ಪರಿಕಲ್ಪನೆ ಪ್ರಾರಂಭಿಸಿದ್ದೆ ವಾಜಪೇಯಿಯವರ ಸರ್ಕಾರ.  ಆನಂತರ ಮನಮೋಹನ ಸಿಂಗ್ ಸರ್ಕಾರ ಈ ಯೋಜನೆಯನ್ನು ಮುಂದುವರೆಸಿತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾದಾಗ ಅದರ ಹೊರೆಯನ್ನು ಸಾರ್ವಜನಿಕರಿಗೆ ವರ್ಗಾಯಿಸದಂತೆ ಮಾಡಲು ಹಾಗೂ ಸರ್ಕಾರಿ ಸ್ವಾಮ್ಯದ ಆಯಿಲ್ ಕಂಪೆನಿಗಳು ನಷ್ಟ ವಾಗದಂತೆ ನೋಡಿಕೊಳ್ಳಲು ಈ ಆಯಿಲ್ ಬಾಂಡಗಳನ್ನು ಖರೀದಿಸಲಾಯಿತು. ಇದರಿಂದಾಗಿ ಮನಮೋಹನಸಿಂಗರ ಕಾಲದಲ್ಲಿ ಕಚ್ಛಾ ತೈಲಬೆಲೆ 125- 140 ಡಾಲರ್‍ಗೆ ಏರಿಕೆಯಾದರೂ ಸಹ ಪೆಟ್ರೋಲ್ ಬೆಲೆ 75 ರೂಪಾಯಿ ಮೀರಿರಲಿಲ್ಲ. ಡೀಸೆಲ್ ಬೆಲೆ 47 ರೂಪಾಯಿ ದಾಟಿರಲಿಲ್ಲ. ಈಗ 45- 65 ಡಾಲರ್ ಇದ್ದಾಗಲೂ ಪೆಟ್ರೋಲ್ ಬೆಲೆ 105 ರೂ ಆಗಿದೆ. ಡೀಸೆಲ್ ಬೆಲೆ 100 ರೂ ಆಗಿದೆ. ಇದಕ್ಕೆ ಕಾರಣ ಕೇಂದ್ರ, ರಾಜ್ಯಗಳೆರಡೂ ಸೇರಿ 65 ರೂಪಾಯಿಗಳಷ್ಟು ತೆರಿಗೆ ವಸೂಲಿ ಮಾಡುತ್ತಿವೆ ಎಂದು ದೂರಿದರು.

ತೈಲ ಬಾಂಡ್ ಗಳನ್ನು ಖರೀದಿಸಿದ ಕಾರಣಕ್ಕಾಗಿಯೆ ಜನರಿಗೆ ಹೆಚ್ಚು ಹೊರೆ ಬೀಳಲಿಲ್ಲ ಅದರಲ್ಲೂ ಡೀಸೆಲ್ ದರಗಳು ಕಡಿಮೆ ಇದ್ದಷ್ಟು ದೇಶದ ಆರ್ಥಿಕ ಪ್ರಗತಿ ವೇಗವಾಗಿರುತ್ತದೆ. ಯಾಕೆಂದರೆ ಎಲ್ಲ ಉತ್ಪಾದನೆಗಳು, ಸಾಗಣೆಗಳು ಡೀಸೆಲ್ಲನ್ನು ಅವಲಂಬಿಸಿರುತ್ತವೆ. ಈ ಸಾಮಾನ್ಯ ಜ್ಞಾನ ಇದ್ದ ಕಾರಣಕ್ಕೆ ಮನಮೋಹನಸಿಂಗರು ಡೀಸೆಲ್ ಬೆಲೆಯನ್ನು 47 ರೂಪಾಯಿಗಳ ಒಳಗೆ ಇಟ್ಟಿದ್ದರು.

ಮನಮೋಹನಸಿಂಗರು ತೈಲ ಬಾಂಡುಗಳನ್ನು ಖರೀದಿಸಿದ ಕಾರಣಕ್ಕಾಗಿಯೆ ಕೇಂದ್ರ ಸರ್ಕಾರದ ಅಧೀನದಲ್ಲಿಯ ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಮುಂತಾದ ಕಂಪೆನಿಗಳೂ ನಷ್ಟ ಅನುಭವಿಸಲಿಲ್ಲ. ಬದಲಾಗಿ ನವರತ್ನ ಕಂಪೆನಿಗಳಾಗಿ ಬೆಳೆದವು. ಒಂದೊಂದು ಕಂಪೆನಿಯೂ ಲಕ್ಷಾಂತರ ಕೋಟಿಗಳನ್ನು ತೆರಿಗೆ, ಡಿವಿಡೆಂಟುಗಳ ರೀತಿಯಲ್ಲಿ ಸರ್ಕಾರಕ್ಕೆ ಪಾವತಿ ಮಾಡಿವೆ. ಈಗ ಈ ಕಂಪೆನಿಗಳನ್ನೆಲ್ಲ ಅದಾನಿ, ಅಂಬಾನಿ, ಸೌದಿ ಆರಾಮ್ಕೊ ಮುಂತಾದ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಮಾರಲು ಹೊರಟಿದೆ.  ಯು ಪಿ ಎ ಸರ್ಕಾರ ಅಧಿಕಾರದಲ್ಲಿದ್ದಾಗ 9-9-2012 ರಲ್ಲಿ ರೂ.5,762 ಕೋಟಿಗಳನ್ನು ತೀರಿಸಿತ್ತು.

ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 7-3-2015 ಮತ್ತು 23-3-2015ರಲ್ಲಿ ಕೇವಲ ರೂ.3,500 ಬಾಂಡ್ ಮಾತ್ರ ಮೆಚ್ಯೂರ್ ಆಗಿತ್ತು.  ಅದನ್ನು ಮಾತ್ರ ತೀರಿಸಲಾಗಿತ್ತು.  ಇದರ ಜೊತೆಗೆ ಪ್ರತಿ ವರ್ಷ ಬಡ್ಡಿ ತೀರಿಸಲಾಗುತ್ತಿದೆ.

ಪ್ರತಿ ವರ್ಷ ತೀರಿಸಬೇಕಾದ ಬಡ್ಡಿ ರೂ.9989.96 ಕೋಟಿ ಅಂದರೆ 10 ಸಾವಿರ ಕೋಟಿಗಳು. ಈ ವರ್ಷ ತೀರಿಸಬೇಕಾದ ಅಸಲು 10 ಸಾವಿರ ಕೋಟಿ. 2022 ರಲ್ಲಿ ಅಸಲು ಪಾವತಿಸುವಂತಿಲ್ಲ. 2023 ರಲ್ಲಿ 26150 ಕೋಟಿ ತೀರಿಸಬೇಕು. 2024 ರಲ್ಲಿ ಚುನಾವಣೆ ಬರುತ್ತದೆ. ಆಗ ಹೊಸ ಸರ್ಕಾರ ಬರುತ್ತದೆ. ಹೊಸ ಸರ್ಕಾರ ತೀರಿಸಬೇಕಾದ ಮೊತ್ತ 37306 ಕೋಟಿ.

ಅಂದರೆ ಮೋದಿಯವರ ಸರ್ಕಾರ 2014 ರಿಂದ 2024 ರ ವರೆಗೆ ತೀರಿಸುವ ಒಟ್ಟಾರೆ ಅಸಲು ಮೊತ್ತ 40050 ಕೋಟಿ ಮಾತ್ರ. ಬಡ್ಡಿ ಮೊತ್ತ ಸುಮಾರು 70 ಸಾವಿರ ಕೋಟಿ. ಎರಡೂ ಸೇರಿದರೆ 1 ಲಕ್ಷದ 10 ಸಾವಿರದ 50 ಕೋಟಿ ಮಾತ್ರ. ಅದೂ 2024 ರ  ಮಾರ್ಚ್‍ವರೆಗೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಪೆಟ್ರೋಲ್, ಡೀಸೆಲ್‍ಗಳಿಂದ ಜನರಿಂದ ದೋಚಿಕೊಂಡಿರುವ ತೆರಿಗೆ ಹಣ ಸುಮಾರು 20 ಲಕ್ಷ ಕೋಟಿ. 2020 ರಲ್ಲೆ 3.45 ಲಕ್ಷ ಕೋಟಿ ಹಣವನ್ನು ಸಂಗ್ರಹಿಸಲಾಗಿದೆ. ಇದು ಯಾವ ಲೆಕ್ಕ?

ಜನರಿಗೆ ಯಾಕೆ ಸುಳ್ಳು ಹೇಳುತ್ತಿದ್ದೀರಿ? ಎಂದು ವಾಗ್ದಾಳಿ ನಡೆಸಿದರು.

- Advertisement -