ಸಂಸದರನ್ನು ದೆಹಲಿಗೆ ಅಟ್ಟಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ: ಸಿದ್ದರಾಮಯ್ಯ ಒತ್ತಾಯ

Prasthutha|

ಬೆಂಗಳೂರು: ಕೋವಿಡ್-19 ನಿರ್ವಹಣೆಗಾಗಿ ಕೇಂದ್ರ ಮುಂದೆ ಬೇಡುತ್ತಿರುವ ರಾಜ್ಯ ಸರ್ಕಾರ ಸಂಸದರನ್ನು ದೆಹಲಿಗೆ ಅಟ್ಟಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಔಷಧಿ,‌ ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌ ಪ್ರಧಾನಿ ನರೇಂದ್ರ ಮೋದಿಯವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಕಂಡಾಗ‌ ಕನಿಕರ ಮೂಡುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದಿಲ್ಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಒತ್ತಾಯಿಸಿದ್ದಾರೆ.

‘ರಾಜ್ಯದಲ್ಲಿ ಎಲ್ಲರಿಗೂ ಉಚಿತ ಲಸಿಕೆ ನೀಡಿ, ಅದೇರೀತಿ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ನಿಲ್ಲಿಸಬೇಡಿ. ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಬಿಜೆಪಿ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ನರೇಂದ್ರ ಮೋದಿ ಅವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ. ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿ ನಾಯಕರು, ಈಗ ಪ್ರಧಾನಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ.

- Advertisement -

ಕೊರೋನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿ ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೋನಾ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ ಎಂದು ಕೇಳಿಕೊಂಡಿದ್ದಾರೆ.

ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು‌ ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ರಾಜ್ಯ ಮುಖ್ಯಮಂತ್ರಿಯವರೇ ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ. ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು ಎಂದು ಎಚ್ಚರಿಸಿದ್ದಾರೆ.

Join Whatsapp