ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ

Prasthutha|

ಹಾಸನ: ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನರಾಗಿದ್ದಾರೆ.  ಅವರಿಗೆ 74 ವರ್ಷ ವಯಸ್ಸಾಗಿತ್ತು.

- Advertisement -

ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಳ್ಳೂರು ಕ್ರಾಸ್ ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗಿನ ಜಾವ ವಿಧಿವಶರಾಗಿದ್ದಾರೆ.

  ಮೇ 3, 1949ರಲ್ಲಿ ಜನಿಸಿದ್ದ ಶ್ರೀಗಳು ಏಳು ಮಹಾಮಸ್ತಕಾಭಿಷೇಕವನ್ನು ನೆರವೇರಿಸಿದ್ದ ಕೀರ್ತಿ ಹೊಂದಿದ್ದಾರೆ. 970ರಲ್ಲಿ ಪೀಠಾಧಿಪತಿಯಾಗಿ ಅವರು ನೇಮಕಗೊಂಡಿದ್ದರು. ಮೈಸೂರು ವಿಶ್ವವಿದ್ಯಾಲಯದಿಂದ ಇತಿಹಾಸ, ಬೆಂಗಳೂರು ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಸ್ವಾಮೀಜಿಗಳು ಸ್ನಾತಕೋತ್ತರ ಪದವಿ ಪಡೆದಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳಿಗೆ 2017ನೇ ಸಾಲಿನಲ್ಲಿ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

- Advertisement -

1981ರಲ್ಲಿ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ ನಡೆಸಿದ್ದ ಸ್ವಾಮೀಜಿಗಳಿಗೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ‘ಕರ್ಮಯೋಗಿ’ ಎಂಬ ಬಿರುದು ನೀಡಿ ಗೌರವಿಸಿದ್ದರು.

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು 1949ರ ಮೇ 3ರಂದು ವರಂಗದಲ್ಲಿ ಜನಿಸಿದರು. 1969ರ ಡಿಸೆಂಬರ್ 12ರಂದು ಸನ್ಯಾಸ ದೀಕ್ಷೆ ಸ್ವೀಕಾರ ಮಾಡಿದರು. 19 ಏಪ್ರಿಲ್ 1970ರಂದು ಶ್ರವಣಬೆಳಗೊಳದ ಮಠದ ಧರ್ಮಾಚಾರ್ಯ ಪೀಠವನ್ನು ಏರಿದರು.  

ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಸ್ವಾಮೀಜಿಗಳು ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಸ್ಥಾಪಿಸಿದ್ದಾರೆ. ಫಾರ್ಮಸಿ ಕಾಲೇಜು, ಪಿಯು ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ ಮಾಡಿದ್ದಾರೆ. ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದ ಹೆಗ್ಗಳಿಕೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರದ್ದು. ಹಿಂದಿ, ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳ ಮೇಲೆ ಹಿಡಿತ ಹೊಂದಿದ್ದ ಸ್ವಾಮೀಜಿಗಳು ಸರಳವಾಗಿ ಅರ್ಥವಾಗುವಂತೆ ಪ್ರವಚನ ನೀಡುತ್ತಿದ್ದರು.

ಸ್ವಾಮೀಜಿಗಳ ನಿಧನಕ್ಕೆ ಗಣ್ಯರ ಸಂತಾಪ

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ಬಿಡುಗಡೆ ಮಾಡಿದ್ದು,  ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಶ್ರೀಗಳ ನಿಧನದ ಸುದ್ದಿ ಕೇಳಿ ಅತೀವ ನೋವಾಗಿದೆ. ಭಾರತೀಯ ಅಧ್ಯಾತ್ಮ ಪರಂಪರೆಯ ಹಿರಿಯ ಸಾಧಕರಾಗಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಚಿಕಿತ್ಸೆ ಫಲಿಸದ ಕಾರಣದಿಂದ ದೇಹತ್ಯಾಗ ಮಾಡಿದ್ದಾರೆ.

ಸ್ವಸ್ಥಿ ಶ್ರೀ ಚಾರುಕೀರ್ತಿ ಬಿರುದಾಂಕಿತ ಜೈನ ಭಟ್ಟಾರಕ ಶ್ರೀಗಳಿಗೆ ಭಾರತ ಮಾತ್ರವಲ್ಲದೆ ವಿಶ್ವದ ನಾನಾ ದೇಶಗಳಲ್ಲಿ ಭಕ್ತರಿದ್ದಾರೆ. ಇಡೀ ಭಕ್ತ ಸಮೂಹಕ್ಕೆ ಶ್ರೀಗಳ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

 ಮನುಕುಲದ ಅಂತರಂಗ ಶುದ್ಧಿ ಮತ್ತು ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡುತ್ತಿದ್ದ ಶ್ರೀಗಳು ಸ್ವತಃ ಬೆಂಗಳೂರು ಮತ್ತು ಮೈಸೂರು ವಿಶ್ವ ವಿದ್ಯಾಲಯದಲ್ಲಿ ಕ್ರಮವಾಗಿ ತತ್ವಶಾಸ್ತ್ರ ಮತ್ತು ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಪ್ರಾಕೃತ, ಸಂಸ್ಕೃತ ಮತ್ತು ಕನ್ನಡದಲ್ಲಿ ಅಪಾರ ಪಾಂಡಿತ್ಯ ಮತ್ತು ಪರಿಣತಿ ಹೊಂದಿದ್ದ ಇವರು ಪ್ರಾಕೃತ ವಿಶ್ವ ವಿದ್ಯಾಲಯವನ್ನೂ ಸ್ಥಾಪಿಸಿದ್ದರು. ಪಾಲಿಟೆಕ್ಷಿಕ್, ಎಂಜಿನಿಯರಿಂಗ್, ನರ್ಸಿಂಗ್ ಕಾಲೇಜುಗಳನ್ನೂ ಸ್ಥಾಪಿಸಿ ಸಾವಿರಾರು ಮಕ್ಕಳಿಗೆ ಶಿಕ್ಷಣ ದೊರಕಿಸಿದ್ದಾರೆ.

ನಾನು ಹಲವು ಬಾರಿ ಶ್ರೀಗಳ ದರ್ಶನ ಮತ್ತು ಆಶೀರ್ವಾದ ಪಡೆದಿದ್ದೇನೆ. ಶ್ರೀಗಳು ಜೀವಮಾನದಲ್ಲಿ ಮೊಬೈಲ್ ಸ್ಪರ್ಷಿಸಿಲ್ಲ, ಆಧುನಿಕ ಸವಲತ್ತುಗಳನ್ನು ಆಶಿಸದೆ 12 ವರ್ಷಗಳ ಕಾಲ ವಾಹನ ಸಂಚಾರವನ್ನೇ ಮಾಡದೆ ಗ್ರಂಥ ರಚನೆ ಮಾಡಿದ್ದರು ಎನ್ನುವುದು ಬಹಳ ಉನ್ನತವಾದ ಮೌಲ್ಯ. ಜೈನ ಪರಂಪರೆ ಮತ್ತು ಅಧ್ಯಾತ್ಮದ ಮೌಲ್ಯಗಳನ್ನು ಹೇಳುವ ದವಳ ಮತ್ತು ಜಯದವಳ ಆಗಮ ಗ್ರಂಥಗಳನ್ನು ಶ್ರೀಗಳು ರಚನೆ ಮಾಡಿದ್ದಾರೆ ಎನ್ನುವುದನ್ನು ಕೇಳಿ ತಿಳಿದಿದ್ದೇನೆ.

1949ರಲ್ಲಿ ರತ್ನವರ್ಮರಾಗಿ ಕಾರ್ಕಳದ ವರಂಗ ಗ್ರಾಮದಲ್ಲಿ ಜನಿಸಿದ್ದ ಶ್ರೀಗಳು 1970ರಲ್ಲಿ ಶ್ರವಣಬೆಳಗೊಳದ ಪೀಠಾಧಿಪತಿಗಳಾಗಿ ಹೊಯ್ಸಳ ವಂಶದ ಚಾರುಕೀರ್ತಿ ಪಟ್ಟವನ್ನೂ ಪಡೆದರು. ಇವರು ತಮ್ಮ ಅವಧಿಯಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಶ್ರವಣಬೆಳಗೊಳದ ಮಹಾಮಸ್ತಾಭಿಷೇಕವನ್ನು 1981, 1993, 2006 ಮತ್ತು 2018 ರಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿಸಿದ್ದಾರೆ.

ಇವರ ಅಧ್ಯಾತ್ಮದ ಸಾಧನೆ ನಮ್ಮ ನೆಲದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ. ಇವರ ಶಿಕ್ಷಣ ಕ್ಷೇತ್ರದ ಸಾಧನೆಗಳೂ ಹಲವು ತಲೆಮಾರುಗಳವರೆಗೂ ಬೆಳೆಯುತ್ತಲೇ ಇರುತ್ತದೆ. ಶ್ರೀಗಳ ನಿಧನ ಅತೀವ ನೋವು ತಂದಿದೆ. ಶ್ರೀಗಳ ಆತ್ಮಕ್ಕೆ ಶಾಂತಿ ಕೋರುತ್ತಾ, ಶ್ರದ್ದಾಂಜಲಿ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Join Whatsapp