ನ.1ರಿಂದ ಪಂಚರತ್ನ ಮುಳಬಾಗಿಲಿನಿಂದ ಆರಂಭ; ಅಂದೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಎಚ್ ಡಿಕೆ

Prasthutha|

ಬೆಂಗಳೂರು: ಜಾತ್ಯತೀತ ಜನತಾದಳದ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ರಾಷ್ಟ್ರೀಯ ಪರಿಷತ್ ಸಭೆ ಎರಡು ದಿನಗಳ ಕಾಲ (ಅ.27-28) ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆಯುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

- Advertisement -

ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕವೂ ಸೇರಿ 13 ರಾಜ್ಯಗಳಿಂದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಭಾಗಿಯಾಗಲಿದ್ದಾರೆ ಎಂದರು.
ಈ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರದ ರಾಜ್ಯದ ರಾಜಕೀಯ ಬೆಳವಣಿಗೆ, ಆರ್ಥಿಕ ವಿಚಾರಗಳು, ಕೋಮು ಸಂಘರ್ಷದ ವಿಷಯಗಳ ವಿಚಾರವಾಗಿ ಚರ್ಚೆ ನಡೆಸಲಾಗುವುದು. ಎರಡೂ ದಿನಗಳ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಎಂದು ಅವರು ಹೇಳಿದರು.

ಪಂಚರತ್ನಕ್ಕೆ ಅಂತಿಮ ತಯಾರಿ:

- Advertisement -

ನವೆಂಬರ್ 1 ರಂದು ಪಂಚರತ್ನ ಯೋಜನೆ ಪ್ರಾರಂಭ ಆಗಲಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ರಥಯಾತ್ರೆಯನ್ನು ಆರಂಭ ಮಾಡಲಾಗುವುದು. ಅದಕ್ಕೂ ಮೊದಲು ಗುರುವಾರ ಬೆಳಗ್ಗೆ ಬೆಂಗಳೂರಿನ ಗವಿಗಂಗಾಧರ ದೇವಸ್ಥಾನದಲ್ಲಿ ಒಂದು ರಥಕ್ಕೆ ಪೂಜೆ ನಡೆಸಲಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
1994ರಲ್ಲಿ ಹೆಚ್.ಡಿ.ದೇವೇಗೌಡರು ಕುರುಡುಮಲೆಯಿಂದಲೇ ಚುನಾವಣಾ ಪ್ರಚಾರ ಆರಂಭ ಮಾಡಿದ್ದರು. ಆಗ ಅವರು ಅಮೋಘ ಬಹುಮತ ಗಳಿಸಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದ್ದರು. ಈಗ ನಾವೂ ಅಲ್ಲಿಂದಲೇ ಪಂಚರತ್ನ ರಥಯಾತ್ರೆ ಆರಂಭ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ನವೆಂಬರ್ 1ರಂದೇ ಮುಂದಿನ ವಿಧಾನಸಭೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಾರ್ವಜನಿಕ ಸಮಾರಂಭದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಆವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ನವೆಂಬರ್ 1 ರಿಂದ 5ರವರೆಗೆ ಕೋಲಾರ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಲಿದೆ. ನ.6 ರಿಂದ 10 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ, 11 ರಿಂದ 13 ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ, 14 ರಿಂದ 23 ರವರೆಗೆ ತುಮಕೂರು ಜಿಲ್ಲೆ, 24 ರಿಂದ 30 ರವರೆಗೆ ಹಾಸನ ಜಿಲ್ಲೆಯಲ್ಲಿ, ಡಿಸೆಂಬರ್ 1 ರಂದು ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಡಿಸೆಂಬರ್ 2 ರಿಂದ 5 ರವರೆಗೆ ರಾಮನಗರ ಜಿಲ್ಲೆಯಲ್ಲಿ ರಥಯಾತ್ರೆ ಸಂಚಾರ ಮಾಡಲಿದೆ ಎಂದು ಅವರು ಮಾಹಿತಿ ನೀಡಿದರು.

ಒಟ್ಟು 35 ದಿನಗಳ ಕಾಲ ನಡೆಯುವ ಮೊದಲ ಹಂತದ ರಥ ಯಾತ್ರೆಯಲ್ಲಿ ಅನೇಕ ಹಳ್ಳಿ, ಪಟ್ಟಣಗಳನ್ನು ತಲುಪುತ್ತೇವೆ. ಉದ್ಯೋಗ, ಶಿಕ್ಷಣ, ನೀರಾವರಿ, ಕೃಷಿ, ಆರೋಗ್ಯ, ಮಹಿಳಾ ಮತ್ತು ಯುವಜನ ಸಬಲೀಕರಣ ಕುರಿತಂತೆ ರೂಪಿಸಿರುವ ಪಂಚರತ್ನ ಯೋಜನೆ ಇದಾಗಿದೆ ಎಂದು ಅವರು ಹೇಳಿದರು.

ಬಿಜೆಪಿ, ಕಾಂಗ್ರೆಸ್ ಯಾತ್ರೆಯಂತಲ್ಲ:

ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕ್ರಮಗಳಿಗೂ ನಮ್ಮ ಕಾರ್ಯಕ್ರಮಗಳಿಗೂ ವ್ಯತ್ಯಾಸ ಇದೆ. ಯಾವ ನಾಯಕರ ಬಗ್ಗೆಯೂ ನಾವು ಟೀಕೆ ಮಾಡಲ್ಲ. ನಮ್ಮದು ನಿಂದನಾ ಯಾತ್ರೆ ಅಲ್ಲ. ಜನರಿಗೆ ನಮ್ಮ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತೇವೆ. ಭಾರತ್ ಜೋಡೋ ಕಾರ್ಯಕ್ರಮದ ಬಗ್ಗೆ ಯಾವುದೇ ಆತಂಕ ಇಲ್ಲ. ನಮ್ಮ ರಥಯಾತ್ರೆ ವಿನೂತನವಾಗಿ ಇರಲಿದೆ. ಅಭಿವೃದ್ಧಿಗೆ ಪೂರಕವಾಗಿ ಇರಲಿದೆ. ಒಟ್ಟು 120 ಕ್ಷೇತ್ರಗಳಿಗೆ ಪ್ರವಾಸ ಮಾಡುತ್ತೇವೆ. ಮಾರ್ಚ್ 15 ರ ವರೆಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಅಧಿವೇಶನದಲ್ಲಿ ಭಾಗವಹಿಸಲ್ಲ:

ನವೆಂಬರ್ 1ರಿಂದಲೇ ನಾನು ಪಂಚರತ್ನ ರಥಯಾತ್ರೆ ಆರಂಭ ಮಾಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸುವುದು ಕಷ್ಟ. ಈ ಬಗ್ಗೆ ವಿಧಾನ ಸಭಾಧ್ಯಕ್ಷರಿಗೆ ಮಾಹಿತಿ ನೀಡುತ್ತೇನೆ. ನನ್ನ ಪರವಾಗಿ ನಮ್ಮ ಪಕ್ಷದ ಶಾಸಕರು ಅಧಿವೇಶನದಲ್ಲಿ ಭಾಗವಹಿಸುತ್ತಾರೆ. ಸಮಯ ಬಹಳ ಕಡಿಮೆ ಇದೆ. ಚುನಾವಣೆಗೂ ಸಿದ್ಧರಾಗಬೇಕಿದೆ. ಪಂಚರತ್ನ ಕಾರ್ಯಕ್ರಮ ದಲ್ಲಿ ನಾನು ಹೆಚ್ಚು ತೊಡಗಿಸಿಕೊಳ್ಳುತ್ತೇನೆ. ನಮ್ಮ ಎಲ್ಲ ಶಾಸಕರಿಗೆ ಭಾಗವಹಿಸಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ನಗರ ಘಟಕದ ಅಧ್ಯಕ್ಷ ಆರ್ ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಹಾಜರಿದ್ದರು.

Join Whatsapp