ಶಿವಮೊಗ್ಗ | ವಿದ್ಯುತ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ

Prasthutha|

ಶಿವಮೊಗ್ಗ: ವಿದ್ಯುತ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

- Advertisement -


ಶಿವಮೊಗ್ಗದ ಕೆ.ಇ.ಬಿ ವೃತ್ತದಲ್ಲಿ ಇಂದು ಶಿವಮೊಗ್ಗ ನಗರ ಬಿಜೆಪಿ ಘಟಕದ ವತಿಯಿಂದ ವಿದ್ಯುತ್ ದರ ಏರಿಕೆ ಖಂಡಿಸಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಮ್ಮಿಕೊಳ್ಳಲಾಗಿತ್ತು. ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರು ಪ್ರತಿಭಟನೆಯ ನಂತರ ಶಿವಮೊಗ್ಗ ನಗರ ಬಿಜೆಪಿ ಶಾಸಕ ಚನ್ನಬಸಪ್ಪ ಅವರು ಕರೆ ನೀಡುತ್ತಿದ್ದಂತೆ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.


ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಪ್ರಯತ್ನಿಸುತ್ತಿದ್ದಂತೆ ಕಾರ್ಯಕರ್ತನೋರ್ವ ಕಚೇರಿ ಮುಂಭಾಗದ ಗಾಜಿಗೆ ಕಲ್ಲು ತೂರಾಟ ಮಾಡಿದ್ದಾನೆ. ಬಳಿಕ ಕಾರ್ಯಕರ್ತರು ನೋಟಿಸ್ ಬೋರ್ಡ್ ಅನ್ನು ಕೂಡ ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಕಚೇರಿ ಒಳಗೆ ನುಗ್ಗಿ ಕಲ್ಲು ತೂರಾಟ ನಡೆಸುತ್ತಿದ್ದಂತೆ ಶಾಸಕ ಚನ್ನಬಸಪ್ಪ, ಮೇಯರ್ ಶಿವಕುಮಾರ್, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಕಾರ್ಪೋರೇಟರ್ ವಿಶ್ವಾಸ್ ಸೇರಿದಂತೆ ಸುಮಾರು 60ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

Join Whatsapp