ನ್ಯಾಯಾಧೀಶರ ವರ್ಗಾವಣೆ ಬೆದರಿಕೆ ಆರೋಪ: ಕರ್ನಾಟಕ ಹೈಕೋರ್ಟ್ ಮುಂದಿರುವ ಎಲ್ಲಾ ಪ್ರಕ್ರಿಯೆಗಳಿಗೆ ಸುಪ್ರೀಂ ತಡೆ

Prasthutha|

►ಎಸಿಬಿ ವಿರುದ್ಧ ಹೈಕೋರ್ಟ್ ಹೇಳಿಕೆ ಅನಗತ್ಯ ಎಂದ ಸುಪ್ರೀಂ

- Advertisement -

ನವದೆಹಲಿ: ಎಸಿಬಿ ಹಾಗೂ ಅದರ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಅವರ ವಿರುದ್ಧ ಕರ್ನಾಟಕ ಹೈಕೋರ್ಟ್ ನ್ಯಾ. ಎಚ್ ಪಿ ಸಂದೇಶ್ ಅವರು ಮಾಡಿದ್ದ ಅವಲೋಕನಗಳು ಹಾಗೂ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಉಪ ತಹಶೀಲ್ದಾರ್ ಜಾಮೀನು ಅರ್ಜಿ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ವ್ಯಕ್ತಪಡಿಸಿದ್ದ ಅಭಿಪ್ರಾಯ ಪ್ರಶ್ನಿಸಿ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಹಾಗೂ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಎಸಿಬಿ ವಿರುದ್ಧ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ ನೀಡಿದ್ದು, ಈ ಸಂಬಂಧ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಎಲ್ಲಾ ಪ್ರಕ್ರಿಯೆಗಳಿಗೂ ತಡೆ ನೀಡಿದೆ.

- Advertisement -

ಆದರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ತ್ವರಿತ ವಿಲೇವಾರಿ ನಡೆಸುವಂತೆ ಆದೇಶ ನೀಡಿದೆ.

ಎಸಿಬಿ ವಿರುದ್ಧ ಹೈಕೋರ್ಟ್ ನ್ಯಾಯಾಧೀಶರು ನೀಡಿದ್ದ ಆದೇಶ ಮತ್ತು ಅಧಿಕಾರಿಗಳ ಸೇವಾ ವರದಿ ಮತ್ತು ಬಿ ವರದಿ ಸಲ್ಲಿಸಬೇಕೆಂಬ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ಈ ಆದೇಶ ನೀಡಿದೆ. ಮಾತ್ರವಲ್ಲ ಜಾಮೀನು ಅರ್ಜಿ ವಿಚಾರಣೆಯ ವೇಳೆ ನ್ಯಾಯಾಧೀಶರು ನೀಡಿದ್ದ ಹೇಳಿಕೆ ಅನಗತ್ಯ, ಅಪ್ರಸ್ತುತ ಎಂದು ಪೀಠ ಹೇಳಿದೆ.

Join Whatsapp