ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಸಾರ್ವಕಾಲಿಕ: ಡಾ.ಬಿ.ಸಿ.ಸತೀಶ

Prasthutha|

ಮಡಿಕೇರಿ : ಜಗತ್ತನ್ನು ಜಾಗೃತಗೊಳಿಸಿದ ಸ್ವಾಮಿ ವಿವೇಕಾನಂದರ ನಿಲುವು ಸಾರ್ವಕಾಲಿಕವಾಗಿದ್ದು, ವಿವೇಕಾನಂದರ ವಿಚಾರಧಾರೆಗಳನ್ನು ಯುವಜನರು ತಿಳಿದುಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕರೆ ನೀಡಿದ್ದಾರೆ.

- Advertisement -


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕಗ್ಗೋಡ್ಲು ಕಾವೇರಿ ಯುವಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ನಗರದ ಎಫ್‍ಎಂಕೆಎAಸಿ ಕಾಲೇಜು ಸಭಾಂಗಣದಲ್ಲಿ ಬುಧವಾರ ‘ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ’ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಸ್ವಾಮಿ ವಿವೇಕಾನಂದರ ನಿಲುವುಗಳು ಸಾರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಅವರ ಆಧ್ಯಾತ್ಮಿಕ ಹಾಗೂ ದೂರದೃಷ್ಟಿ ಚಿಂತನೆಗಳು, ಪ್ರಕಾಂಡ ಪಾಂಡಿತ್ಯವನ್ನು ಹೊಂದಿದ್ದವು. ಸ್ವಾಮಿ ವಿವೇಕಾನಂದರು ಯುವ ಜನರಿಗೆ ಒಂದು ರೀತಿ ‘ಶಕ್ತಿ’ ಇದ್ದಂತೆ, ಕೇವಲ ೩೯ ವರ್ಷ ಬಾಳಿ, ಬದುಕಿದ ಸ್ವಾಮಿ ವಿವೇಕಾನಂದರು, ಎಷ್ಟೊಂದು ಪ್ರಖ್ಯಾತಿ ಹೊಂದಿದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು.ದೇಶ, ವಿದೇಶಗಳನ್ನು ಸುತ್ತಿ ಯುವ ಜನರ ಶಕ್ತಿಯ ಮಹತ್ವದ ಬಗ್ಗೆ ಸಂದೇಶ ಸಾರಿದರು. ತಮ್ಮ ಆಳವಾದ ಅಧ್ಯಯನದ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಪಾಂಡಿತ್ಯ ಸಂಪಾದಿಸಿದ್ದರು ಎಂದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹೇಳಿದರು.

- Advertisement -

ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಸ್ವಾಮಿ ವಿವೇಕಾನಂದರು ‘ಭವ್ಯ ಭಾರತದ ಶಿಲ್ಪಿ’ ಎಂದು ಬಣ್ಣಿಸಿದರು. ಸ್ವಾಮಿ ವಿವೇಕಾನಂದರು ಮುಂದಿನ ಪೀಳಿಗೆಗೆ ರಾಷ್ಟ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮೆಟ್ಟಿಲುಗಳನ್ನು ನಿರ್ಮಾಣ ಮಾಡಿದ್ದರು. ಅಮೇರಿಕಾದ ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಮಾಡಿದ್ದ ಭಾಷಣ ಇಡೀ ವಿಶ್ವದಲ್ಲಿಯೇ ಜನಮನ್ನಣೆ ಗಳಿಸಿತು ಎಂದು ಅವರು ನುಡಿದರು. ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಮಾತನಾಡಿ ಯುವಜನರು ಗುರಿ ತಲುಪುವ ತನಕ ಪ್ರಯತ್ನಿಸಬೇಕು. ಆತ್ಮವಿಶ್ವಾಸ ಇದ್ದಲ್ಲಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬಹುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಅವರು ಮಾತನಾಡಿ ಯುವ ಜನರು ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು. ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳನ್ನು ಅಧ್ಯಯನ ಮಾಡಬೇಕು ಎಂದರು.

Join Whatsapp