ಇಬ್ರಾಹೀಂ ಜೊತೆ ಮಾತನಾಡುತ್ತೇನೆ: ಡಿ.ಕೆ. ಶಿವಕುಮಾರ್

Prasthutha|

ಬೆಂಗಳೂರು: ಸಿ.ಎಂ.ಇಬ್ರಾಹೀಂ ಹಿರಿಯ ನಾಯಕರು. ಅವರ ಜೊತೆ ಮಾತನಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

- Advertisement -

ಇಬ್ರಾಹೀಂ ಅವರು ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿದ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಇಬ್ರಾಹಿಂ ಅವರು ಹಿರಿಯ ನಾಯಕರು. ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ಸಿದ್ದರಾಮಯ್ಯ ಅವರ ಕಾಲದಲ್ಲಿ ಹಾಲಿ ಶಾಸಕರನ್ನು ಬಿಟ್ಟು ಅವರಿಗೆ ಟಿಕೆಟ್ ನೀಡಲಾಗಿತ್ತು. ಅವರು ಸೋತ ನಂತರವೂ ಅವರಿಗೆ ಸಂಪುಟ ಸ್ಥಾನಮಾನ ನೀಡಿ ಯೋಜನಾ ಆಯೋಗದ ಮುಖ್ಯಸ್ಥರನ್ನಾಗಿ ಮಾಡಲಾಗಿತ್ತು. ಸತತ ಎರಡು ಬಾರಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಅವರು ಪಕ್ಷದ ಕೆಲಸ ಮಾಡಿಕೊಂಡು ಬಂದಿದ್ದಾರೆ. ಅಸಮಾಧಾನ ಇರುತ್ತದೆ ಹೀಗಾಗಿ ಅವರು ಮಾತನಾಡಿದ್ದಾರೆ. ಅವರು ನಮ್ಮ ಸ್ನೇಹಿತರು, ನಮಗೆ ಒಳ್ಳೆಯದು ಬಯಸಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಖಂಡಿತವಾಗಿಯೂ ಅವರ ಜತೆ ಮಾತನಾಡುತ್ತೇನೆ’ ಎಂದರು.

ಕೋವಿಡ್ ಸೋಂಕು ಹೆಚ್ಚುತ್ತಿರುವ ಸನ್ನಿವೇಶದಲ್ಲಿ ರೇಸ್ ಕೋರ್ಸ್ ನಲ್ಲಿ ಅಲ್ಟ್ರಾ ಡರ್ಬಿ ಬೆಂಗಳೂರು ರೇಸ್ ನಡೆಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ,. ‘ಈ ವಿಚಾರವಾಗಿ ನಾನು ಟ್ವೀಟ್ ಮಾಡಿದ್ದೇನೆ. ರೇಸ್ ಕೋರ್ಸ್ ಆಡಳಿತ ಮಂಡಳಿಯಲ್ಲಿ ಸರ್ಕಾರದ ಅಧಿಕಾರಿಗಳು ಇದ್ದಾರೆ. ಇದರಲ್ಲಿ ಸರ್ಕಾರದ ಪಾತ್ರವೂ ಇದೆ. ಅದರ ಬಗ್ಗೆ ಮುಖ್ಯಮಂತ್ರಿಗಳು, ಪೊಲೀಸ್ ಮಹಾನಿರ್ದೇಶಕರು, ಗೃಹಮಂತ್ರಿಗಳು ಗಮನಹರಿಸಲಿ. ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಎಂದು ನೋಡಿಕೊಂಡು, ಈ ವಿಚಾರವಾಗಿ ಕೋರ್ಟ್ ಗೆ ಮಾಹಿತಿ ನೀಡುವ ಬಗ್ಗೆ ತೀರ್ಮಾನಿಸುತ್ತೇವೆ’ ಎಂದು ಉತ್ತರಿಸಿದರು. ನಾವು ರಾಜ್ಯದ ಹಿತಕ್ಕಾಗಿ ಪಾದಯಾತ್ರೆ ಮಾಡಿದಾಗ ನಮ್ಮ ಮೇಲೆ ಕೇಸ್ ದಾಖಲಿಸಿದ್ದಾರೆ. ರಾಜ್ಯಾದ್ಯಂತ ಬಿಜೆಪಿ ನಾಯಕರು ಸಾಕಷ್ಟು ಬಾರಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಅವರು ಹೇಳಿದರು

Join Whatsapp