ದೇವಾಲಯಗಳ ಸ್ವಾಯತ್ತತೆ; ಬಿಜೆಪಿ ಸರಕಾರ ಭಸ್ಮವಾಗಲಿದೆ: ಡಿ.ಕೆ. ಶಿವಕುಮಾರ್

Prasthutha|

ಬೆಂಗಳೂರು: ರಾಜ್ಯದ ದೇವಾಲಯಗಳ ಜನರ ಆಸ್ತಿಯಾಗಿದ್ದು, ಸರ್ಕಾರ ಈ ಆಸ್ತಿಯನ್ನು ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರಿಗೆ ಹಸ್ತಾಂತರ ಮಾಡಲು ಮುಂದಾಗಿದೆ. ಇದು ಹಿಂದೂ ವಿರೋಧಿ ನೀತಿಯಾಗಿದೆ ಮತ್ತು ರಾಜ್ಯದ ಜನ ಬಿಜೆಪಿಯನ್ನು ಕ್ಷಮಿಸುವುದಿಲ್ಲ. ಈ ನಿರ್ಧಾರದಿಂದ ಬಿಜೆಪಿ ಸರ್ಕಾರ ಸುಟ್ಟು ಭಸ್ಮವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

- Advertisement -

ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಪರಂಪರೆಯನ್ನು ಬುಡಮೇಲು ಮಾಡಲು ಸರಕಾರ ಹೊರಟಿದೆ. ಒಂದೆರಡು ದೇವಾಲಯ, ಮಠಗಳನ್ನು ಬಿಟ್ಟರೆ ಉಳಿದೆಲ್ಲವೂ ಸರ್ಕಾರದ ನಿಯಂತ್ರಣದಲ್ಲಿದೆ. ಈ ಎಲ್ಲಾ ದೇವಾಲಯಗಳಲ್ಲಿ ಭಕ್ತಾಧಿಗಳು ಕೋಟ್ಯಂತರ ರೂಪಾಯಿಯನ್ನು ಕಾಣಿಕೆ ಹುಂಡಿಗೆ ಹಾಕುತ್ತಾರೆ. ಇದನ್ನು ಬಿಜೆಪಿ ತಮ್ಮ ಕಾರ್ಯಕರ್ಯರಿಗೆ ಹಂಚಲು ಹೊರಟಿದೆ.

ನಾವು ಕೂಡ ಹಿಂದೂಗಳಾಗಿದ್ದು, ಧರ್ಮ ಹಾಗೂ ಸಂಸ್ಕೃತಿಯಲ್ಲಿ ನಂಬಿಕೆ ಇಟ್ಟಿದ್ದೇವೆ. ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನಪರವಾದ ಒಂದೇ ಒಂದು ಯೋಜನೆ ಜಾರಿಗೆ ತರಲಿಲ್ಲ. ನಮ್ಮ ಸರ್ಕಾರ ನೀಡಿದ್ದ ಕಾರ್ಯಕ್ರಮಗಳು ಮತ್ತು ಬಿಜೆಪಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ. ಪ್ರಸಕ್ತ ಈಗ ಚುನಾವಣೆಯಲ್ಲಿ ಸೋಲುತ್ತಿದ್ದೇವೆ ಎಂಬ ಕಾರಣಕ್ಕೆ ಇವರು ಗೋಹತ್ಯೆ, ಮತಾಂತರ ನಿಷೇಧ, ದೇವಾಲಯಗಳ ಸ್ವಾಯತ್ತತೆ ಕಾನೂನು ತರುತ್ತಿದ್ದಾರೆ. ಚುನಾವಣೆಯ ಸೋಲನ್ನು ಮರೆಮಾಚಲು ಜನರನ್ನು ಭಾವನಾತ್ಮಕವಾಗಿ ಹಿಡಿದಿಡಲು ಪ್ರಯತ್ನ ಮುಂದುವರಿದಿದ್ದು, ಕಾಂಗ್ರೆಸ್ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು.

- Advertisement -

ಈ ರೀತಿಯ ಕಾರ್ಯದಿಂದ ಜನ ಮತ ನೀಡುತ್ತಾರೆ ಎಂಬ ಭ್ರಮೆಯಿಂದ ಮುಖ್ಯಮಂತ್ರಿ ಹೊರಬರಬೇಕು. ದೇವಾಲಯಗಳಲ್ಲಿ ಈಗ ನಡೆಸಿಕೊಂಡು ಬರುತ್ತಿರುವ ಆಚರಣೆಗಳನ್ನು ಮುಂದುವರಿಸಬೇಕು. ಇದಕ್ಕೆ ತಪ್ಪಿದಲ್ಲಿ ಬಿಜೆಪಿ ಪಕ್ಷ, ಸರಕಾರ ಸುಟ್ಟು ಹೋಗುತ್ತದೆ. ನಾವು ಹಿಂದೂ ವಿರೋಧಿಗಳಲ್ಲ, ಬಿಜೆಪಿಯವರೇ ನಿಜವಾದ ಹಿಂದೂ ವಿರೋಧಿಗಳು. ದೇವಾಲಯ ಬಿಜೆಪಿಗರ ಆಸ್ತಿಯಲ್ಲ, ಬದಲಾಗಿ ರಾಜ್ಯದ ಜನರ ಆಸ್ತಿ ಎಂದು ಡಿಕೆಶಿ ಗುಡುಗಿದ್ದಾರೆ.

ದೇವರು, ದೇವಾಲಯಗಳನ್ನೇ ಮಾರಲು ಹೋರಟಿರುವ ಬಿಜೆಪಿಯವರು ಎಂತಹ ಕ್ರೂರ ಕೃತ್ಯಕ್ಕೆ ಕೈ ಹಾಕಿದ್ದಾರೆ. ಮುಂದಿನ ತಿಂಗಳು 4 ರಂದು ನಾವು ಪಕ್ಷದ ನಾಯಕರ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ಮಾಡಿ ಒಮ್ಮತದ ನಿರ್ಧಾರಕ್ಕೆ ಬರುತ್ತೇವೆ ಎಂದು ಅವರು ಮಾರ್ಮಿಕವಾಗಿ ನುಡಿದರು.

ದೇವಾಲಯಗಳನ್ನು ಭಕ್ತಾದಿಗಳಿಗೆ ನೀಡುತ್ತಿದ್ದೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ‘ಕಬ್ಬಾಳಮ್ಮ ದೇವಾಲಯದಲ್ಲಿ ಈ ಹಿಂದೆ ಏನಾಗುತ್ತಿತ್ತು. ನಾನು ಅದರ ಜವಾಬ್ದಾರಿ ತೆಗೆದುಕೊಂಡ ಮೇಲೆ ಅಲ್ಲಿ ಎಷ್ಟು ಅಭಿವೃದ್ಧಿಯಾಗಿದೆ. ನಮ್ಮ ಬನಶಂಕರಿ ದೇವಾಲಯ, ಕಾಡು ಮಲ್ಲೇಶ್ವರ ದೇವಾಲಯಗಳು ಸರ್ಕಾರದ ನಿಯಂತ್ರಣದಲ್ಲಿವೆ. ಕಳೆದ ಬಾರಿ ಅವರು ಸಮಿತಿ ರಚಿಸಿದರು. ಅದು ಏನಾಯ್ತು? ಎಂಬುದನ್ನು ನೋಡಿ ಎಂದು ಪ್ರಶ್ನಿಸುವ ಮೂಲಕ ಸರ್ಕಾರ ನಡೆಯನ್ನು ಟೀಕಿಸಿದರು.

ಶಿಕ್ಷಣ ಸಂಸ್ಥೆಗಳ ಹೆಸರಲ್ಲಿ ಕೋಟ್ಯಂತರ ರೂಪಾಯಿಯನ್ನು ಸರ್ಕಾರ ಸಂಘ ಪರಿವಾರದವರಿಗೆ ನೀಡಿದೆ. ಈಗ ದೇವಾಲಯಗಳನ್ನು ಹಸ್ತಾಂತರಿಸಕ್ಕೆ ಮುಂದಾಗಿದೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಹಿತಾಸಕ್ತಿ, ಹಿಂದೂಗಳು ಹಾಗೂ ಧಾರ್ಮಿಕ ವಿಚಾರಗಳ ಸಂಬಂಧ ಕೈಗೊಂಡಿರುವ ಜನವಿರೋಧಿ ನಿರ್ಧಾರಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ ಎಂದರು.

ಮತಾಂತರ ನಿಷೇಧ ಕಾಯ್ದೆ ಜಾರಿಗೆ ವಿಶೇಷ ಟಾಸ್ಕ್ ಫೋರ್ಸ್ ರಚನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಅದು ಸಾಧ್ಯವಿಲ್ಲ. ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ತರಲು ಮುಂದಾಗಿದೆ. ಈ ರಾಜ್ಯದಲ್ಲಿ ಕಾನೂನು ಇದೆ. ಸರಕಾರದ ನಿಲುವಿನ ವಿರುದ್ಧ ಜನರ ಮುಂದೆ ಹೋಗಿ ಹೋರಾಡುತ್ತೇವೆ. ನಾವು ಅಧಿಕಾರಕ್ಕೆ ಬಂದ ನಂತರ ಈ ಎಲ್ಲ ನಿರ್ಧಾರವನ್ನು ಹಿಂಪಡೆಯುತ್ತೇವೆ’ ಎಂದರು.

ಅರೆಸ್ಸೆಸ್ ನಾಯಕರನ್ನು ಓಲೈಸಲು ಈ ರೀತಿ ಮಾಡುತ್ತಿದ್ದಾರಾ ಎಂಬ ಪ್ರಶ್ನೆಗೆ, ‘ಬಿಜೆಪಿ ನಾಯಕತ್ವದ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿ, ನಮ್ಮವರನ್ನೆಲ್ಲ ಕರೆದುಕೊಂಡು ಹೋಗಿ ಸರ್ಕಾರ ಮಾಡಿದ್ದಾರೆ. ಆದರೆ ಇಂತಹ ನಿರ್ಧಾರಗಳನ್ನು ರಾಜ್ಯದ ಜನ ಯಾವ ಕಾರಣಕ್ಕೂ ಕ್ಷಮಿಸುವುದಿಲ್ಲ, ದೇವರೂ ಕ್ಷಮಿಸುವುದಿಲ್ಲ’ ಎಂದು ಉತ್ತರಿಸಿದರು.

ಡಿ.ಕೆ. ಶಿವಕುಮಾರ್ ಅವರು ಬೆಕ್ಕಿನ ಕನಸಲ್ಲಿ ಇಲಿ ಕಂಡಿದ್ದಾರೆ ಎಂಬ ಸಿಎಂ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅವರು ಮುಖ್ಯಮಂತ್ರಿ ಆಗಿರುವ ಸಂತೋಷದಲ್ಲಿ ತೇಲಾಡುತ್ತಿದ್ದಾರೆ. ನಾವು ಬೇಸರ ಮಾಡಿಕೊಳ್ಳುವುದಿಲ್ಲ. ಅವರಿಗೆ ಜನ ಅಗತ್ಯ ಸಮಯದಲ್ಲಿ ಉತ್ತರ ಕೊಡುತ್ತಿದ್ದು, ಮುಂದೆಯೂ ನೀಡುತ್ತಾರೆ. ಅವರು ನನ್ನ ಬಗ್ಗೆ ಏನಾದರೂ ಹೇಳಲಿ, ನನ್ನನ್ನು ಬೆಕ್ಕು, ಇಲಿ, ಹುಲಿ ಯಾವುದರ ಕಣ್ಣಿಗಾದರೂ ಹಾಕಲಿ. ಸಗಣಿಗೆ ಗರಿಕೆ ಚುಚ್ಚಿ ಪಿಳ್ಳಾರತಿ ಮಾಡಿದರೆ ಗಣೇಶ ಆಗುತ್ತದೆ. ಇಲಿ ಗಣೇಶನ ವಾಹನ. ಆದರೆ ಈ ಸರಕಾರದವರು ಹಿಂದೂ ದೇವಾಲಯ ಮಾರಾಟ ಮಾಡಲು ಹೊರಟಿರುವುದು ಸರಿಯಲ್ಲ’ ಎಂದರು.

ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ:

ಕರ್ನಾಟಕ ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿನ ಗೆಲವು ಕೇವಲ ಕಾಂಗ್ರೆಸ್ ಪಕ್ಷದ್ದಲ್ಲ. ಇಡೀ ರಾಜ್ಯದ ಜನರ ಗೆಲವು. ಜನ ಬಿಜೆಪಿ ಆಡಳಿತ ನೋಡಿದ್ದು, ಜನ ಬದಲಾವಣೆ ಬಯಸಿದ್ದಾರೆ. ರಾಜ್ಯ ಕಾಂಗ್ರಸ್ ಕಾರ್ಯಕರ್ತರು ಅತ್ಯುತ್ತಮ ಕೆಲಸ ಮಾಡಿದ್ದು, ಮತದಾರರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, ರಾಜ್ಯದಲ್ಲಿ ಬದಲಾವಣೆ ಗಾಳಿ ಆರಂಭವಾಗಿದೆ. ಉತ್ತಮ ಆಡಳಿತ ನೀಡುವ ಸರ್ಕಾರ ಬರಬೇಕು. ಬಿಜೆಪಿ ಯಾವ ಕಾರಣಕ್ಕೆ ನಾಯಕತ್ವ ಬದಲಾವಣೆ ಮಾಡುತ್ತಿದೆ, ಅವರು ಎಷ್ಟು ಜನ ಮುಖ್ಯಮಂತ್ರಿ ಮಾಡುತ್ತಾರೆ ಎಂಬುದರ ಬಗ್ಗೆ ನಾವು ಚರ್ಚೆ ಮಾಡುವುದಿಲ್ಲ. ಅದು ಅವರಿಗೆ ಬಿಟ್ಟ ವಿಚಾರ. ಆದರೆ ಜನ ಬಿಜೆಪಿ ಸರ್ಕಾರ ಕಿತ್ತೊಗೆದು ಪರ್ಯಾಯ ಸರ್ಕಾರವನ್ನು ಬಯಸಿದ್ದಾರೆ ಎಂದು ತಿಳಿಸಿದರು.

2023ರ ಚುನಾವಣೆಗೆ ಇದು ಮುನ್ಸೂಚನೆಯೇ ಎಂಬ ಪ್ರಶ್ನೆಗೆ, ‘ಇದು ಕೇವಲ ನಗರ ಸ್ಥಳೀಯ ಸಂಸ್ಥೆಗಳ ವಿಚಾರ ಮಾತ್ರವಲ್ಲ. ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಜಿಲ್ಲೆಯ ಜನರೇ ಬದಲಾವಣೆ ಬಯಸಿ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಚುನಾಯಿತ ಪ್ರತಿನಿಧಿಗಳು ಕೂಡ ಕಾಂಗ್ರೆಸ್ ಪರವಾಗಿ ನಿಂತಿದ್ದಾರೆ. ಬಿಜೆಪಿ ಸರ್ಕಾರ ತಮಗೆ ಸಿಕ್ಕ ಅವಕಾಶದಲ್ಲಿ ವಿಫಲರಾಗಿದ್ದು, ಜನ ಕಾಂಗ್ರೆಸ್ ಸರ್ಕಾರವನ್ನು ಬಯಸುತ್ತಿದ್ದಾರೆ’ ಎಂದರು.

ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯ:

2022 ಕ್ಕೆ ನಾವು ಹೆಜ್ಜೆ ಇಡುತ್ತಿದ್ದು, 2 ವರ್ಷಗಳ ಕಾಲ ನಾವು ಕಷ್ಟ ಅನುಭವಿಸಿದ್ದೇವೆ. ದೀಪ ಹಚ್ಚಿ, ಚಪ್ಪಾಳೆ ಹೊಡೆದು, ಜಾಗಟೆ ಬಾರಿಸಿದರೂ ಯಾವ ಪರಿಹಾರ ಸಿಗಲಿಲ್ಲ. ಈ ಹೊಸ ವರ್ಷ ರಾಜ್ಯದ ಜನತೆಗೆ ನೆಮ್ಮದಿ, ಆರೋಗ್ಯ ಸಿಗಲಿ. ಮಕ್ಕಳಿಗೆ ವಿದ್ಯಾಭ್ಯಾಸ ಸಿಗಲಿ, ಎಲ್ಲರಿಗೂ ಮಂಗಳವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ರಾಜ್ಯದ ಜನರಿಗೆ ಶುಭ ಕೋರುತ್ತೇನೆ ಎಂದು ಅವರು ಈ ವೇಳೆ ತಿಳಿಸಿದರು.



Join Whatsapp