ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ

Prasthutha|

ಹುಬ್ಬಳ್ಳಿ: ನಗರದ ವಿವಾದಿತ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಮಹಾನಗರ ಪಾಲಿಕೆಯು ಬುಧವಾರ ಅನುಮತಿ ನೀಡಿದೆ.

- Advertisement -

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸಿದ ನಂತರ ಎಐಎಂಐಎಂ ಮತ್ತು ಕೆಲವು ದಲಿತ ಸಂಘಟನೆ ಟಿಪ್ಪು ಜಯಂತಿ ಮಾಡುವುದಕ್ಕೆ ಅನುಮತಿ ನೀಡಬೇಕೆಂದು ಪಾಲಿಕೆಗೆ ಮನವಿ ಮಾಡಿಕೊಂಡಿದ್ದರು. ಇದೀಗ ಮೇಯರ್ ಟಿಪ್ಪು ಜಯಂತಿ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಿದ್ದಲ್ಲದೆ ಜೊತೆಗೆ ಉಳಿದ ಎಲ್ಲಾ ಜಯಂತಿ ಹಾಗೂ ಕಾರ್ಯಕ್ರಮಗಳನ್ನು ಈದ್ಗಾ ಮೈದಾನದಲ್ಲಿ ಮಾಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಮೇಯರ್ ಈರೇಶ ಅಂಚಟಗೇರಿ, ಗಣೇಶೋತ್ಸವ ಸಂದರ್ಭದಲ್ಲಿ ರಚಿಸಿದ್ದ ಸದನ ಸಮಿತಿ, ಮೈದಾನವನ್ನು ಎಲ್ಲರಿಗೂ ಮುಕ್ತಗೊಳಿಸುವಂತೆ ಶಿಫಾರಸು ಮಾಡಿತ್ತು. ಅದರಂತೆ, ಮಹಾಪುರುಷರ ಜಯಂತಿಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಧಾರ್ಮಿಕ, ಸಾಮಾಜಿಕ ಹಾಗೂ ವಾಣಿಜ್ಯ ಚಟುವಟಿಕೆಗಳಿಗೂ ಮೈದಾನ ಮುಕ್ತವಾಗಿರಲಿದೆ. ಆಯುಕ್ತರು ಷರತ್ತುಬದ್ಧ ಅನುಮತಿ ನೀಡಲಿದ್ದಾರೆ ಎಂದು ತಿಳಿಸಿದರು.

- Advertisement -

ಟಿಪ್ಪು ಜಯಂತಿಗೆ ವೈಯಕ್ತಿಕವಾಗಿ ನನ್ನ ಮತ್ತು ಪಕ್ಷದ ವಿರೋಧವಿದ್ದರೂ, ಬೇರೆಯವರು ಆಚರಿಸಲು ಅನುಮತಿ ಕೇಳಿದಾಗ ನಿರಾಕರಿಸಲಾಗದು. ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುವುದಿಲ್ಲ ಎಂದು ಹೇಳಿರುವುದರಿಂದ, ಪಾಲಿಕೆಯಿಂದಲೂ ಜಯಂತಿ ಆಚರಿಸುವುದಿಲ್ಲ ಎಂದರು.

ಅನುಮತಿ ಬೆನ್ನಲ್ಲೆ, ಟಿಪ್ಪು ಜಯಂತಿಗೆ ಮನವಿ ಸಲ್ಲಿಸಿದ್ದ ಎಐಎಂಐಎಂ ಪಕ್ಷದ ಜಿಲ್ಲಾ ಜಂಟಿ ಕಾರ್ಯದರ್ಶಿ ವಿಜಯ ಗುಂಟ್ರಾಳ ಅವರು, ತಮ್ಮ ಪಕ್ಷದ ಅಧ್ಯಕ್ಷರ ವಿರೋಧ ಲೆಕ್ಕಿಸದೆ, ಗುರುವಾರ ಮಧ್ಯಾಹ್ನ 12 ಗಂಟೆಗೆ ಪಕ್ಷದ ವತಿಯಿಂದಲೇ ಜಯಂತಿ ಆಚರಿಸುವುದಾಗಿ ತಿಳಿಸಿದ್ದಾರೆ. ಆದರೆ, ಮೈದಾನದಲ್ಲಿ ಜಯಂತಿ ಆಚರಣೆಗೆ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ನಝೀರ್ ಅಹ್ಮದ ಹೊನ್ಯಾಳ ವಿರೋಧ ವ್ಯಕ್ತಪಡಿಸಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಗಾಗಿಯೇ ಈ ಅನುಮತಿ ನೀಡಿರಬಹುದು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ದೊರೈರಾವ್ ಮಣಿಕುಂಟ್ಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Join Whatsapp