ಮಂಡ್ಯದಲ್ಲಿ ಮೋದಿ ಸ್ವಾಗತಕ್ಕೆ ಹಾಕಲಾಗಿದ್ದ ವಿವಾದಿತ ಉರಿಗೌಡ-ನಂಜೇಗೌಡ ಕಟೌಟ್ ತೆರವು

Prasthutha|

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿವಾದಿತ ಉರಿಗೌಡ ಹಾಗೂ ದೊಡ್ಡ ನಂಜೇಗೌಡ ಮಹಾದ್ವಾರ ಎಂದು ಹಾಕಲಾಗಿದ್ದ ಬ್ಯಾನರ್ ತೆರವುಗೊಳಿಸಲಾಗಿದೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ರೋಡ್ ಶೋ ನಡೆಸುವ ಮಾರ್ಗದಲ್ಲಿ ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ ಹಾಗೂ ದೊಡ್ಡ ನಂಜೇಗೌಡ ಮಹಾದ್ವಾರ ಹೆಸರಿನಲ್ಲಿ ಕಟೌಟ್ ಹಾಕಲಾಗಿತ್ತು. ಮಂಡ್ಯದಲ್ಲೇ ಇದಕ್ಕೆ ತೀವ್ರ ಆಕ್ರೋಶ, ಟೀಕೆಗಳು ವ್ಯಕ್ತವಾಗಿದ್ದವು. ಇದರಿಂದ ಈ ವಿವಾದಿತ ಬ್ಯಾನರ್ ದ್ವಾರವನ್ನು ರಾತ್ರೋ ರಾತ್ರಿ ತೆರವುಗೊಳಿಸಲಾಗಿದ್ದು, ಈ ಸ್ಥಳದಲ್ಲಿ ಬಾಲಗಂಗಾಧರನಾಥ್ ಸ್ವಾಮೀಜಿ ಮಹಾದ್ವಾರ ಎಂದು ಬ್ಯಾನರ್ ಹಾಕಲಾಗಿದೆ.

ಮಂಡ್ಯದ ಗೆಜ್ಜಲಗೆರೆಯಲ್ಲಿ ನರೇಂದ್ರ ಮೋದಿ ಅವರು ಇಂದು (ಮಾ.12) ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇ ಉದ್ಘಾಟಿಸಲಿದ್ದಾರೆ. ಅಲ್ಲದೇ ನಗರ ವ್ಯಾಪ್ತಿಯಲ್ಲಿ 1.8 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಗದುದ್ದಕ್ಕೂ ಕಟೌಟ್ಗಳಿಂದ ನಾಲ್ಕು ಮಹಾದ್ವಾರಗಳನ್ನು ನಿರ್ಮಿಸಲಾಗಿದೆ. ರೋಡ್ ಶೋ ಆರಂಭವಾಗುವ ಪ್ರವಾಸಿ ಮಂದಿರದ ಬಳಿ ಸರ್.ಎಂ. ವಿಶ್ವೇಶ್ವರಯ್ಯ, ಜೆಸಿ ವೃತ್ತದಲ್ಲಿ ಕೆಂಪೇಗೌಡ, ಮಹಾವೀರ ವೃತ್ತದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾದ್ವಾರ ಹಾಕಲಾಗಿದೆ. ಈ ಮೂರು ದ್ವಾರಗಳಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದ್ರೆ ನಾಲ್ಕನೇ ಮಹಾದ್ವಾರ ಫ್ಯಾಕ್ಟರಿ ಸರ್ಕಲ್ನಲ್ಲಿ ಹಾಕಲಾಗಿದ್ದ ಉರಿಗೌಡ ಮತ್ತು ದೊಡ್ಡನಂಜೇಗೌಡ ಮಹಾದ್ವಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

- Advertisement -

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಟ್ವೀಟ್ ಮಾಡಿ, ಸ್ವಾಗತಕ್ಕಾಗಿ ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ-ನಂಜೇಗೌಡ ಹೆಸರಿನ ಕಮಾನು ಹಾಕಿರುವುದು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರನ್ನು ನೀಡಿದ ಮಂಡ್ಯಕ್ಕೆ ಮಾತ್ರವಲ್ಲ ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ತಕ್ಷಣ ಮಧ್ಯೆ ಪ್ರವೇಶಿಸಿ ಈ ಸ್ವಾಗತ ಕಮಾನನ್ನು ಕಿತ್ತು ಹಾಕಿಸಬೇಕು ಎಂದು ಆಗ್ರಹಿಸಿದ್ದರು.

Join Whatsapp