Home ಟಾಪ್ ಸುದ್ದಿಗಳು ವಾಲ್ಮೀಕಿ ನಿಗಮದ ಹಗರಣ; ಸೆ.17ರಿಂದ ಪಾದಯಾತ್ರೆ: ಪ್ರತಾಪ್ ಸಿಂಹ

ವಾಲ್ಮೀಕಿ ನಿಗಮದ ಹಗರಣ; ಸೆ.17ರಿಂದ ಪಾದಯಾತ್ರೆ: ಪ್ರತಾಪ್ ಸಿಂಹ

ಮೈಸೂರು: ‘ಪಕ್ಷದ ನೇತಾರ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೇತೃತ್ವದಲ್ಲಿ ನಾವು ಬೆಳಗಾವಿಯಲ್ಲಿ ಈಚೆಗೆ ನಡೆಸಿದ್ದು ಬಿಜೆಪಿ ಅತೃಪ್ತರ ಅಥವಾ ಬಂಡಾಯಗಾರರ ಸಭೆಯಲ್ಲ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣವನ್ನು ಖಂಡಿಸಿ ಸೆ.17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ’ ಎಂದು ಮಾಜಿ ಸಂಸದ ಪ್ರತಾಪ ಸಿಂಹ ತಿಳಿಸಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈಸೂರು ಚಲೋ ಪಾದಯಾತ್ರೆಯ ಅನುಭವವನ್ನು ನಾನು ಅಲ್ಲಿ ಹಂಚಿಕೊಂಡೆ. ವಾಲ್ಮೀಕಿ ನಿಗಮದ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡುತ್ತದೆ. ಯತ್ನಾಳ್ ಅವರಂಥ ದೊಡ್ಡ ನಾಯಕ ಕರೆದ ಕಾರಣ ನಾನು ಹೋಗಿದ್ದೆ’ ಎಂದರು.


‘ನಮ್ಮ ಪಾದಯಾತ್ರೆ ಯಾರ ಮೇಲಾಟದ ಕಾರ್ಯಕ್ರಮವಲ್ಲ; ಯಾರ ನಾಯಕತ್ವ ಪ್ರದರ್ಶನವೂ ಅಲ್ಲ. ಅದಕ್ಕೆ ಹೈಕಮಾಂಡ್ ಅನುಮತಿ ಕೊಡುತ್ತದೆ. ವರಿಷ್ಠರ ಅನುಮತಿಯೊಂದಿಗೇ ನಡೆಸುತ್ತೇವೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಎಲ್ಲರನ್ನೂ ಆಹ್ವಾನಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಹೇಳಿದರು.

Join Whatsapp
Exit mobile version