ದಸರಾ ಉದ್ಘಾಟಕರಾಗಿ ಎಸ್.ಎಂ.ಕೃಷ್ಣ ಆಯ್ಕೆ ವಿರೋಧಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

Prasthutha|

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಎಸ್.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಗುರುವಾರ ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.


ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಎಸ್.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಿರುವುದು ಸರಿಯಲ್ಲ. ಬಿಜೆಪಿ ಸರ್ಕಾರ ದಸರಾ ಸಂಪ್ರದಾಯವನ್ನು ಗಾಳಿಗೆ ತೂರಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ವಾಗ್ದಾಳಿ ನಡೆಸಿದರು.

ವೈಯಕ್ತಿಕವಾಗಿ ಎಸ್.ಎಂ.ಕೃಷ್ಣರ ಬಗ್ಗೆ ಗೌರವ ಇದೆ. ಆದರೆ, ದಸರಾ ಉದ್ಘಾಟನೆಗೆ ಅವರನ್ನು ಆಯ್ಕೆ ಮಾಡಿರುವುದು ಸರಿಯಲ್ಲ. ಹಿಂದಿನಿಂದಲೂ ದಸರಾಗೆ ತನ್ನದೇ ಆದ ಸಂಪ್ರದಾಯವಿದೆ. ಅದನ್ನು ಬಿಜೆಪಿ ಸರ್ಕಾರ ಮುಂದುವರಿಸಿಕೊಂಡು ಹೋಗಬೇಕು. ಅದು ಬಿಟ್ಟು ತನ್ನಿಷ್ಟದಂತೆ ದಸರಾ ಆಚರಣೆ ಮಾಡುತ್ತಿರುವುದು ಖಂಡನೀಯ ಎಂದರು.
ಸರಳ ದಸರಾ ಬೇಡ, ಅದ್ದೂರಿ ದಸರಾ ಬೇಕು. ಈ ಬಾರಿಯ ದಸರಾ ಜನಸಾಮಾನ್ಯರ ದಸರಾವಾಗಿ ಆಚರಣೆಯಾಗುತ್ತಿಲ್ಲ. ಬಿಜೆಪಿ ಸರ್ಕಾರ ತನ್ನ ಇಷ್ಟದಂತೆ ಮಾಡುತ್ತಿದೆ. ಉಸ್ತುವಾರಿ ಸಚಿವರಿಗೆ ಮಾತ್ರ ದಸರಾ ಆಗುತ್ತಿದೆ. ಜಂಬೂಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಸೀಮಿತವಾಗಬಾರದು. ಬನ್ನಿಮಂಟಪದ ಜಂಬೂಸವಾರಿ ಮೆರವಣಿಗೆ ಮಾಡಿ ಜನರು ನೋಡಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

Join Whatsapp